ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್ 18: ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ನ್ಯಾಯಾಲಯದ ಆದೇಶ ಗೌರವಿಸಿ, ಅದನ್ನು ಪಾಲಿಸಿದ್ದೇವೆ. ಜೊತೆಗೆ ನಮ್ಮ ರೈತರ ಹಿತವನ್ನು ಕಾಯಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ನಾವು ಕಾನೂನು, ಸಂವಿಧಾನ ಹಾಗೂ ಕೋರ್ಟ್ ಆದೇಶಕ್ಕೆ ಗೌರವ ನೀಡಬೇಕು. ಈ ಹಿಂದೆ ಇದ್ದ ಸರ್ಕಾರಗಳು ನ್ಯಾಯಾಲಯದ ಆದೇಶಗಳನ್ನು ಇದೇ ರೀತಿ ಪಾಲಿಸಿವೆ. ನೀರು ಬಿಡುಗಡೆ ಮಾಡಿವೆ. ಆದರೆ ನಮ್ಮ ರೈತರ ಹಿತ ಕಾಪಾಡುವುದು ನಮ್ಮ ಮೇಲಿರುವ ದೊಡ್ಡ ಜವಾಬ್ದಾರಿ ಎಂದರು.

ನೀರು ಬಿಟ್ಟಿರುವುದನ್ನು ಪ್ರಶ್ನಿಸಿ ವಿರೋಧ ಮಾಡುತ್ತಾರೆ. ಅದು ಸಹಜ. ಸರ್ಕಾರ ಇಂತಹ ಸಮಯದಲ್ಲಿ ಸಮತೋಲಿತವಾಗಿ ಕೆಲಸ ಮಾಡಬೇಕಿದೆ. ಮಳೆ ಕಡಿಮೆ ಆಗಿರುವುದರಿಂದ ಕೃಷಿಗೆ ಮಾತ್ರವಲ್ಲ, ಕುಡಿಯಲು ನೀರಿಲ್ಲ. ಇದೇ ಕಾರಣಕ್ಕೆ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸಲು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಈ ಹಿಂದೆ ಇಂತಹ ಪರಿಸ್ಥಿತಿಯಲ್ಲಿ ಜನತಾ ದಳ ಹಾಗೂ ಬಿಜೆಪಿ ಸರ್ಕಾರಗಳು ಎಷ್ಟು ನೀರು ಬಿಟ್ಟಿದ್ದವು ಎಂಬ ಅಂಕಿ ಅಂಶವನ್ನು ನಾನು ನೀಡಬಲ್ಲೆ. ಆದರೆ ಈ ವಿಚಾರದಲ್ಲಿ ರಾಜಕೀಯ ಮಾಡಲು ಇಷ್ಟವಿಲ್ಲ. ಕಾವೇರಿ, ಮಹಾದಾಯಿ, ಕೃಷ್ಣಾ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆಯಲು ಆಲೋಚಿಸಿದ್ದೇವೆ. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ಅಧಿಕಾರದಲ್ಲಿದ್ದರೂ ಮಹಾದಾಯಿ, ಕೃಷ್ಣ ವಿಚಾರ ಇತ್ಯರ್ಥವಾಗಿಲ್ಲ. ಈ ಬಗ್ಗೆಯೂ ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಜನರಿಗೆ ಕೊಟ್ಟ ಮಾತಿನಂತೆ ಎನ್ಇಪಿ ರದ್ದು
ಎನ್ಇಪಿ ರದ್ದು ವಿಚಾರವಾಗಿ ಮಾತನಾಡಿದ ಅವರು, ನಾವು ಎನ್ಇಪಿ ಜಾರಿ ಆರಂಭದಲ್ಲೇ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರದ್ದು ಮಾಡುವುದಾಗಿ ಹೇಳಿದ್ದೆವು. ಈಗ ಆ ಬಗ್ಗೆ ಚಿಂತನೆ ಮಾಡಿದ್ದೇವೆ. ಬಿಜೆಪಿ ಸರ್ಕಾರ ಬಹಳ ತರಾತುರಿಯಲ್ಲಿ ಮೂಲಸೌಕರ್ಯ ಇಲ್ಲದೆ ಇದನ್ನು ಜಾರಿಗೆ ತಂದಿತ್ತು. ಈ ಎನ್ಇಪಿಯನ್ನು ಕೇವಲ ಕರ್ನಾಟಕದಲ್ಲಿ ಮಾತ್ರ ಯಾಕೆ ಜಾರಿ ಮಾಡಿದರು? ಬಿಜೆಪಿ ಸರ್ಕಾರ ಇರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಹರ್ಯಾಣ ಹಾಗೂ ಗುಜರಾತ್ ನಲ್ಲಿ ಯಾಕೆ ಮಾಡಲಿಲ್ಲ? ನಮ್ಮಲ್ಲಿರುವ ಶಿಕ್ಷಣ ವ್ಯವಸ್ಥೆ ಸರಿ ಇರಲಿಲ್ಲವೇ? ಎಂದು ಪ್ರಶ್ನಿಸಿದರು.
ಇನ್ನು ಇಡೀ ಪ್ರಪಂಚದಲ್ಲಿನ ಜನ ಬೆಂಗಳೂರನ್ನು ಐಟಿ, ಶಿಕ್ಷಣ ರಾಜಧಾನಿ, ಸಿಲಿಕಾನ್ ವ್ಯಾಲಿ ಎಂದು ಕರೆಯುತ್ತಾರೆ. ನಮ್ಮಲ್ಲಿರುವ ಶಿಕ್ಷಣ ಗುಣಮಟ್ಟ ಇದಕ್ಕೆ ಕಾರಣ. ಎನ್ಇಪಿಯಲ್ಲಿ ಉತ್ತಮ ಅಂಶ ಇದ್ದರೆ ಅದನ್ನು ಪರಿಗಣಿಸುತ್ತೇವೆ. ಇದು ಬಿಜೆಪಿಯ ರಾಜಕೀಯ ಅಜೆಂಡಾ. ಎನ್ಇಪಿ ಎಂದರೆ ನಾಗಪುರ ಶಿಕ್ಷಣ ನೀತಿ ಆಗಿದೆ. ಶಿಕ್ಷಣ ರಾಜ್ಯ ವ್ಯಾಪ್ತಿ ವಿಚಾರವೇ ಹೊರತು ಕೇಂದ್ರ ಸರ್ಕಾರದ ವಿಚಾರವಲ್ಲ ಎಂದು ತಿಳಿಸಿದರು.












Click it and Unblock the Notifications