ಬಿಎಸ್ವೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ ಆದೇಶ
ಬೆಂಗಳೂರು, ನವೆಂಬರ್, 24: ಮಾಜಿ ಸಿಎಂ, ಸಂಸದ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ರಾಜ್ಯಪಾಲರಾದ ಹಂಸರಾಜ್ ಭಾರದ್ವಾಜ್ ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ರದ್ದು ಮಾಡಿದೆ.
ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಪೀಠದ ಹಂಗಾಮಿ ಸಿಜೆ ಎಸ್ ಕೆ ಮುಖರ್ಜಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.[ಬೆಂಗಳೂರಲ್ಲಿ ಪೊಲೀಸರಿಂದ ಯಡಿಯೂರಪ್ಪ ಬಂಧನ]
ಭೂ ಹಗರಣ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಕಾರಣ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ಕೋರಿ ವಕೀಲರಾದ ಸಿರಾಜಿನ್ ಬಾಷಾ ಹಾಗೂ ಬಾಲರಾಜ್ ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಗೆ ಮನವಿ ಸಲ್ಲಿಕೆ ಮಾಡಿದ್ದರು. ಇದನ್ನು ರಾಜ್ಯಪಾಲರು ನಂತರ ಪುರಸ್ಕರಿಸಿದ್ದರು.
ಇದಾದ ಮೇಲೆ ರಾಜ್ಯದಲ್ಲಿ ಗಮನಾರ್ಹ ರಾಜಕೀಯ ಬೆಳವಣಿಗೆಗಳಿ ನಡೆದು ಹೋಗಿದ್ದವು. ಬಿಎಸ್ ವೈ ಅಧಿಕಾರ ಕಳೆದುಕೊಳ್ಳಬೇಕಾಗಿ ಬಂದಿತ್ತು. ರದ್ದು ಕೋರಿ ಬಿಎಸ್ ವೈ ಸಲ್ಲಿಕೆ ಮಾಡಿದ್ದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.[ಬಿಎಸ್ ವೈ ವಿರುದ್ಧ 13ನೇ ಎಫ್ ಐಆರ್]
ಯಡಿಯೂರಪ್ಪ ಅವರ ಮೇಲಿನ 5 ಪ್ರಕರಣಗಳು ರದ್ದಾದ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸದ್ಯ ನಿರಾಳವಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದ್ದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಿಂದ ಯಡಿಯೂರಪ್ಪ ಹೊರಬಂದಂತಾಗಿದೆ. ಇದು ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣ ಮತ್ತು ಬಿಜೆಪಿ ರಾಜಕಾರಣದ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.