ಬಿಜೆಪಿ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ಪ್ರಯತ್ನ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಜನವರಿ 24: ಲೋಕಸಮರದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು, ಈ ಹಿಂದೆ ಕಾಂಗ್ರೆಸ್ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನಗಳಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದೆ.
ಬಿಜೆಪಿ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಬುಧವಾರ ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್ ಮಾತನಾಡಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಾಯಕತ್ವ ಹಾಗೂ ಆತ್ಮವಿಶ್ವಾಸದ ಕೊರತೆ ಇದೆ. ಹೀಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈಗ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಸೆಳೆಯಲು ಬೆನ್ನು ಬಿದ್ದಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಜಗದೀಶ್ ಶೆಟ್ಟರ್ ಅವರನ್ನು ತಮ್ಮ ಪಕ್ಷಕ್ಕೆ ವಾಪಸ್ ಕರೆದೊಯ್ಯಲು ಬಿಜೆಪಿಯ ಅನೇಕ ನಾಯಕರು ಶೆಟ್ಟರ್ ಅವರಿಗೆ ದುಂಬಾಲು ಬೀಳುತ್ತಿದ್ದಾರೆ. ಅವರ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಅವರ ಬಳಿ ಅಭ್ಯರ್ಥಿಗಳಿಲ್ಲವೇ? ಅವರ ಪಕ್ಷ ಸಮರ್ಥವಾಗಿದ್ದರೆ ಚುನಾವಣೆ ಎದುರಿಸಲಿ ಎಂದು ಹೇಳಿದರು.
ನಾವು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಆದರೆ ಕುಮಾರಸ್ವಾಮಿ ಅವರು ತಮ್ಮ ಸರ್ಕಾರವನ್ನು ಕೆಡವಿ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದವರನ್ನು ಈಗ ತಬ್ಬಿಕೊಂಡು ರಾಜಕಾರಣ ಮಾಡುತ್ತಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಇದು ಎರಡೂ ಪಕ್ಷಗಳಲ್ಲಿನ ದುಸ್ಥಿತಿಗೆ ಸಾಕ್ಷಿ ಎಂದು ಹೇಳಿದರು.
ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದಾರೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ ಹಾಕುತ್ತಿರುವ ವಿಷಯ ಅವರ ಗಮನಕ್ಕೆ ತಂದಾಗ, ಇಬ್ಬರಿಗೂ ವಾಪಸ್ಸು ಹೋಗುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಸ್ಥಾನಮಾನ ಸಿಗದ ಕಾರಣ ಅವರು ಕಾಂಗ್ರೆಸ್ ಬಂದಿದ್ದಾರೆ ಮತ್ತು ತಮ್ಮ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಿ ಗೌರವಿಸಿದೆ ಎಂದು ಹೇಳಿದರು. ಲೋಕಸಭಾ ಟಿಕೆಟ್ ಸಿಕ್ಕರೂ ಸಂಸತ್ತಿಗೆ ಹೋಗಿ ಅವರು ಮಾಡುವುದಾದರೂ ಏನು? ಶಾಸಕರಾಗೇ ಕರ್ನಾಟಕದಲ್ಲಿ ಆರಾಮಾಗಿ ಇರುತ್ತಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.












Click it and Unblock the Notifications