ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗೋಲ್ಲ : 5 ಕಾರಣಗಳು!
Recommended Video

ಬೆಂಗಳೂರು, ನವೆಂಬರ್ 23 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟವನ್ನು ಯಾವಾಗ ವಿಸ್ತರಣೆ ಮಾಡಲಾಗುತ್ತದೆ? ಎಂಬ ಪ್ರಶ್ನೆಗೆ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ. ಬೆಳಗಾವಿ ಅಧಿವೇಶನ ಆರಂಭವಾಗುವುದಕ್ಕೂ ಮೊದಲು ಸಂಪುಟ ವಿಸ್ತರಣೆ ಆಗುವುದಿಲ್ಲ ಎಂಬ ಸೂಚನೆ ಈಗ ಸಿಕ್ಕಿದೆ.
'ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬುದು ನಮ್ಮ ಉದ್ದೇಶ. ಈ ಕುರಿತು ಪಕ್ಷದ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಳಿ ಚರ್ಚೆ ನಡೆಸಿದ್ದೇವೆ' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್ಗೆ, 2 ಸ್ಥಾನಗಳು ಜೆಡಿಎಸ್ ಪಕ್ಷಕ್ಕೆ ಸಿಗಲಿವೆ. ಕಾಂಗ್ರೆಸ್ನಲ್ಲಿ 6 ಸ್ಥಾನಗಳನ್ನು ಪಡೆಯಲು ಡಜನ್ಗೂ ಅಧಿಕ ಆಕಾಂಕ್ಷಿಗಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಡಿಸೆಂಬರ್ 3ರಂದು ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಘೋಷಣೆ ಮಾಡಿದ್ದಾರೆ. ಸಂಪುಟ ವಿಸ್ತರಣೆಯನ್ನು ಮತ್ತಷ್ಟು ಮುಂದೂಡುವ ಸಾಧ್ಯತೆ ಇದೆ. ಅದಕ್ಕೆ 5 ಕಾರಣಗಳು ಇಲ್ಲಿವೆ.....

ರಾಹುಲ್ ಗಾಂಧಿ ಬ್ಯುಸಿ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಳಿ ಸಂಪುಟ ವಿಸ್ತರಣೆ ಮಾಡಲು ಒಪ್ಪಿಗೆ ಪಡೆಯಬೇಕು. ಆದರೆ, 5 ರಾಜ್ಯಗಳ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿ ಬ್ಯುಸಿಯಾಗಿದ್ದಾರೆ. ಡಿಸೆಂಬರ್ 11ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಅವರು ಕರ್ನಾಟಕದ ಪಕ್ಷದ ನಾಯಕರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ.

ಕಾಂಗ್ರೆಸ್ ಮುಂದೂಡುತ್ತಿದೆ
ಸಂಪುಟ ವಿಸ್ತರಣೆ ವಿಳಂಬವಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂಬುದು ಗುಟ್ಟಾಗಿ ಉಳಿದಿಲ್ಲ. 6 ಸಚಿವ ಸ್ಥಾನಗಳನ್ನು ಪಡೆಯಲು ಡಜನ್ಗೂ ಅಧಿಕ ಶಾಸಕರು ಆಕಾಂಕ್ಷಿಗಳಾಗಿದ್ದಾರೆ. ಇದರಲ್ಲಿ ಹಿರಿಯ ಶಾಸಕರು ಸಹ ಇದ್ದಾರೆ. ಒಂದು ವೇಳೆ ಸಂಪುಟ ವಿಸ್ತರಣೆ ನಡೆದರೆ, ಸಚಿವ ಸ್ಥಾನ ಸಿಗದವರು ಅಸಮಾಧಾನಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ, ವಿಳಂಬ ಮಾಡಲಾಗುತ್ತಿದೆ.

ದೇವೇಗೌಡರಿಗೆ ಜವಾಬ್ದಾರಿ
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನವೆಂಬರ್ 19ರಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಮಾಡುವ ದಿನಾಂಕವನ್ನು ನಿವೇ ನಿಗದಿ ಮಾಡಬೇಕು ಎಂದು ಜವಾಬ್ದಾರಿ ಕೊಟ್ಟು ಬಂದಿದ್ದಾರೆ. ಎಚ್.ಡಿ.ದೇವೇಗೌಡರು ಸೂಚಿಸುವ ತನಕ ಕುಮಾರಸ್ವಾಮಿ ಅವರು ಸಂಪುಟ ವಿಸ್ತರಣೆಗೆ ಕೈ ಹಾಕುವುದಿಲ್ಲ.

ಲೋಕಸಭಾ ಚುನಾವಣೆ
ಸಚಿವ ಸಂಪುಟ ವಿಸ್ತರಣೆ ಬಳಿಕ ನಡೆಯುವ ವಿದ್ಯಮಾನಗಳು 2019ರ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಬಾರದು ಎಂಬುದು ಎಚ್.ಡಿ.ದೇವೇಗೌಡರ ಲೆಕ್ಕಾಚಾರವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ಆದ್ದರಿಂದ, ಗೌಡರು ಕಾದು ನೋಡುವ ತಂತ್ರ ಅನುಸರಿಸುವ ಸಾಧ್ಯತೆ ಇದೆ.

ಸರ್ಕಾರ ವರ್ಷ ಪೂರೈಸಲಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೇಲೆ ಇಡೀ ದೇಶದ ಕಣ್ಣಿದೆ. ಸಂಪುಟ ವಿಸ್ತರಣೆಯಂತಹ ಚಿಕ್ಕ ವಿಚಾರ ದೊಡ್ಡದಾಗುವುದು ಯಾರಿಗೂ ಬೇಡವಾಗಿದೆ. ಸರ್ಕಾರ ಒಂದು ವರ್ಷ ಪೂರೈಸಿದ ಮೇಲೆ ಸಂಪುಟ ವಿಸ್ತರಣೆ ಮಾಡಬಹುದು ಎಂಬುದು ಜೆಡಿಎಸ್ ಪಕ್ಷದ ಲೆಕ್ಕಾಚಾರವಾಗಿದೆ. ಆದ್ದರಿಂದ, ವಿಳಂಬವಾಗುತ್ತಿದೆ.












Click it and Unblock the Notifications