‘ನಾವು ಬೆಂಗಳೂರು ಜಿಲ್ಲೆಯವರು, ಜಮೀನು ಮಾರಾಟ ಮಾಡಬೇಡಿ’
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಬೆಂಗಳೂರಿನ ರಾಜಕೀಯದಲ್ಲಿ ಸಂಚಲನವನ್ನು ಸೃಷ್ಟಿಸಿದ್ದಾರೆ. ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವ ಮಾತು ಈಗ ಮತ್ತೊಮ್ಮೆ ಹೇಳಿದ್ದಾರೆ. ಕನಕಪುರದಲ್ಲಿ ಇಂದು 'ಜನತಾ ದರ್ಶನ' ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸ್ಥಳೀಯರಿಗೆ ಮಹತ್ವದ ಮಾಹಿತಿ ನೀಡಿದ್ದಾರೆ.
ನಿಮ್ಮ ಜಮೀನುಗಳಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಬೆಲೆ ಬರುತ್ತದೆ. ಯಾವುದೇ ಕಾರಣಕ್ಕೂ ನಿಮ್ಮ ಭೂಮಿ ಮಾರಾಟ ಮಾಡಿಕೊಳ್ಳಬೇಡಿ. ಕನಕಪುರ, ಸಾತನೂರು, ಕೋಡಿಹಳ್ಳಿ ಸೇರಿ ದೊಡ್ಡ ಆಲಹಳ್ಳಿ ಇಲ್ಲೆಲ್ಲ ಮೊದಲು ಭೂಮಿಯ ಬೆಲೆ ಎಷ್ಟಿತ್ತು? ಈಗ ಎಷ್ಟಿದೆ? ಎಂದು ನೀವೆ ಅಂದಾಜು ಮಾಡಿ. ನಾನು ಏನೇನು ಮಾಡಲು ಸಾಧ್ಯ, ಆ ಕೆಲಸಗಳನ್ನ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ರಾಮನಗರ ಜಿಲ್ಲೆ, ಬೆಂಗಳೂರು ಭಾಗವಾಗುವುದು ಬಹುತೇಕ ಖಚಿತವಾಗಿದೆ.

ನಾವು ಬೆಂಗಳೂರು ಜಿಲ್ಲೆಯವರು...
ರಾಮನಗರ ಬೆಂಗಳೂರಿಗೆ ಸೇರುವ ವಿಚಾರ ಮಾತನಾಡಿದ್ದಕ್ಕೆ ಎಷ್ಟೊಂದೆಲ್ಲಾ ವಿವಾದವನ್ನ ಮಾಡಿದ್ದಾರೆ. ಬೆಂಗಳೂರು ಎಂದ ತಕ್ಷಣ ಏನೇನೋ ವ್ಯಾಖ್ಯಾನ ಪ್ರಾರಂಭವಾಯಿತು. ಇದನ್ನ ವಿರೋಧ ಮಾಡುವವರೆಲ್ಲ ಮಾಡಲಿ ನಾವು ಮಾತ್ರ ಬೆಂಗಳೂರು ಜಿಲ್ಲೆಯವರು. ಸೂಕ್ತ ಕಾಲ ಬರುತ್ತದೆ. ನಾನು ನಿಮ್ಮ ಗೌರವ ಉಳಿಸಲು ಏನು ಮಾಡಬೇಕೋ ಮಾಡುತ್ತೇನೆ ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ ಅಂತಾ ಡಿಸಿಎಂ ಡಿ.ಕೆ.ಶಿವಕುಮಾರ್ ಕನಕಪುರದಲ್ಲಿ ಹೇಳಿದ್ದಾರೆ.
ಸರ್ಕಾರಿ ಕಚೇರಿ ಎದುರು ಬೋರ್ಡ್!
ಹಾಗೇ ಈ ವೇಳೆ ಸರ್ಕಾರಿ ಕಚೇರಿಗಳ ಲಂಚದ ವಿಚಾರವನ್ನ ಪ್ರಸ್ತಾಪ ಮಾಡಿದ ಡಿಸಿಎಂ, ಗರಂ ಆದರು. ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಬೇಡಿ. ಲಂಚ ಕೇಳುವವರ ವಿರುದ್ಧ ದೂರು ನೀಡಲು ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಸಂಖ್ಯೆಯನ್ನ ಶೀಘ್ರದಲ್ಲೇ ಹಾಕಲಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ಇಂದು ನಡೆದ ಜನಸಂಪರ್ಕ ಸಭೆಯಲ್ಲಿ ಡಿಸಿಎಂ ಈ ಮಾತು ಹೇಳಿದರು.
ನೇರವಾಗಿ ಜಿಲ್ಲಾಧಿಕಾರಿಗೆ ದೂರು ನೀಡಿ
ಕಂದಾಯ, ಪಂಚಾಯಿತಿ ಅಧಿಕಾರಿ ಸೇರಿ ಯಾವುದೇ ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ಜಿಲ್ಲಾಧಿಕಾರಿಗಳ ದೂರವಾಣಿ ಮೂಲಕ ಸಂಪರ್ಕಿಸಿ ದೂರು ನೀಡಬಹುದು. ಜನರ ಅಹವಾಲುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ನಮ್ಮ ತಾಲೂಕಿನಲ್ಲಿ ಉತ್ತಮವಾದ ಆಡಳಿತ ನಡೆಯಬೇಕು. ಈ ಹಿಂದಿನ ತಹಸೀಲ್ದಾರ್ ಇದ್ದಾಗ ಒಂದಷ್ಟು ತೊಂದರೆಗಳು ಇದ್ದವು ಎಂದು ಡಿಸಿಎಂ ಹೇಳಿದರು.

ಡ್ರೋನ್ ಮೂಲಕ ಜಮೀನು ಸರ್ವೆ
ಕನಕಪುರ & ರಾಮನಗರ ಜಿಲ್ಲೆಯ ಎಲ್ಲ ಜಮೀನುಗಳಿಗೆ ಸೂಕ್ತ ದಾಖಲೆಗಳನ್ನ ಅಧಿಕಾರಿಗಳು ಮಾಡಿ ಕೊಡಬೇಕು. ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ ನಡೆಸಲಾಗುತ್ತೆ. ನಮ್ಮ ಜಿಲ್ಲೆಯಲ್ಲಿ ಈ ಕಾರ್ಯ ಉಯ್ಯಂಬಳ್ಳಿಯಿಂದ ಪ್ರಾರಂಭ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಜಮೀನಿನ ಪೋಡಿ & ಪಹಣಿ ದಾಖಲೆಗಳು ನಿಮ್ಮದೇ ಮೊಬೈಲ್ನಲ್ಲಿ ದೊರೆಯುತ್ತದೆ ಎಂದು ಇದೇ ವೇಳೆ ಡಿಸಿಎಂ ತಿಳಿಸಿದರು.
ಆಸ್ತಿಗಳ ಡಿಜೀಟಲೀಕರಣ ಸೌಲಭ್ಯ
ಈಗಾಗಲೇ ಭೂಮಿ ಯೋಜನೆ ಅಡಿ ಪಹಣಿ & ಪೋಡಿ ದಾಖಲೆ ಸಿಗುತ್ತಿವೆ. ದಿಶಾ ವೆಬ್ಸೈಟ್ ಮೂಲಕ ನಿಮ್ಮ ಜಮೀನಿನ ವಾಸ್ತವ ಸ್ಥಿತಿ ತಿಳಿಯುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದ ಡಿಸಿಎಂ, ಬೆಂಗಳೂರು ನಗರದಲ್ಲಿ ಆಸ್ತಿಗಳ ಡಿಜೀಟಲೀಕರಣ & ಮರು ಸರ್ವೇ ಕೆಲಸ ಪ್ರಗತಿಯಲ್ಲಿದೆ. ಕೆಲವೇ ದಿನಗಳಲ್ಲಿ ನನ್ನ ಕ್ಷೇತ್ರದಲ್ಲೂ, ಜನರಿಗೆ ಈ ಸೌಲಭ್ಯ ದೊರೆಯಲಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅರ್ಜಿ, ತೊಂದರೆಗಳನ್ನು ಶೀಘ್ರ ಬಗೆಹರಿಸಿಬೇಕು ಎಂದು ಸೂಚನೆ ನೀಡಿದ್ದೇನೆ ಅಂತಾ ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
1,16,290 ಮನೆಗಳಿಗೆ 'ಗೃಹಜ್ಯೋತಿ'
ಜನಸ್ಪಂದನ ಸಭೆಯಲ್ಲಿ ಅರ್ಜಿಗಳನ್ನ ನೀಡಿ ಸ್ವೀಕೃತಿ ದಾಖಲೆಗಳನ್ನ ಜನ ಪಡೆಯಬೇಕೆಂದರು ಡಿಸಿಎಂ. ಹಾಗೇ ಇಲ್ಲಿ ಸಲ್ಲಿಸಿದ ಅಹವಾಲುಗಳ ಪರಿಶೀಲನೆ ನಡೆಸಿ ಕಾನೂನಿನ ಚೌಕಟ್ಟಿನಲ್ಲಿ ಇತ್ಯರ್ಥ ಮಾಡಲಾಗುತ್ತೆ. ನಾನು ಸಹ ಕಾಲ ಕಾಲಕ್ಕೆ ಅರ್ಜಿಗಳ ಸ್ಥಿತಿಗತಿ ತಿಳಿದುಕೊಳ್ಳುತ್ತೇನೆ. ಕನಕಪುರ ತಾಲೂಕಿನಲ್ಲಿ, 1,16,290 ಮನೆಗಳು ಗೃಹಜ್ಯೋತಿ ಯೋಜನೆಯ ಲಾಭ ಪಡೆದಿವೆ 3,200 ಮನೆಗೆ ಈ ಸೌಲಭ್ಯ ತಾಂತ್ರಿಕ ಕಾರಣದಿಂದ ದೊರೆತಿಲ್ಲ. 5 ಗ್ಯಾರಂಟಿಗಳಲ್ಲಿ ಒಟ್ಟಾರೆ 4 ಗ್ಯಾರಂಟಿ ಸರ್ಕಾರ ಈಡೇರಿಸಿದ್ದು ಗೃಹಲಕ್ಷ್ಮಿ ಯೋಜನೆಯಡಿ ಒಂದಷ್ಟು ಜನರಿಗೆ ತಾಂತ್ರಿಕ ಕಾರಣಗಳಿಂದ ಹಣ ಬಂದಿಲ್ಲ ಎಂದರು.












Click it and Unblock the Notifications