ಸಿದ್ದರಾಮಯ್ಯಗೆ ಶಾಕ್: 'ಡಿಸಿಎಂ ಡಿಕೆ ಶಿವಕುಮಾರನ್ನು ಮುಖ್ಯಮಂತ್ರಿಯನ್ನಾಗಿಸುವುದು ಶತಸಿದ್ದ'
ಬೆಂಗಳೂರು, ಮೇ 06: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಕುರ್ಚಿ ಗುದ್ದಾಟ ಬಹು ದಿನಗಳಿಂದಲೂ ನಡೆಯುತ್ತಲೆ ಇದೆ. ಕಾಂಗ್ರೆಸ್ ಪಾಳಯದಲ್ಲೂ ಮುಖ್ಯಮಂತ್ರಿ ಬದಲಾವಣೆ ಕುರಿತು ಹಲವು ಕೈ ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ. ಕೈ ನಾಯಕರ ಬಣ ಬಡಿದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದು ಶತಸಿದ್ಧ ಎಂದು ನೊಣವಿನಕೆರೆ ಶ್ರೀ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ಪದೇ ಪದೇ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿರುತ್ತದೆ. ಇತ್ತೀಚಿಗೆ ಕೋಡಿ ಮಠದ ಶ್ರೀಗಳು ರಾಜ್ಯ ರಾಜಕಾರಣದ ಬಗ್ಗೆ ಸ್ಪೋಟಕವಾದ ಭವಿಷ್ಯ ನುಡಿದಿದ್ದರು. ಮುಂದಿನ ಸಂಕ್ರಾಂತಿಯವರಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ನೊಣವಿನಕೆರೆ ಶ್ರೀಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ಮಾಡುತ್ತೇವೆ ಎಂದು ಶಪಥ ಮಾಡಿದ್ದು, ತೀವ್ರ ಅಚ್ಚರಿಗೆ ಕಾರಣವಾಗಿದೆ.

ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸುವುದು ಶತಸಿದ್ದ.ಮುಂದಿನ ದಿನಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಿ, ಅವರಿಂದಲೇ ಲಕ್ಷ್ಮೀಶ್ವರ ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪಿಸುವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯರ ಸ್ವಾಮೀಜಿ ಹೇಳಿದರು.
ಕಳೆದ ವರ್ಷ ಅಕ್ಟೋಬರ್ನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸುವುದು ಶತಸಿದ್ದ ಎಂದು ಹೇಳಿದ್ದನ್ನೇ ಮತ್ತೊಮ್ಮೆ ಹೇಳಿರುವೆ. ವೀರಗಂಗಾಧರ ಜಗದ್ಗುರು ಮೇಲೆ ಅಪಾರ ಭಕ್ತಿ ನಂಬಿಕೆ ಹೊಂದಿರುವ ಡಿ ಕೆ ಶಿವಕುಮಾರ್ ಅವರು ನನೆಗುದಿಗೆ ಬಿದ್ದಿರುವ ತ್ರಿಕೋಟಿ ಲಿಂಗ ಸ್ಥಾಪನೆಗೆ ಬೇಕಾದ ಕೋಟ್ಯಂತರ ರೂಪಾಯಿ ಅನುದಾನ ಕಲ್ಪಿಸಿದ್ದಾರೆ. ಆದಷ್ಟು ಬೇಗ ಡಿ ಕೆ ಶಿವಕುಮಾರ ಮುಖ್ಯಮಂತ್ರಿ ಆಗುವರು ಎಂದು ನೊಣವಿನಕೆರೆ ಶ್ರೀ ಭವಿಷ್ಯ ಹೇಳಿದರು.
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಯೋಗ್ಯವಾದ ವ್ಯಕ್ತಿ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಸಂಕಲ್ಪವಿದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬುದು ನಮ್ಮ ಮಠದ ಆಶೀರ್ವಾದವೂ ಇದೆ. ಒಂದು ದಿನ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆಂದು ನಾವು ಹರಸುತ್ತಾ ಇದ್ದೇವೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ದಿನಗಳಲ್ಲಿ ಹೇಳೋಕೆ ಆಗುವುದಿಲ್ಲ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಎಲ್ಲರ ಸಂಕಲ್ಪವಾಗಿದೆ ಎಂದು ನೊಣವಿನಕೆರೆಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.












Click it and Unblock the Notifications