ಪರಮೇಶ್ವರ್ ಸಿಎಂ ಮಾಡಲು ದಲಿತ ಸಂಘಟನೆಗಳ ಗಡುವು
ಬೆಂಗಳೂರು, ಫೆ.17 : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ತಮ್ಮ ಬೇಡಿಕೆ ಈಡೇರಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ದಲಿತ ಸಂಘಟನೆಗಳು ತೀರ್ಮಾನಿಸಿವೆ.
ಮಂಗಳವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು, ನಿವೃತ್ತ ಐಎಎಸ್ ಅಧಿಕಾರಿಗಳು ಸಭೆ ಸೇರಿದ್ದು, ದಲಿತರಿಗೆ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸರಿಯಾದ ಸ್ಥಾನಮಾನ ಸಿಗಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. [ನಾನು ಡಿಸಿಎಂ ಆಗಲು ಸಿದ್ಧ ಅಂದ್ರು ಪರಮೇಶ್ವರ್!]
ಮಾರ್ಚ್ ಅಂತ್ಯದೊಳಗೆ ದಲಿತರಿಗೆ ಸೂಕ್ತ ಅವಕಾಶ ನೀಡದಿದ್ದರೆ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪರಮೇಶ್ವರ ಅವರನ್ನು ಸಿಎಂ ಅಥವ ಡಿಸಿಎಂ ಮಾಡುವಂತೆ ಸಭೆಯ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಂದೇಶ ರವಾನಿಸಲಾಗಿದೆ. [ಪರಮೇಶ್ವರ್ ಡಿಸಿಎಂ ಮಾಡುವಂತೆ ಮನವಿ]

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ ಅವರ ಕೊಡುಗೆ ಇದೆ. ಆದ್ದರಿಂದ ಕಾಂಗ್ರೆಸ್ ನಾಯಕರು ಪರಮೇಶ್ವರ ಅವರನ್ನು ಸಿಎಂ ಮಾಡಬೇಕು ಅಥವ ಡಿಸಿಎಂ ಹುದ್ದೆ ನೀಡಬೇಕು ಎಂಬುದು ಸಭೆಯ ಪ್ರಮುಖ ಬೇಡಿಕೆ. [ಪರಮೇಶ್ವರ್ ಡಿಸಿಎಂ ಆಗ್ತಾರಾ?]
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರನ್ನು ಡಿಸಿಎಂ ಮಾಡಿ ಎಂಬ ಬೇಡಿಕೆ ಹೊಸದೇನಲ್ಲ. ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಇದು ಸಿಎಂ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.
ಸದ್ಯ, ದಲಿತ ಸಂಘಟನೆಗಳು ಪರಮೇಶ್ವರ ಅವರನ್ನು ಸಿಎಂ ಮಾಡಿ ಎಂದು ಬೇಡಿಕೆ ಇಡುವ ಮೂಲಕ ಕನಿಷ್ಠ ಡಿಸಿಎಂ ಪಟ್ಟವನ್ನಾದರೂ ದೊರಕಿಸಿಕೊಡಲು ಪ್ರಯತ್ನ ನಡೆಸಿವೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಲಿದ್ದಾರೆಯೇ? ಕಾದು ನೋಡಬೇಕು.












Click it and Unblock the Notifications