ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಸ್ವಾಗತಿಸಿದ ಡಿಸಿಎಂ ಡಾ. ಅಶ್ವಥ್ ನಾರಾಯಣ!
ಬೆಂಗಳೂರು, ಜ. 18: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಾತುಗಳು ಉದ್ಧಟತನದಿಂದ ಕೂಡಿವೆ. ದೇಶದ ಏಕತೆ-ಸಮಗ್ರತೆಗೆ ಧಕ್ಕೆ ಉಂಟು ಮಾಡುವಂಥ ಇಂಥ ವ್ಯಕ್ತಿಯ ನೇತೃತ್ವದ ಸರಕಾರಕ್ಕೆ ನೀಡಿರುವ ಬೆಂಬಲವನ್ನು ಕಾಂಗ್ರೆಸ್ ಪಕ್ಷ ಕೂಡಲೇ ವಾಪಸ್ ಪಡೆಯಬೇಕು ಎಂದು ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಆಗ್ರಹಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ಗಾಂಧಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದ್ದಾರೆ. ಮುಖ್ಯಮಂತ್ರಿಯಂಥ ಸಾಂವಿಧಾನಿಕ, ಘನತೆಯುಳ್ಳ ಪದವಿಯಲ್ಲಿದ್ದು, ಅತ್ಯಂತ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿರುವ ಉದ್ಧವ್ ಠಾಕ್ರೆ ಮಾತುಗಳನ್ನು ಒಪ್ಪಲು ಸಾಧ್ಯವೇ ಇಲ್ಲ. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಎನ್ನುವುದು ಮುಗಿದ ಅಧ್ಯಾಯ ಎಂದು ಡಾ. ಅಶ್ವಥ್ ನಾರಾಯಣ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಏಕತೆಗೆ ಧಕ್ಕೆ ತರುವ ಕೆಲಸ
ಹಳೆಯ ವಿಷಯವನ್ನು ಕೆದಕುತ್ತ ದೇಶದ ಏಕತೆಗೆ ಧಕ್ಕೆ ತರುವಂಥ ಕೆಲಸವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡುತ್ತಿದ್ದಾರೆ. ಇದು ಅನಪೇಕ್ಷಿತ-ಅನಗತ್ಯ. ಕರ್ನಾಟಕ ಇಂಥ ಹೇಳಿಕೆಗಳಿಗೆ, ಬೆದರಿಕೆಗಳಿಗೆ ಬಗ್ಗುವ-ಹೆದರುವ ರಾಜ್ಯವಲ್ಲ. ನಮ್ಮ ಸಹಿಷ್ಣುತೆ, ಶಾಂತಿಪ್ರಿಯತೆಯನ್ನೇ ದೌರ್ಬಲ್ಯ ಎಂದು ಎಣಿಸಬಾರದು. ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಾದರೂ ಇನ್ನು ಗಡಿ ವಿಷಯವನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವ ಶಿವಸೇನೆಯಂಥ ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಡಿಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ!
ಸಿದ್ದರಾಮಯ್ಯ ಅವರ ನಡೆ ಸ್ವಾಗತಾರ್ಹ
ಕಾಂಗ್ರೆಸ್ ನಾಯಕರು, ಅದರಲ್ಲೂ ಸಿದ್ದರಾಮಯ್ಯ ಅವರಂಥ ನಾಯಕರು ಉದ್ಧವ್ ಠಾಕ್ರೆ ಹೇಳಿಕೆಯನ್ನು ಖಂಡನೆ ಮಾಡಿರುವುದು ಸ್ವಾಗತಾರ್ಹ. ಕೂಡಲೇ ಅವರೆಲ್ಲರೂ ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಿ ಶಿವಸೇನೆ ಸರಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವಂತೆ ಮಾಡಬೇಕು. ಆಗ ಮಾತ್ರ ಕರ್ನಾಟಕದ ಕುರಿತ ಕಾಂಗ್ರೆಸ್ ಪಕ್ಷದ ಬದ್ಧತೆ ಏನೆಂಬುದು ಜನರಿಗೆ ಗೊತ್ತಾಗುತ್ತದೆ ಎಂದು ಡಾ. ಅಶ್ವಥ್ ನಾರಾಯಣ ಅಭಿಪ್ರಾಯಟ್ಟಿದ್ದಾರೆ.
ನಾವು ಭಾರತೀಯರು
ಭಾರತ ಇವತ್ತು ಬದಲಾಗಿದೆ. ಸಂಘಟಿತವಾಗಿ ಹೊರಗಿನ ಶಕ್ತಿಗಳನ್ನು ಎದುರಿಸುತ್ತ ವೇಗವಾಗಿ ಪ್ರಗತಿ ಹೊಂದುತ್ತಿದೆ. ಇಂಥ ಸಂದರ್ಭದಲ್ಲಿ ಸಂಕುಚಿತ ವಿಷಯಗಳನ್ನೂ, ಅದರಲ್ಲೂ ಎಂದೋ ಮುಗಿದ ಅಧ್ಯಾಯವನ್ನು ಇಟ್ಟುಕೊಂಡು ನೆಮ್ಮದಿ ಕೆಡಿಸುವಂಥ ಕೆಲಸ ಮಾಡಬಾರದು. ಒಂದು ರಾಜ್ಯದ ಮುಖ್ಯಮಂತ್ರಿ ಪದವಿಯಲ್ಲಿ ಕೂತ ವ್ಯಕ್ತಿಗೆ ಇದು ಶೋಭೆಯಲ್ಲ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Recommended Video
ಉದ್ಧವ್ ಠಾಕ್ರೆ ಹೇಳಿದ್ದೇನು?
ಮರಾಠ ಹುತಾತ್ಮರ ದಿನ ಭಾನುವಾರ (ಜ.17) ರಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು, ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಕರ್ನಾಟಕದ ಪ್ರದೇಶಗಳನ್ನು ಮರಳಿ ರಾಜ್ಯಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕರ್ನಾಟಕಕ್ಕೆ ಸೇರ್ಪಡೆಯಾಗಿರುವ ಪ್ರದೇಶಗಳನ್ನು ಮರಳಿ ಪಡೆಯುವುದೇ ಮರಾಠಾ ಹುತಾತ್ಮರಿಗೆ ನಾವು ಸಲ್ಲಿಸುವ ನಿಜವಾದ ಗೌರವ.
ಮರಾಠಾ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿ ಹಾಗೂ ಇತರ ಪ್ರದೇಶಗಳು ಮತ್ತೆ ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕು. ಈ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಈ ಪ್ರದೇಶಗಳನ್ನು ಕರ್ನಾಟಕ ಆಕ್ರಮಿತ ಪ್ರದೇಶವೆಂದು ಘೋಷಿಸುತ್ತೇವೆ ಎಂದು ಟ್ವೀಟ್ ಮಾಡಿದ್ದರು.