ರಾಜ್ಯದಲ್ಲಿ ಪದವಿ ಕಾಲೇಜುಗಳು ಪುನರಾರಂಭ; ಕೋವಿಡ್ ಲಸಿಕಾ ವರದಿಯೊಂದಿಗೆ ಕಾಲೇಜು ಪ್ರವೇಶಿಸಿದ ವಿದ್ಯಾರ್ಥಿಗಳು
ಬೆಂಗಳೂರು, ಜುಲೈ 26: ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಮುಚ್ಚಲಾಗಿದ್ದ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನು ಸೋಮವಾರದಿಂದ ಪುನರಾರಂಭಿಸಲಾಗಿದೆ.
ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಇಂದು ವಿದ್ಯಾರ್ಥಿಗಳ ಲಸಿಕಾ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ತರಗತಿಗಳಿಗೆ ಪ್ರವೇಶ ನೀಡಲಾಗುತ್ತಿದೆ.
"ಕೊರೊನಾ ನಿಯಮಗಳ ಪಾಲನೆಯೊಂದಿಗೆ ಕಾಲೇಜುಗಳನ್ನು ಆರಂಭಿಸಬೇಕೆಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು" ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಸೂಚಿಸಿದ್ದಾರೆ.

ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ಕಾಲೇಜಿಗೆ ಬರುವ 72 ಗಂಟೆಗಳ ಮೊದಲು ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿರಬೇಕಿದೆ. ಎಲ್ಲಾ ವಿಶ್ವವಿದ್ಯಾಯಲಗಳ ಅಡಿಯಲ್ಲಿರುವ ಕಾಲೇಜುಗಳು ವಿಶ್ವವಿದ್ಯಾಲಯ ಅನುದಾನ ಆಯೋಗ ನೀಡಿರುವ ಮಾರ್ಗಗಳನ್ನು ಅನುಸರಿಸಬೇಕೆಂದು ನಿರ್ದೇಶಿಸಲಾಗಿದೆ.
ಕಾಲೇಜಿಗೆ ಬರಲು ಬಯಸದ ವಿದ್ಯಾರ್ಥಿಗಳು ಆನ್ಲೈನ್ ಕ್ಲಾಸ್ಗಳ ಮೂಲಕವೇ ಕಲಿಕೆ ಮುಂದುವರೆಸಬಹುದು ಎಂದು ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.
"ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಲಸಿಕೆ ನೀಡುವ ಕೆಲಸ ವೇಗವಾಗಿ ಸಾಗುತ್ತಿದೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇನ್ನೂ ಕೆಲವು ವಿಶ್ವವಿದ್ಯಾಲಯಗಳಲ್ಲಿ ಲಸಿಕೆ ನೀಡುವ ಕಾರ್ಯ ಮುಂದುವರೆಯುತ್ತಿದೆ. ಈವರೆಗೆ ಶೇ 74ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ" ಎಂದು ಸಚಿವ ಅಶ್ವತ್ಥ ನಾರಾಯಣ್ ಭಾನುವಾರ ಮಾಹಿತಿ ನೀಡಿದರು.












Click it and Unblock the Notifications