ಖರ್ಗೆ ಕುರಿತು ಅವಹೇಳನಕಾರಿ ಹೇಳಿಕೆ: ಚಕ್ರವರ್ತಿ ಸೂಲಿಬೆಲೆಗೆ ರಿಲೀಫ್
ಬೆಂಗಳೂರು, ಜನವರಿ 31: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆಗೆ ರಿಲೀಫ್ ಸಿಕ್ಕಿದೆ.
ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಹಾಗಾಗಿ ಅವರು ಸದ್ಯ ಬಂಧನದ ಭೀತಿಯಿಂದ ಪಾರಾಗಿದ್ದಾರೆ. ನ್ಯಾಯಪೀಠ ಎಫ್ಐಆರ್ಗೆ ತಡೆ ನೀಡಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.

ರಾಜಕೀಯ ಉದ್ದೇಶದಿಂದ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಚಕ್ರವರ್ತಿ ಸೂಲಿಬೆಲೆ ಅಲಿಯಾಸ್ ಮಿಥುನ್ ಚಕ್ರವರ್ತಿ ದೇವಿದಾಸ್ ಸೇಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ರಾಜೇಂದ್ರ ಬದಾಮಿಕರ್ ಅವರಿದ್ದ ಪೀಠ ವಿಚಾರಣೆ ನಡೆಸಿ, ತಡೆ ನೀಡಿ ಆದೇಶಿಸಿದೆ.
ಅರ್ಜಿದಾರರ ಪರ ಹಿರಿಯ ವಕೀಲರು ವಾದ ಮಂಡಿಸಿ, ರಾಜಕೀಯ ಕಾರಣಕ್ಕಾಗಿ ದುರುದ್ದೇಶದಿಂದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದೂರುದಾರರು ಕೆಪಿಸಿಸಿಯ ಪದಾಧಿಕಾರಿಯಾಗಿದ್ದು, ಸೂಲಿಬೆಲೆಗೆ ಮುಜುಗರ ಉಂಟು ಮಾಡಲು ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಪ್ರಕರಣ ದಾಖಲು ಮಾಡಲಾಗಿದೆ ಎಂದು ವಿವರಿಸಿದರು.
ಪ್ರಕರಣದ ಹಿನ್ನೆಲೆ: ಯುವ ಬ್ರಿಗೇಡ್ ವತಿಯಿಂದ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಭಾಗವಹಿಸಿದ್ದ ಸೂಲಿಬೆಲೆ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಯೋಗ್ಯ ಎಂದು ನಿಂದಿಸಿದ್ದಲ್ಲದೇ ಆಧಾರರಹಿತವಾಗಿ ಸುಳ್ಳು ಭಾಷಣ ಮಾಡಿದ್ದಾರೆ.
ಈ ಮೂಲಕ ಕೋಮು ದ್ವೇಷ ಹರಡು ಪ್ರಯತ್ನ ಮಾಡಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಕೃತ್ಯದಲ್ಲಿ ಸೂಲಿಬೆಲೆ ಭಾಗವಹಿಸಿದ್ದು, ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ ಆರೋಪದ ಮೇಲೆ ಪ್ರಕರಣ ಎದುರಿಸುತ್ತಿದ್ದಾರೆ ಎಂದು ಸೂಲಿಬೆಲೆ ಭಾಷಣದ ಡಿವಿಡಿಗಳನ್ನು ಒಳಗೊಂಡ ದೂರನ್ನು ಕಲಬುರಗಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ಕಲಬುರಗಿಯ ಬ್ರಹ್ಮಾಪುರ ಠಾಣೆಗೆ ನೀಡಿದ್ದರು.
ಇದರ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಐಪಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅಡಿ ಪ್ರಕರಣ ದಾಖಲಿಸಿ, ಅದನ್ನು ರಾಯಚೂರು ಜಿಲ್ಲೆಯ ಸಿರಿವಾರ ಠಾಣೆಗೆ ವರ್ಗಾಯಿಸಲಾಗಿದೆ.












Click it and Unblock the Notifications