ಸಿಎಂ ವಿರುದ್ಧ ಶಾಸಕರ ಅವಹೇಳನಕಾರಿ ಹೇಳಿಕೆ: ಸಿಡಿ ಒದಗಿಸಲು ಸೂಚನೆ
ಬೆಂಗಳೂರು, ನವೆಂಬರ್ 20: "ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ" ಎಂಬ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ.
ಇದೀಗ ಅವರ ಹೇಳಿಕೆ ವಿವಾದ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯ ಶಾಸಕ ಹರೀಶ್ ಪೂಂಜಾ ನೀಡಿರುವ ಹೇಳಿಕೆಯ ವಿಡಿಯೋ ಸಿಡಿಯನ್ನು ಒದಗಿಸುವಂತೆ ಪ್ರಕರಣದ ದೂರುದಾರರಾದ ನಮಿತಾ ಕೆ. ಪೂಜಾರಿ ಅವರಿಗೆ ಸೂಚಿಸಿದೆ. ಹಾಗಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಇದೀಗ ದೂರುದಾರರು ಸಿಡಿ ಸಲ್ಲಿಸಬೇಕು, ಅದನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಶಾಸಕರ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ನಿರ್ಧರಿಸುತ್ತದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಸೂಚನೆ ನೀಡಿದೆ.
ರಾಜಕೀಯ ಪ್ರೇರಿತ: ಅರ್ಜಿದಾರರ ಪರ ವಕೀಲರು ಶಾಸಕ ಹರೀಶ್ ಪೂಂಜಾ ನೀಡಿದ ಹೇಳಿಕೆಯಿಂದ ಯಾವುದೇ ಹಿಂಸಾಚಾರ ಅಥವಾ ಶಾಂತಿಭಂಗ, ಕೋಮುಸೌಹಾರ್ದತೆಕ್ಕೆ ಧಕ್ಕೆಯಾದ ಪ್ರಕರಣ ನಡೆದಿಲ್ಲ. ರಾಜಕೀಯ ಪ್ರೇರಿತ, ದುರುದ್ದೇಶ ಮತ್ತು ದ್ವೇಷಭಾವನೆಯಿಂದ ದೂರು ದಾಖಲಿಸಿದ್ದು, ಅದನ್ನು ರದ್ದುಪಡಿಸಬೇಕು ಎಂದು ಕೋರಿದರು.
ಅದನ್ನು ಆಕ್ಷೇಪಿಸಿದ ದೂರುದಾರೆ ಪರ ವಕೀಲರು ಹಾಜರಾಗಿ, ಅರ್ಜಿದಾರರು ನೀಡಿರುವ ಹೇಳಿಕೆ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಿದೆ. ಶಾಸಕ ಹರೀಶ್ ಪೂಂಜಾ ನೀಡಿರುವ ಹೇಳಿಕೆಯ ವಿಡಿಯೋ ಸಿಡಿ ತಮ್ಮ ಬಳಿ ಇದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಮಯಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿ ಒಪ್ಪಿದ ನ್ಯಾಯಪೀಠ, ಸಿಡಿ ಒದಗಿಸಲು ಕಾಲಾವಕಾಶ ನೀಡಿ ವಿಚಾರಣೆಯನ್ನು ಡಿ.8ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜಾ ಜಯ ಸಾಧಿಸಿದ್ದರು. ಇದರಿಂದ ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನ ಜೈನ್ ಪಟೇಲ್ ಸಭಾಂಗಣದಲ್ಲಿ 2023ರ ಮೇ 22ರಂದು ಬಿಜೆಪಿ ಪಕ್ಷದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ, "ಸತ್ಯಣ್ಣ, 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ಮತ ಕೇಳಿದ್ದೀರಲ್ಲಾ? ಹಿಂದೂ ಹುಡುಗಿಯನ್ನು ಪ್ರೀತಿಸಿದ್ದ ಮುಸ್ಲಿಂ ಹುಡುಗನಿಗೆ ಹಿಂದೂ ಹುಡುಗನೊಬ್ಬ ಹಲ್ಲೆ ಮಾಡಿದ್ದ. ಗೋವುಗಳನ್ನು ಸಾಗಿಸುತ್ತಿದ್ದವರಿಗೆ ಹಿಂದೂ ಯುವಕರು ತಡೆದು ಹಲ್ಲೆ ಮಾಡಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. ನಾನು ಠಾಣೆಗೆ ಹೋಗಿ ಅವರ ಮೇಲೆ ಕೇಸ್ ದಾಖಲಾಗದಂತೆ ನೋಡಿಕೊಂಡು ಠಾಣೆಯಿಂದ ಬಿಡಿಸಿಕೊಂಡು ಬಂದಿದ್ದೇನೆ" ಎಂದು ಹೇಳಿಕೆ ನೀಡಿದ್ದರು.
ಅದನ್ನು ಆಧರಿಸಿ ನಮಿತಾ ಕೆ. ಪೂಜಾರಿ ಎಂಬುವರು ಬೆಳ್ತಂಗಡಿ ಠಾಣಗೆ ದೂರು ನೀಡಿ, ಹರೀಶ್ ಪೂಂಜಾ ಶಾಸಕರಾಗಿದ್ದುಕೊಂಡು ಕೋಮು ಪ್ರಚೋದಕ ಸಂವಿಧಾನ ಬಾಹಿರ ಹೇಳಿಕೆ ನೀಡಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಮಧ್ಯೆ ದ್ವೇಷ ಉಂಟು ಮಾಡಬೇಕು ಹಾಗೂ ಶಾಂತಿ ಕದಡಬೇಕು ಎಂಬ ಉದ್ದೇಶದಿಂದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರು ಸ್ವೀಕರಿಸಿದ್ದ ಪೊಲೀಸರು, ಭಾರತೀಯ ದಂಡ ಸಂಹಿತೆ ಐಪಿಸಿ 153, 153 (ಎ), 505 ಮತ್ತು 505 (ಎ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು.












Click it and Unblock the Notifications