DK Shivakumar: ‘ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ..’
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಪಕ್ಷಾಂತರ ಪರ್ವ ಶುರುವಾಗಿದೆ. ಅದರಲ್ಲೂ ಈಗಾಗಲೇ ಸೋಲಿನ ಸುಳಿಯಲ್ಲಿ ಸಿಲುಕಿರುವ ಬಿಜಿಪಿಗೆ ಶಾಕ್ ಕೊಟ್ಟು, ಕಮಲ ಪಾಳಯದ ನಾಯಕರು ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ. ಆದ್ರೆ ಈ ಸಂದರ್ಭದಲ್ಲೇ ಕೆಪಿಸಿಸಿ ಅಧ್ಯಕ್ಷರು ಖಡಕ್ ಮಾತು ಹೇಳಿದ್ದಾರೆ. ಹಾಗಾದರೆ ಡಿಸಿಎಂ & ಕೆಪಿಸಿಸಿ ಅಧ್ಯಕ್ಷ ಡಿಕೆ ಶೀವಕುಮಾರ್ ಹೇಳಿದ್ದೇನು? ಮುಂದೆ ಓದಿ.
ಹೌದು, ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಅಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡಲ್ಲ. ಒಮ್ಮೆ ಹತ್ತಿದರೆ ಕಡೇ ತನಕವೂ ಇರುವಂತಹ ದೃಢ ನಿರ್ಧಾರವನ್ನು ಮಾಡಬೇಕು. ಬಸ್ ಹತ್ತುವುದು ಇಳಿಯುವುದು ಮಾಡಬಾರದು. ಹಾಗೆ ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟ ಸಂದೇಶ ಕೂಡ ರವಾನಿಸಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ, ಜೆಡಿಎಸ್ ನಾಯಕ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು.

ಕಾರ್ಯಕರ್ತರಿಗೆ ಖಡಕ್ ಸೂಚನೆ
ಹಾಗೇ ಡಿಸಿಎಂ ತಮ್ಮ ಮಾತು ಮುಂದುವರಿಸಿ, ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ ಹಾಗೂ ಜವಾಬ್ದಾರಿ ಮತ್ತು ಗೌರವ ಬರುತ್ತೆ. ಬರುವುದು, ಹೋಗುವುದು ಮಾಡಿದರೆ ನಾಯಕತ್ವಕ್ಕೂ ಧಕ್ಕೆಯಾಗುತ್ತೆ. ಈ ಮಾತನ್ನ ಇಂದು ಕಾಂಗ್ರೆಸ್ಗೆ ಸೇರ್ಪಡೆಯಾದ ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಹೇಳುತ್ತಿಲ್ಲ, ರಾಜ್ಯದ ಸಮಸ್ತ ಕಾರ್ಯಕರ್ತರು & ಮುಖಂಡರಿಗೂ ಕಿವಿ ಮಾತು ಹೇಳುತ್ತಿದ್ದೇನೆ ಎಂದಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್.
ಕಾಂಗ್ರೆಸ್ ಪಕ್ಷದ ರಕ್ತ ಸಾಮಾನ್ಯ...
ಇದೇ ವೇಳೆ ಹೊಸದಾಗಿ ಕಾಂಗ್ರೆಸ್ ಸೇರಿದವರಿಗೆ ಕಾಂಗ್ರೆಸ್ ಇತಿಹಾಸ ಹೇಳಿದರು ಡಿಸಿಎಂ. ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆಯುವುದೇ ಸೌಭಾಗ್ಯ, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಪಕ್ಷದ ಇತಿಹಾಸವೇ ದೇಶದ ಇತಿಹಾಸ. ಕಾಂಗ್ರೆಸ್ ಪಕ್ಷದ ರಕ್ತ ಸಾಮಾನ್ಯವಾದದ್ದಲ್ಲ ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷವಾಗಿದೆ. ಕಾಂಗ್ರೆಸ್ಸಿಗ ಆಗುವುದು ಎಂದರೆ ಅದು ಅಭಿಮಾನದ ಸಂಕೇತ. ಈ ರಾಷ್ಟ್ರ ಧ್ವಜ ಯಾರ ಹೆಗಲ ಮೇಲಿದೆ ಅಂದರೆ, ಅದು ಕಾಂಗ್ರೆಸ್ಸಿಗರ ಹೆಗಲ ಮೇಲೆ ಮಾತ್ರ. ನಾವು ಅಭಿಮಾನದಿಂದ ಕಾಂಗ್ರೆಸ್ಸಿಗರು ಎಂದು ಹೇಳಿಕೊಳ್ಳಬೇಕು ಅಂತಾ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ನಿಂದ ಅಭಿವೃದ್ಧಿ ಆಗುತ್ತಿದೆ!
ಈಗ ನಾವು ಕೊಡುತ್ತಿರುವ ಗ್ಯಾರಂಟಿ ಯೋಜನೆಗಳನ್ನ ಬಿಜೆಪಿ, ಜನತಾದಳ ಪಕ್ಷಗಳಿಗೆ ನೀಡಲು ಸಾಧ್ಯವಾಯಿತೇ? ಅರಣ್ಯ ಹಕ್ಕು, ಆದಿವಾಸಿಗಳ ಹಕ್ಕು ಸೇರಿದಂತೆ ಅನೇಕ ಕಾನೂನುಗಳನ್ನು ನೀಡಿದ್ದು ಕಾಂಗ್ರೆಸ್. ದೇಶದ ಎಲ್ಲಾ ಜಾತಿ & ಧರ್ಮಗಳ ಜನರ ಬದುಕಿನಲ್ಲೂ ಬದಲಾವಣೆ ತಂದಿದ್ದೇವೆ. ದಿವಂಗತ ಬಂಗಾರಪ್ಪ ಅವರು ಆಶ್ರಯ ಯೋಜನೆಗೆ ಹೊಸ ರೂಪ ನೀಡಿದರು, ಗ್ರಾಮ ದೇವತೆಗಳ ದೇವಾಲಯ ಜೀರ್ಣೋದ್ಧಾರಕ್ಕೆ ಆರಾಧನಾ ಯೋಜನೆ ಪ್ರಾರಂಭ ಮಾಡಿದ್ದೇ ಬಂಗಾರಪ್ಪ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ.
ಹಳಬರಿಗೆ ಮೊದಲ ಅವಕಾಶ ಸಿಗುತ್ತೆ
ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್ ಅವ್ರು ಬಿಜೆಪಿಗೆ ಹೋದರು, ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್ ಬಗೆಗಿನ ಒಲವು ಅವರನ್ನ ಮತ್ತೆ ಕರೆತಂದಿದೆ. ಎಲ್ಲಾ ನದಿ ಮತ್ತು ಸಮುದ್ರ ಸೇರುವ ರೀತಿಯೆ ಎಲ್ಲರೂ ಕಾಂಗ್ರೆಸ್ ಸೇರಲೇ ಬೇಕು ನಮ್ಮ ಪಕ್ಷ ಸಮುದ್ರ ಇದ್ದಂತೆ. ನಮ್ಮ ಪಕ್ಷ ಸೇರುವವರಿಗೆ ಯಾವುದೇ ಸ್ಥಾನಮಾನ ನೀಡ್ತೀವಿ ಎನ್ನುವ ಭರವಸೆಯನ್ನ ನೀಡಿಲ್ಲ. ಅವರ ಶಕ್ತಿ, ಸಂಘಟನಾ ಸಾಮರ್ಥ್ಯ ನೋಡಿ ಪರಿಗಣಿಸಲಾಗುತ್ತೆ. ಯಾರು ಪಕ್ಷದ ಬೆಳವಣಿಗೆಗೆ ತಳಮಟ್ಟದಿಂದ ಕೆಲಸ ಮಾಡಿರುತ್ತಾರೆ ಅವರಿಗೆ ಮೊದಲ ಆದ್ಯತೆ & ಹೊಸದಾಗಿ ಬರುವವರು ಹಳಬರನ್ನು ತಳ್ಳಿ ಮುಂದೆ ಬರಲು ಈ ಡಿ.ಕೆ.ಶಿವಕುಮಾರ್ ಅವಕಾಶ ನೀಡುವುದಿಲ್ಲ.
ಎಲ್ಲಾ ಕ್ಷೇತ್ರದಲ್ಲಿ ಪಕ್ಷ ಸಂಘಟಿಸಿ
ಕಾಂಗ್ರೆಸ್ ಪಕ್ಷ ತಾಯಿ ಇದ್ದಂತೆ ಮೊದಲು ತಾಯಿ ಆನಂತರ ನಾವೆಲ್ಲಾ, ನಾನು ಮತ್ತು ಸಿಎಂ ಸೇರಿ ತೀರ್ಮಾನ ಮಾಡಿದ್ದೇವೆ. ಇದು ಕೇವಲ ನನ್ನೊಬ್ಬನ ತೀರ್ಮಾನವಲ್ಲ. ಇಷ್ಟು ದೊಡ್ಡ ಮಟ್ಟದಲ್ಲಿ ಪಕ್ಷ ಸೇರ್ಪಡೆ ಆಗುತ್ತಿರುವುದನ್ನು ನೋಡಿ ಸಂತೋಷ ಆಗುತ್ತಿದೆ. ಈ ಬಾರಿಯ ವಿಧಾನಸಭೆ ಎಲೆಕ್ಷನ್ನಲ್ಲಿ ಕೆಲ ಕ್ಷೇತ್ರದಲ್ಲಿ ಸೋಷಿಯಲ್ ಎಂಜಿನಿಯರಿಂಗ್ ತಿಳಿದುಕೊಳ್ಳದೆ ಎಡವಟ್ಟಾಯಿತು. ಲೋಕಸಭೆಯಲ್ಲಿ ಸರಿಪಡಿಸಿಕೊಳ್ಳುತ್ತೇವೆ. ಎಲ್ಲಾ ನಾಯಕರು ತಮ್ಮ ಕ್ಷೇತ್ರಗಳಲ್ಲಿ ಇಂದಿನಿಂದಲೇ ಪಕ್ಷ ಸಂಘಟನೆಗೆ ಮುಂದಾಗಿ. ಗೃಹಲಕ್ಷ್ಮೀ ಯೋಜನೆ ಆ.30 ಕ್ಕೆ ಮೈಸೂರಿನಲ್ಲಿ ಯೋಜನೆ ಉದ್ಘಾಟನೆಯಾಗಲಿದೆ, ಇದಾದ ನಂತರ ಎಲ್ಲಾ ಜಿಲ್ಲಾ ಮಟ್ಟದ ಫಲಾನುಭವಿಗಳನ್ನು ಸೇರಿಸಿ ಕಾರ್ಯಕ್ರಮ ಮಾಡುವ ಉದ್ದೇಶವಿದೆ ಎಂದಿದ್ದಾರೆ ಡಿಸಿಎಂ.












Click it and Unblock the Notifications