ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ!
ಬೆಂಗಳೂರು, ಸೆ. 24: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಭೂಸುಧಾರಣಾ ತಿದ್ದುಪಡಿ ವಿಧೇಯಕ, ಎಪಿಎಂಸಿ ತಿದ್ದುಪಡಿ ವಿಧೇಯಕಗಳು ನಿನ್ನೆ (ಸೆ. 23) ವಿಧಾನಸಭೆಯಲ್ಲಿ ಮಂಡನೆ ಆಗಿವೆ. ಇವತ್ತು ಎರಡೂ ವಿಧೇಯಕಗಳಿಗೆ ಅಂಗೀಕಾರ ಪಡೆದುಕೊಳ್ಳಲು ಸರ್ಕಾರ ಪ್ರಯತ್ನಿಸಲಿದೆ. ಅದಕ್ಕೂ ಮೊದಲು ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ಈ ಬಗ್ಗೆ ಸಭೆಯ ಬಳಿಕ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.
ನಾವು ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನ ಮಾಡಿದ್ದೇವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಸಿಎಂ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ, ಮೊಮ್ಮಗ ಹಾಗೂ ಅಳಿಯ ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ವೈದ್ಯಕೀಯ ಖರೀದಿ ಹಗರಣ, ಲ್ಯಾಪ್ಟಾಪ್ ಹಾಗೂ ವರ್ಗಾವಣೆ ದಂಧೆ ನಡೆಯುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಆರ್ಥಿಕತೆ ಅದೋಗತಿಗೆ ಹೋಗುತ್ತಿದೆ. ಭೂಸುಧಾರಣಾ ಕಾಯಿದೆ, ಎಪಿಎಂಸಿ ಕಾಯಿದೆ ಹಾಗೂ ಕಾರ್ಮಿಕ ಕಾಯಿದೆಗಳಿಗೆ ತಿದ್ದುಪಡಿ ತಂದು ಜನವಿರೋಧಿ ನಡೆಯಲ್ಲಿ ತೊಡಗಿದ್ದಾರೆ.
ಒಂದು ಲಕ್ಷ ಕೋಟಿ ರೂ. ಸಾಲ
ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ನಾಲ್ಕು ತಿಂಗಳುಗಳಲ್ಲಿ ರಾಜ್ಯ ಅಧೋಗತಿಗೆ ಹೋಗಿದೆ. ಕಳೆದ ಒಂದು ವರ್ಷದಲ್ಲಿ ಒಂದು ಲಕ್ಷ ಕೋಟಿ ರೂಪಾಯಿಗಳಷ್ಟು ಸಾಲ ಮಾಡಿದ್ದಾರೆ.
ವಿಧಾನಸಭೆ ಕಲಾಪ; 3 ವಿಧೇಯಕಗಳು ಅಂಗೀಕಾರ
ಹೀಗಾಗಿ ಸಿಎಂ ಯಡಿಯೂರಪ್ಪ ಅವರ ಮಂತ್ರಿ ಮಂಡಲ ವಿಶ್ವಾಸ ಕಳೆದುಕೊಂಡಿದೆ. ಅವಿಶ್ವಾಸ ಮಂಡನೆಯ ಬಗ್ಗೆ ಈಗಾಗಲೇ ನೋಟಿಸ್ ಕೊಟ್ಟಿದ್ದೇವೆ. ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುತ್ತೇವೆ ಎಂದು ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಆರೋಪಿಸಿದ್ದಾರೆ.
ಜೆಡಿಎಸ್ ಶಾಸಕರ ವೈಯಕ್ತಿಕ ಬೆಂಬಲ
ಅವಿಶ್ವಾಸ ನಿರ್ಣಯ ಮಂಡನೆ ಕುರಿತು ಯಾವುದೇ ತೀರ್ಮಾನವನ್ನು ನಮ್ಮ ಪಕ್ಷ ಕೈಗೊಂಡಿಲ್ಲ. ಆದರೆ ವೈಯಕ್ತಿಕವಾಗಿ ಅವಿಶ್ವಾಸ ನಿರ್ಣಯಕ್ಕೆ ನನ್ನ ಬೆಂಬಲವಿದೆ ಎಂದು ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ವಿಧಾನಸೌಧದಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಎಪಿಎಂಸಿ ಹಾಗೂ ಭೂ ಸುಧಾರಣಾ ಕಾಯಿದೆಗಳಿಗೆ ತಿದ್ದುಪಡಿ ತರುವುದರ ವಿರುದ್ಧ ನಾವಿದ್ದೇವೆ. ಎರಡೂ ಕಾಯಿದೆಗಳಿಗೆ ತಿದ್ದುಪಡಿಯನ್ನು ವಾಪಸ್ ತೆಗೆದುಕೊಳ್ಳುವಂತೆ ನಮ್ಮ ಒತ್ತಾಯವಿದೆ. ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಮಂಡಿಸುತ್ತಿರುವ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಕೊಡುವುದರ ಬಗ್ಗೆ ಬಗ್ಗೆ ನಮ್ಮ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗದುಕೊಳ್ಳುತ್ತಾರೆ. ಆದರೆ ಅವಿಶ್ವಾಸ ನಿರ್ಣಯ ಮಂಡನೆಗೆ ವೈಯಕ್ತಿಕವಾಗಿ ನನ್ನ ಬೆಂಬಲ ಇದೆ ಎಂದು ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ.
ಎಪಿಸಿಎಂಸಿ ಕಾಯಿದೆಯಿಂದ ರೈತರಿಗೆ ನಷ್ಠವಿಲ್ಲ
ಇನ್ನು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಕುರಿತು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ವಿಧಾನಸೌಧದಲ್ಲಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದವರು ತಿದ್ದುಪಡಿ ವಿಧೇಯಕಗಳನ್ನು ವಿರೋಧಿಸಲಿ ಬಿಡಿ. ಎಪಿಎಂಸಿ ಕಾಯಿದೆಯಿಂದ ಯಾವ ರೈತರಿಗೂ ನಷ್ಟ ಇಲ್ಲ. ನಮ್ಮ ಬೆಳೆ ನಮ್ಮ ಹಕ್ಕು ಎಂದು ರೈತ ಎಲ್ಲಿಬೇಕಾದರೂ ಬೆಳೆ ಮಾರಾಟ ಮಾಡಬಹುದು.
ರೈತರು ತಮ್ಮ ಬೆಳೆ ಮನೆಲ್ಲಾದರೂ ಮಾರಿಕೊಳ್ಳಲಿ, ಬೀದಿಯಲ್ಲಾದರೂ ಮಾರಿಕೊಳ್ಳಲಿ. ಮೊದಲು ಎಪಿಎಂಸಿ ಅಧಿಕಾರಿಗಳು ಬೇರೆ ಕಡೆ ಮಾರಿದರೆ ದಂಡ ಹಾಕ್ತಿದ್ರು. ಈಗ ದಂಡ ಹಾಕುವಹಾಗಿಲ್ಲ. ರೈತರಿಗೆ ಹೇಗೆ ಅನ್ಯಾಯವಾಗುತ್ತದೆ, ಯಾವ ರೀತಿ ಆಗುತ್ತಿದೆ ಎಂಬುದನ್ನು ಕಾಂಗ್ರೆಸ್ ನಾಕಯರು ಹೇಳಲಿ. ಕಾಂಗ್ರೆಸ್ ಪಕ್ಷದವರಿಗೆ ಹೆದರಿಕೊಂಡು ಕೂರೋಕೆ ಆಗುತ್ತಾ? ಅವರು ಹೇಳಿದಂಗೆ ಕೇಳಿಕೊಂಡು ಸರ್ಕಾರ ನಡೆಸೋಕೆ ಆಗಲ್ಲ ಎಂದು ವಿಧಾನಸೌಧದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ಕೊಟ್ಟಿದ್ದಾರೆ.
Recommended Video
ವಿಶ್ವಾಸ ಕಳೆದುಕೊಂಡವರಿಂದ ಅವಿಶ್ವಾಸ
ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಕಾಂಗ್ರೆಸ್ ಪಕ್ಷದ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ವಿಧಾನಸೌಧದಲ್ಲಿ ಮಾತನಾಡಿ, ಜನರ ವಿಶ್ವಾಸ ಕಳೆದುಕೊಂಡವರು ಅವಿಶ್ವಾಸ ನಿರ್ಣಯ ಹೇಗೆ ಮಂಡಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿ ಅವರು ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರೂ ನಾವು ನಿರ್ಣಯದ ವಿರುದ್ಧ ಗೆಲ್ಲುತ್ತೇವೆ ಎಂದಿದ್ದಾರೆ.