Transport Employees Strike: ಡಿ. 31ರ ಮುಷ್ಕರದ ಬಗ್ಗೆ ಗೊಂದಲ, ಬಸ್ ಇರುತ್ತೋ?, ಇಲ್ವೋ?
ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಸರ್ಕಾರ ಸಾರಿಗೆ ನೌಕರರ ಮುಷ್ಕರ ತಡೆಯಲು ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ. ಆದರೆ ಡಿಸೆಂಬರ್ 31ರಿಂದ ಆರಂಭವಾಗಬೇಕಿರುವ ಅನಿರ್ದಿಷ್ಟಾವಧಿ ಮುಷ್ಕರದ ಕುರಿತು ಇನ್ನೂ ಗೊಂದಲವಿದೆ.
ಈಗಾಗಲೇ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಣೆ ಮಾಡಿದೆ. ಆದರೆ ಮುಷ್ಕರಕ್ಕೆ ಬೆಂಬಲ ನೀಡುವ ವಿಚಾರದಲ್ಲಿ, ಬಸ್ ಸೇವೆ ಇರಲಿದೆಯೇ?, ಇಲ್ಲವೇ ಎಂಬ ಬಗ್ಗೆ ಸಾರಿಗೆ ಒಕ್ಕೂಟದ ನೌಕರರ ಸಂಘಟನೆಗಳಲ್ಲಿಯೇ ಗೊಂದಲವಿದೆ. ಇದರಿಂದಾಗಿ ಜನರಿಗೆ ಸಹ ಮುಷ್ಕರದ ಕುರಿತು ಸ್ಪಷ್ಟ ಚಿತ್ರಣ ಸಿಗುತ್ತಿಲ್ಲ.

ಅನಿರ್ದಿಷ್ಟಾವಧಿ ಮುಷ್ಕರದ ಕುರಿತು ಬೆಳಗಾವಿಯ ಚಳಿಗಾಲದ ಅಧಿವೇಶನದ ಸಮಯದಲ್ಲಿಯೇ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ಆದರೆ ಸಾರಿಗೆ ನಿಮಗದ ಅಧಿಕಾರಿಗಳು ಮುಷ್ಕರ ತಡೆಯಲು ಎಸ್ಮಾ ಜಾರಿ ಕುರಿತು ಚಿಂತನೆ ನಡೆಸಿದ್ದಾರೆ. ಬಸ್ ಸೇವೆ ಎಂದಿನಂತೆ ಇರಲಿದೆ ಎಂದು ಜನರಿಗೆ ಭರವಸೆಯನ್ನು ನೀಡುತ್ತಿದ್ದಾರೆ.
ಮುಷ್ಕರಕ್ಕೆ ಬೆಂಬಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ 4 ನಿಗಮಗಳ ಸಂಘಟನೆಗಳ ಒಕ್ಕೂಟ ಬೆಂಬಲ ನೀಡದಿರಲು ತೀರ್ಮಾನಿಸಿದೆ. ಆದ್ದರಿಂದ ಮುಷ್ಕರದ ವಿಚಾರದಲ್ಲಿ ಸಂಘಟನೆಗಳಲ್ಲಿಯೇ ಒಮ್ಮತವಿಲ್ಲ.
ಕೆಎಸ್ಆರ್ಟಿಸಿ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, "ನೌಕರರ ಬೇಡಿಕೆಯ ಕುರಿತು ಅಭಿಪ್ರಾಯ ಸಂಗ್ರಹಿಸಿಲ್ಲ. ಅಲ್ಲದೇ ಇನ್ನಿತರ ಕಾರಣಗಳಿಂದಾಗಿ ಈ ಮುಷ್ಕರಕ್ಕೆ ಒಕ್ಕೂಟ ಬೆಂಬಲ ನೀಡುವುದಿಲ್ಲ" ಎಂದು ಹೇಳಿದರು.
ಅಲ್ಲದೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದ್ದರೂ ಸಹ ಡಿಸೆಂಬರ್ 31ರಿಂದ ಬಸ್ ಸೇವೆ ಎಂದಿನಂತೆ ಇರಲಿದೆ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ. ಆದ್ದರಿಂದ ಮುಷ್ಕರ ನಡೆಯಲಿದೆಯೇ?, ಇಲ್ಲವೇ ಎಂಬುದು ಪ್ರಶ್ನೆಯಾಗಿದೆ.
ನೌಕರರ ಬೇಡಿಕೆಗಳು
* 01.01.2020 ರಿಂದ 38 ತಿಂಗಳ ವೇತನ ಹಿಂಬಾಕಿ ಪಾವತಿಸಲೇಬೇಕು
* 01.01.2024 ರಿಂದ ಹೊಸ ವೇತನ ಪರಿಷ್ಕರಣೆ ಹಾಗೂ ಇತರ ಬೇಡಿಕೆ ಇತ್ಯರ್ಥಪಡಿಸಬೇಕು
* ನಿವೃತ್ತರಾದ ನೌಕರರಿಗೆ 27.06.2024ರ ಸುತ್ತೋಲೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು
ಮುಷ್ಕರಕ್ಕೆ ಕರೆ ಕೊಟ್ಟಿರುವ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಈಗಾಗಲೇ ಸಾರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ಮಾತುಕತೆ ವಿಫಲವಾಗಿತ್ತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಆದೇಶಿಸಿದ್ದಾರೆ. ಆದರೆ ಮುಷ್ಕರ ವಾಪಸ್ ಪಡೆಯುವ ಕುರಿತು ಇನ್ನೂ ಸಹ ಕ್ರಿಯಾ ಸಮಿತಿ ಯಾವುದೇ ಘೋಷಣೆ ಮಾಡಿಲ್ಲ.
ಮುಷ್ಕರಕ್ಕೆ ಕರೆ ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಡಿಯಲ್ಲಿ ಕೆ.ಎಸ್.ಆರ್.ಟಿ.ಸಿ, ಸ್ಟಾಫ್ & ವರ್ಕರ್ಸ್ ಫೆಡರೇಷನ್ (ಎ.ಐ.ಟಿ.ಯು.ಸಿ.), ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿ.ಐ.ಟಿ.ಯು.), ಕೆ.ಎಸ್.ಆರ್.ಟಿ.ಸಿ. ಪ.ಜಾ. ಮತ್ತು ಪ.ಪಂ. ನೌಕರರ ಸಂಘ (40/ 78), ಕ.ರಾ.ರ.ಸಾ.ಸಂಸ್ಥೆ ಪ.ಜಾ. /ಪ.ಪಂ.ಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) (671/ 2001), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ (ರಿ) ಸಂಘಟನೆಗಳಿವೆ.
ಸಮಿತಿ ತನ್ನ ಪ್ರಕಟಣೆಯಲ್ಲಿ ನಮ್ಮ ನ್ಯಾಯಯುತ ಬೇಡಿಕೆಗಳ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿರುವ ರಾಜ್ಯ ಸರ್ಕಾರವನ್ನು ಎಚ್ಚರಿಸಿ ನಮ್ಮ ಬೇಡಿಕೆಗಳನ್ನು ಪಡೆಯಲು ಅನಿರ್ಧಿಷ್ಟ ಮುಷ್ಕರ ಬಿಟ್ಟರೆ ನಮಗೆ ಅನ್ಯ ಮಾರ್ಗವಿಲ್ಲ ಎಂದು ಹೇಳಿದೆ.
ಯಾವುದೇ ದಿಕ್ಕು ತಪ್ಪಿಸುವ ಶಕ್ತಿಗಳ ಅಪಪ್ರಚಾರ, ಕುತಂತ್ರಗಳಿಗೆ ಬಲಿಯಾಗದೆ, ಐಕ್ಯತೆಯಿಂದ ಮುಷ್ಕರವನ್ನು ಯಶಸ್ವಿಗೊಳಿಸಿ ಸರ್ಕಾರಕ್ಕೆ ಹಾಗೂ ಆಡಳಿತ ವರ್ಗಕ್ಕೆ ಸೂಕ್ತ ಸಂದೇಶ ರವಾನಿಸಬೇಕೆಂದು ಕರೆ ಕೊಟ್ಟಿದೆ.












Click it and Unblock the Notifications