ಪರಮೇಶ್ವರ್ ಡಿಸಿಎಂ ಮಾಡುವಂತೆ ರಾಹುಲ್ ಗೆ ಮನವಿ
ಬೆಂಗಳೂರು, ಫೆ.17 : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ವಿಚಾರದ ಕುರಿತು ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಎರಡು ದಿನದ ಕರ್ನಾಟಕ ಪ್ರವಾಸ ಕೈಗೊಂಡಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪರಮೇಶ್ವರ್ ಅವರನ್ನು ಡಿಸಿಎಂ ಮಾಡುವಂತೆ ಮನವಿ ಸಲ್ಲಿಸಲಾಗಿದೆ.
ಶನಿವಾರ ಬೆಳಗಾವಿ ಮತ್ತು ಬೆಂಗಳೂರಿನ ಕಾರ್ಯಕ್ರಮಗಳನ್ನು ಮುಗಿಸಿ ಕುಮಾರಕೃಪಾ ಅತಿಥಿ ಗೃಹದಲ್ಲಿ ತಂಗಿದ್ದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಕಿಸಾನ್ ಘಟಕದ ಉಪಾಧ್ಯಕ್ಷ ಡಾ.ಆನಂದ್ ಕುಮಾರ್ ಮತ್ತು ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷ ವೆಂಕಟೇಶ ಕುಮಾರ್ ಮುಂತಾದವರು ಪರಮೇಶ್ವರ್ ಅವರಿಗೆ ಡಿಸಿಎಂ ಹುದ್ದೆ ನೀಡುವಂತೆ ಮನವಿ ಮಾಡಿದರು. [ರಾಹುಲ್ ರೋಡ್ ಶೋ ಚಿತ್ರಗಳು]

ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದೆವು. ಪಕ್ಷ ಅಧಿಕಾಕ್ಕೆ ಬಂದಿತು ಆದರೆ, ಪರಮೇಶ್ವರ್ ಅವರು ಸೋಲು ಅನುಭವಿಸಿದರು. ಆದ್ದರಿಂದ ಅವರು ಸರ್ಕಾರ ಭಾಗವಾಗಲು ಸಾಧ್ಯವಾಗಿಲ್ಲ ಎಂದು ಮನವಿ ಪತ್ರದಲ್ಲಿ ವಿವರ ನೀಡಲಾಗಿದೆ. [ನಾನು ಡಿಸಿಎಂ ಆಗಲು ಸಿದ್ಧ : ಪರಮೇಶ್ವರ್]
ಪರಮೇಶ್ವರ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಹಲವಾರು ದಿನಗಳಿಂದ ಈ ಬೇಡಿಕೆಯನ್ನು ಮುಂದಿಟ್ಟಿದ್ದೇವೆ ಇದನ್ನು ಈಡೇರಿಸಬೇಕು ಎಂದು ಪಕ್ಷದ ಸದಸ್ಯರ ನಿಯೋಗ ಮನವಿ ಮಾಡಿದೆ. [ಕುಂದಾನಗರಿಯಲ್ಲಿ ಯುವ ರಾಜನ ಘರ್ಜನೆ]
ಪರಮೇಶ್ವರ್ ಅವರಿಗೆ ಸೂಕ್ತ ಸ್ಥಾನಮಾನ ನೀಡದಿದ್ದರೆ, ಅದು ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಪಕ್ಷದ ಹೈ ಕಮಾಂಡ್ ನಾಯಕರು ಈ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಲೋಕಸಭೆ ಚುನಾವಣೆಗೆ ಮೊದಲೇ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಬೇಕು ಎಂದು ಮನವಿ ಮಾಡಿದ್ದಾರೆ.












Click it and Unblock the Notifications