Government Employee: ಓಪಿಎಸ್ ಜಾರಿಗೆ ಸರ್ಕಾರಕ್ಕೆ ಗಡುವು ಕೊಟ್ಟ ನೌಕರರು
ಬೆಂಗಳೂರು, ಅಕ್ಟೋಬರ್ 07: ಕರ್ನಾಟಕದ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಓಪಿಎಸ್) ಮರುಜಾರಿಗೊಳಿಸಬೇಕು ಎಂಬುದಾಗಿದೆ. ಈ ಬೇಡಿಕೆಯನ್ನು ಈಡೇರಿಸಲು ಎನ್ಪಿಎಸ್ ನೌಕರರ ಸಂಘ ಸರ್ಕಾರಕ್ಕೆ ಗಡುವು ನೀಡಿದೆ. ಆದ್ದರಿಂದ ಸರ್ಕಾರದ ಮುಂದಿನ ತೀರ್ಮಾನ ಕುತೂಹಲಕ್ಕೆ ಕಾರಣವಾಗಿದೆ.
ಭಾನುವಾರ ಶಾಂತಾರಾಮ ತೇಜ್ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ವಿಶೇಷ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ 2025ರ ಜನವರಿ 15ರೊಳಗೆ ಹಳೆ ಪಿಂಚಣಿ ಯೋಜನೆ ಯಥಾವತ್ ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ಗಡುವು ನೀಡಲಾಗಿದೆ. ಈ ಗಡುವಿನೊಳಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ ಆರಂಭಿಸಲಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಈಗಾಗಲೇ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ದಿನಾಂಕ 01/04/2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿರುವ ಎಲ್ಲಾ ನೌಕರರಿಗೆ ಕಡ್ಡಾಯವಾಗಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸೂಕ್ತ ಬದಲಾವಣೆ/ ಮಾರ್ಪಾಡು ಮಾಡಲು ಪರಿಶೀಲಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಆದರೆ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ವಿಶೇಷ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸೂಕ್ತ ಬದಲಾವಣೆ/ ಮಾರ್ಪಾಡು ಮಾಡಲು ಪರಿಶೀಲಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ವಿರೋಧಿಸಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.
ಸಂಘದ ಬೇಡಿಕೆ ಏನು?: ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ವಿಶೇಷ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎನ್ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸುತ್ತೇವೆ ಎಂದು ಘೋಷಣೆ ಮಾಡಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಚುನಾವಣೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ, ಸಮಿತಿ ರಚನೆ ಮಾಡಿದೆ.
ಸಮಿತಿ ರಚನೆ ಮಾಡಿ ಎನ್ಪಿಎಸ್ ಹೋರಾಟದ ದಿಕ್ಕು ತಪ್ಪಿಸಲಾಗುತ್ತಿದೆ. ಹಳೆ ಪಿಂಚಣಿ ಯೋಜನೆಯಲ್ಲಿ ಯಾವುದೇ ಬದಲಾವಣೆ ತರುವುದನ್ನು ನಾವು ಒಪ್ಪುವುದಿಲ್ಲ. ಅದನ್ನು ಯಥಾವತ್ ಜಾರಿಗೊಳಿಸಬೇಕು ಎಂದು ಸಭೆಯಲ್ಲಿ ಸರ್ಕಾರವನ್ನು ಆಗ್ರಹಿಸಲಾಯಿತು. ನಮ್ಮ ಸಂಘದ ಮೂಲ ಉದ್ದೇಶವೇ ಎನ್ಪಿಎಸ್ ರದ್ದುಗೊಳಿಸುವುದು ಆಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಆದರೆ ಕೆಲವು ಸಂಘಟನೆಗಳಿಗೆ ಎನ್ಪಿಎಸ್ ರದ್ದಾಗುವುದು ಬೇಕಿಲ್ಲ. ಆದ್ದರಿಂದ ಈ ವಿಷಯ ಜೀವಂತವಾಗಿಟ್ಟು ನೌಕರರ ಮತ ಸೆಳೆಯಲು ಹುನ್ನಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಮೂರು ಪ್ರಮುಖ ನಿರ್ಣಯಗಳು
* ಎನ್ಪಿಎಸ್ ಬದಲಾಗಿ ಓಪಿಎಸ್ ಜಾರಿ ಸಾಧ್ಯತೆ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರ ರಚನೆ ಮಾಡಿರುವ ಸಮಿತಿಯನ್ನು ರದ್ದುಗೊಳಿಸಬೇಕು.
* ರಾಜ್ಯ ಸರ್ಕಾರ 2025ರ ಜನವರಿ 15ರೊಳಗೆ ಎನ್ಪಿಎಸ್ ರದ್ದತಿ ಮಾಡಿ, ಓಪಿಎಸ್ ಮರು ಜಾರಿಗೊಳಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ.
* ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾ ಮತದಾರರ ಪಟ್ಟಿಯಿಂದ ಎನ್ಪಿಎಸ್ ನೌಕರರ ಸಂಘದ ಪದಾಧಿಕರಿಗಳನ್ನು ಕೈ ಬಿಟ್ಟು ಸಂಘಟನೆಯ ಸಂಘಟನೆಯ ಆತ್ಮಬಲ ಕುಗ್ಗಿಸುವ ಪ್ರಯತ್ನವನ್ನು ವಿರೋಧಿಸುವುದು.












Click it and Unblock the Notifications