ಪ್ರಾಥಮಿಕ ಶಾಲೆ ಆರಂಭಿಸುವ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಹೇಳಿಕೆ!
ಬೆಂಗಳೂರು, ಅ. 13: ಕೊರೊನಾ ವೈರಸ್ ಮೂರನೇ ಅಲೆಯ ಆತಂಕದ ಮಧ್ಯೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ ಎಂಬ ಮಾಹಿತಿ ಬಂದಿದೆ. ಅದರೊಂದಿಗೆ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸುವ ಬಗ್ಗೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೊರೊನಾ ವೈರಸ್ನಿಂದ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಂಡಿವೆ. ಹೀಗಾಗಿ ಶಾಲೆಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಆದರೆ ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆ ಆಗಬಹುದು ಎಂಬ ಎಚ್ಚರಿಕೆಯನ್ನೂ ಈಗಾಗಲೇ ಕೋವಿಡ್ ತಜ್ಞರು ಕೊಟ್ಟಿದ್ದಾರೆ. ಈಗಾಗಲೇ ಪ್ರೌಢ ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ 18 ಮೀರಿದವರಿಗೆ ಕೋವಿಡ್ ಲಸಿಕೆ ಹಾಕಿಸುತ್ತಿದೆ.
ಅದೇ ರೀತಿ ಮಕ್ಕಳಿಗೂ ಲಸಿಕೆ ಹಾಕಿಸುವ ಬಗ್ಗೆ ಚಿಂತನೆ ನಡೆದಿದೆ. ಶಾಲೆಗಳನ್ನು ಆರಂಭಿಸುವ ಮೊದಲು ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸುವುದು ಸೂಕ್ತ ಎನ್ನಲಾಗುತ್ತಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಿಎಂ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಆರಂಭ ಯಾವಾಗ?
ಕೊರೊನಾ ಮೂರನೇ ಅಲೆಯ ಆತಂಕದ ಮಧ್ಯೆ ರಾಜ್ಯದಲ್ಲಿ ಆರರಿಂದ ಮುಂದಿನ ತರಗತಿಗಳನ್ನು ಆರಂಭಿಸಲಾಗಿದೆ. ಆದರೆ ಕೊರೊನಾ ಮೂರನೇ ಅಲೆಯ ಆತಂಕವಿರುವುದರಿಂದ ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ಕೊಟ್ಟಿಲ್ಲ.
ಈಗ ಆ ತರಗತಿಗಳನ್ನೂ ಆರಂಭಿಸಲು ಸರ್ಕಾರ ತೀರ್ಮಾನ ಮಾಡಿದೆ. ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, "ದಸರಾ ಹಬ್ಬದ ಬಳಿಕ ಕೋವಿಡ್ ತಜ್ಞರ ಸಭೆಯನ್ನು ಕರೆದಿದ್ದೇವೆ. ಆ ಸಭೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ" ಎಂದಿದ್ದಾರೆ. ಜೊತೆಗೆ ಮಕ್ಕಳಿಗೆ ಕೋವಿಡ್ ಲಸಿಕೆ ಬಗ್ಗೆಯೂ ಮಾತನಾಡಿದ್ದಾರೆ.
ಶಾಲಾ ಮಕ್ಕಳಿಗೆ ಕೋವಿಡ್ ಲಸಿಕೆ
"ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ ನಿರೀಕ್ಷೆಯಲ್ಲಿದ್ದೇವೆ. ಮಕ್ಕಳು ಮತ್ತು ಹದಿ ಹರೆಯದವರಿಗೆ ಕೋವಿಡ್ ಲಸಿಕೆ ಪರೀಕ್ಷೆ ಕೊನೆಯ ಹಂತ ತಲುಪಿದೆ. ಅದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಲಸಿಕೆ ಹಾಕಲಾಗುವುದು" ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
"ಉಳಿದಂತೆ ಈಗಾಗಲೇ ವಯಸ್ಕರಿಗೆ ಕೋವಿಡ್ ಲಸಿಕೆ ಹಾಕಿಸುವ ಕಾರ್ಯಕ್ರಮದಲ್ಲಿ ಕರ್ನಾಟಕ ಮುಂದಿದೆ. ರಾಜ್ಯದಲ್ಲಿ ಸುಮಾರು ಶೇಕಡಾ 82 ರಷ್ಟು ಮೊದಲನೇ ಡೋಸ್ ಹಾಗೂ ಶೇ. 37 ರಷ್ಟು ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ಜನರಿಗೆ ಹಾಕಲಾಗಿದೆ. ಇದೇ ಡಿಸೆಂಬರ್ ಅಂತ್ಯಕ್ಕೆ ಶೇ. 90 ರಷ್ಟು ಮೊದಲನೇ ಹಾಗೂ ಶೇ. 75 ರಷ್ಟು ಎರಡನೇ ಡೋಸ್ ಲಸಿಕೆಯನ್ನು ಹಾಕುವ ಗುರಿಯನ್ನು ಇಟ್ಟುಕೊಂಡಿದ್ದೇವೆ" ಎಂದು ಬೊಮ್ಮಾಯಿ ಹೇಳಿದ್ದಾರೆ.
ಕೋವಿಡ್ ನಿರ್ಬಂಧ ಸಡಿಲುಗೊಳಿಸುವ ಬಗ್ಗೆ
ಅದರೊಂದಿಗೆ ರಾಜ್ಯದ ಗಡಿ ಭಾಗಗಳಲ್ಲಿ ಈಗಿರುವ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಹಬ್ಬದ ಬಳಿಕ ಕರೆಯಲಾಗಿರುವ ಕೋವಿಡ್ ತಜ್ಞರ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕರ್ನಾಟಕಕ್ಕೆ ಹೊಂದಿಕೊಂಡಿರುವ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರು ಪರಿಶೀಲಿಸುತ್ತಿದ್ದಾರೆ. ದಸರಾ ಹಬ್ಬದ ಬಳಿಕ ಗಡಿ ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧ ಸಡಿಲ ಮಾಡುವ ಕುರಿತು ತೀರ್ಮಾನಿಸುತ್ತೇವೆ ಎಂದಿದ್ದಾರೆ.
Recommended Video
ಉದ್ಯಮಿಗಳೊಂದಿಗೆ ಸಿಎಂ ಚಾಯ್ ಪೇ ಚರ್ಚಾ!
ಮಂಗಳೂರು ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು. ಈ ವೇಳೆ ದೇವಳದ ವತಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಗಿದೆ. ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಜೊತೆಯಲ್ಲಿದ್ದರು. ಜೊತೆಗೆ ಉಡುಪಿಯ ಕುಂತಲನಗರದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘ ಆಯೋಜಿಸಿದ್ದ 'ಉದ್ಯಮಿಗಳೊಂದಿಗೆ ಚಾಯ್ ಪೆ ಚರ್ಚಾ' ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದ್ದರು.