ಸಿಎಂ ಬದಲಾವಣೆ: ಡಿಸಿಎಂ ಡಿ ಕೆ ಶಿವಕುಮಾರ್ ಮಹತ್ವದ ಹೇಳಿಕೆ
ಸಿಂಧನೂರು, ಅಕ್ಟೋಬರ್ 09: ರಾಜ್ಯ ರಾಜಕೀಯದಲ್ಲಿ ಮುಡಾ ಹರಗಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಡ ಕೇಳಿ ಬರುತ್ತಿದೆ. ಮುಖ್ಯಮಂತ್ರಿ ರಾಜೀನಾಮೆ ಗುಸು ಗುಸು ಕೇಳಿಬರುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳು ಪೈಪೋಟಿಯನ್ನ ನಡೆಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಖಚಿತವೇ ಎಂಬ ಪ್ರಶ್ನಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸಿಂಧನೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ರೈತ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಹಾಗೂ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ನಾವು ಇರುತ್ತೇವೆ. ನಮ್ಮ ಸರ್ಕಾರವೂ ಇರುತ್ತದೆ ಎಂದು ತಿಳಿಸಿದರು.

ಜಾತಿಗಣತಿ ವಿಚಾರಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜಾತಿಗಣತಿ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ. ಈ ವಿಚಾರದಲ್ಲಿ ನಮ್ಮ ಪಕ್ಷ ಏನು ಹೇಳುತ್ತದೆಯೋ ಅದನ್ನೇ ನಾವು ಮಾಡುತ್ತೇವೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ಈ ತೀರ್ಪು ನಮಗೆ ದೊಡ್ಡ ಪಾಠವಾಗಿದ್ದು, ಮುಂದೆ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಪಕ್ಷ ಎಲ್ಲಿ ಎಡವಿದೆ ಎನ್ನುವುದನ್ನು ನಮ್ಮ ನಾಯಕರು ಪರಿಶೀಲಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮತದಾರ ತೀರ್ಪನ್ನು ಎಲ್ಲರೂ ಗೌರವಿಸಬೇಕು. ನಾವು ಚುನಾವಣೋತ್ತರ ಸಮೀಕ್ಷೆಯನ್ನು ನಂಬಿರಲಿಲ್ಲ. ಆದರೆ ಜನ ನಮಗೆ ಬಹುಮತ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ನಂಬಿಕೆ ವಿರುದ್ಧವಾಗಿ ಮತ ಬಂದಿದೆ. ಜಮ್ಮು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಬಹುಮತ ಬರಲಿದೆ ಎಂಬ ವಿಶ್ವಾಸವಿತ್ತು. ಅದರಂತೆ ಬಂದಿದೆ. ಬಹಳ ವರ್ಷಗಳ ನಂತರ ಕಣಿವೆ ರಾಜ್ಯದಲ್ಲಿ ಚುನಾವಣೆ ನಡೆದಿದ್ದು, ಮತದಾರರು ಪ್ರಜಾಪ್ರಭುತ್ವ ಉಳಿಸಿದ್ದಾರೆ. ಹರಿಯಾಣ ದೆಹಲಿಗೆ ಸಮೀಪದಲ್ಲಿರುವ, ಹೆಚ್ಚು ರೈತರಿರುವ ರಾಜ್ಯ. ಹೀಗಾಗಿ ಅಲ್ಲಿನ ತೀರ್ಪು ಹಿನ್ನಡೆಯಾಗಿದೆ. ಮತದಾರರ ತೀರ್ಪನ್ನು ನಾವು ಒಪ್ಪಬೇಕು ಎಂದರು.
ಪ್ರಧಾನಮಂತ್ರಿಗಳು ಮೂಡಾ ಪ್ರಕರಣ ಪ್ರಸ್ತಾಪ ಮಾಡಿದ ಕಾರಣಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬ ಕೆ.ಬಿ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, 'ಮುಡಾ ಹಗರಣ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಮುಡಾ ಹಗರಣಕ್ಕೂ ಮುಖ್ಯಮಂತ್ರಿಗೂ ಸಂಬಂಧ ಇಲ್ಲ. ಆ ಪ್ರಕರಣ ಕಾನೂನು ಪ್ರಕಾರ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ನಾನು ಪ್ರಮಾಣ ವಚನ ಸ್ವೀಕಾರ ಮಾಡುವಾಗ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನೀವು ಅನೇಕರು ಅಜ್ಜಯ್ಯ ಅವರನ್ನು ನೋಡದೆ ಇರಬಹುದು. ಆದರೆ ನನ್ನ ಬದುಕಿನ ಪ್ರತಿ ನಿತ್ಯ ಗಂಗಾಧರ ಅಜ್ಜಯ್ಯ ಅವರು ನನಗೆ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಅವರನ್ನು ಸ್ಮರಿಸಿ, ಧೈರ್ಯದಿಂದ ಕುಟುಂಬ ಸಮೇತ ಬದುಕುತ್ತಿದ್ದೇವೆ. ನನ್ನ ಕಷ್ಟ ಕಾಲದಲ್ಲಿ ಅಜ್ಜಯ್ಯ ಅವರು ನನ್ನನ್ನು ಕಾಪಾಡಿಕೊಂಡು ಬಂದಿದ್ದಾರೆ.
ಸರ್ವಧರ್ಮಗಳಲ್ಲಿ ಸಮನ್ವಯತೆ ಸಾಧಿಸಬೇಕು ಎಂಬುದು ಈ ಹಬ್ಬದ ಉದ್ದೇಶ. ಇಂತಹ ದೊಡ್ಡ ಸಾಧನೆಯನ್ನು ರಂಭಾಪುರಿ ಶ್ರೀಗಳು ಪ್ರತಿ ವರ್ಷ ನಡೆಸಿಕೊಂಡು ಹೋಗುತ್ತಿದ್ದಾರೆ. ರಾಜಕೀಯ ದೂರ ಇಟ್ಟು, ಧರ್ಮವನ್ನು ಉಳಿಸಿ, ಧರ್ಮದಿಂದ ಶಾಂತಿ ಸ್ಥಾಪಿಸಲು ರಂಭಾಪುರಿ ಶ್ರೀಗಳ ಪ್ರಯತ್ನಕ್ಕೆ ನಾವೆಲ್ಲರೂ ಶಕ್ತಿ ತುಂಬಬೇಕು. ನಮ್ಮ ಸಂಸ್ಕೃತಿ, ಧರ್ಮವನ್ನು ಉಳಿಸುವುದೇ ದಸರಾ. ಸರ್ವ ಜನಾಂಗದ ಶಾಂತಿಯ ತೋಟಕ್ಕಾಗಿ ರಂಭಾಪುರಿ ಶ್ರೀಗಳು ಈ ದಸರಾ ಆಚರಣೆ ಮಾಡುತ್ತಾ ಬಂದಿದ್ದಾರೆ.












Click it and Unblock the Notifications