ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
ಬೆಂಗಳೂರು, ಸೆಪ್ಟೆಂಬರ್ 30: ರಾಜ್ಯದಲ್ಲಿ ಮುಖ್ಯಮಂತ್ರಿ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗೃಹ ಸಚಿವರಾದ ಪರಮೇಶ್ವರ್ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಗೃಹ ಸಚಿವ ಜಿ ಪರಮೇಶ್ವರ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಭೇಟಿ ಬಗ್ಗೆ ಬಹಳಷ್ಟು ಊಹಾಪೋಹಗಳು ಹರಡಿದ್ದವು. ಆದರೆ, ಅವೆಲ್ಲದಕ್ಕೆ ಈಗ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ನಿಮಗೆ ರಾಜಕೀಯ ಬಿಟ್ಟು ಬೇರೆ ವಿಚಾರಗಳು ಕಾಣಿಸುವುದಿಲ್ಲವೇ?. ಜನರು ನಮ್ಮ ಮೇಲೆ ವಿಶ್ವಾಸವನ್ನಿಟ್ಟು ಅಧಿಕಾರ ಕೊಟ್ಟಿದ್ದಾರೆ, ಅವರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಡಿ ಕೆ ಶಿವಕುಮಾರ್ ಹೇಳಿದರು.

ನಾವೆಲ್ಲಾ ಪ್ರತಿದಿನ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ದಿಯಿದ್ದರೇ ತಾನೇ ರಾಜಕೀಯ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಎತ್ತಿನಹೊಳೆ ಕೆಲಸ ಮುಗಿಸಬೇಕು, ಪ್ರಣಾಳಿಕೆಗಳಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಪ್ರತಿದಿನ ಸಮಯ ಓಡುತ್ತಿರುತ್ತದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಅಧಿಕಾರಿಗಳು ಇಲ್ಲದೇ ಪರಮೇಶ್ವರ ಹಾಗೂ ನೀವು ಮಾತ್ರ ಒಟ್ಟಿಗೆ ಸೇರಿದ್ದೀರಿ ಎಂದು ಕೇಳಿದಾಗ, "ನಾವು 136 ಕಾಂಗ್ರೆಸ್ ಶಾಸಕರು ಒಟ್ಟಿಗೆ ಇದ್ದೇವೆ. ಇಲ್ಲಿ ಚರ್ಚೆ ಮಾಡುವಾಗ ಅಧಿಕಾರಿಗಳು ಬೇಕಾಗಿಲ್ಲ. ನಾಯಕರ ಹಿಂದೆ ಅಧಿಕಾರಿಗಳು ಬೇಕಾಗಿಲ್ಲ. ನಾವು ಆಲೋಚಿಸುತ್ತೇವೆ, ಚರ್ಚೆ ಮಾಡುತ್ತೇವೆ, ಅಭಿಪ್ರಾಯ ಕೇಳುತ್ತೇವೆ. ಮಾತನಾಡುವವರು ಹಾಗೂ ತೀರ್ಮಾನಿಸುವವರು ಒಬ್ಬರೇ ಎಂದು ಹೇಳಿದರು.
ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ದ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಅವರು. ಅದಕ್ಕೂ ನನಗೂ ಸಂಬಂಧವಿಲ್ಲವಎಂದು ಸ್ಪಷ್ಟಪಡಿಸಿದರು.












Click it and Unblock the Notifications