ಬೆಳಗಾವಿಗೆ ಬೇಡ, ಕಲಬುರಗಿಗೆ ಕೆಎಟಿ ಪೀಠ ಕೊಡಿ
ಕಲಬುರಗಿ, ಜೂ. 29 : ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಪೀಠವನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಲಬುರಗಿ ಜಿಲ್ಲೆಯ ಶಾಸಕರು ಮತ್ತು ಸಂಸದರ ನಿಯೋಗ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ.
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಖಮರುಲ್ ಇಸ್ಲಾಂ ಈ ಕುರಿತು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲಿಯೇ ಜನಪ್ರತಿನಿಧಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ಭೇಟಿ ಮಾಡಿ, ಕೆಎಟಿ ಪೀಠ ಸ್ಥಾಪನೆಗೆ ಮನವಿ ಮಾಡಲಾಗುತ್ತದೆ ಎಂದರು. [ಬೆಳಗಾವಿಯಲ್ಲೇ ಕೆಎಟಿ ಪೀಠ]

ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ಕೆಎಟಿ ಪೀಠ ಸ್ಥಾಪನೆಗೆ ಅನುಮತಿ ನೀಡಲಾಗಿದೆ. ಕಲಬುರಗಿಯನ್ನು ಪರಿಗಣಿಸದಿರುವುದರಿಂದ ಜನರಿಗೆ ಮತ್ತು ವಕೀಲರಿಗೆ ನಿರಾಸೆಯಾಗಿದೆ. ಕೆಎಟಿ ಪೀಠವನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡಲು ಮನವಿ ಸಲ್ಲಿಸಲಾಗುತ್ತದೆ ಎಂದು ಸಚಿವರು ಹೇಳಿದರು. [ಕೆಎಟಿ ಪೀಠಕ್ಕೆ ಆಗ್ರಹಿಸಿ ಸಿಎಂ ಪ್ರತಿಕೃತಿ ದಹನ]
ಬೆಳಗಾವಿಯಲ್ಲಿ ಪೀಠ ಸ್ಥಾಪನೆಗೆ ಒಪ್ಪಿಗೆ : ಬೆಳಗಾವಿಯಲ್ಲಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಹೆಚ್ಚುವರಿ ಪೀಠವನ್ನು ಸ್ಥಾಪಿಸಿ ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಗದಗ, ಹಾವೇರಿ, ಉತ್ತರಕನ್ನಡ ಹಾಗೂ ಕೊಪ್ಪಳ ಜಿಲ್ಲೆಗಳನ್ನು ಇದರ ವ್ಯಾಪ್ತಿಗೆ ಸೇರಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು.
ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ಕಲಬುರಗಿ ಜಿಲ್ಲಾ ವಕೀಲರ ಸಂಘ ಶುಕ್ರವಾರ ಕೋರ್ಟ್ ಕಲಾಪವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿತ್ತು. ಈಗ ಸಚಿವರು ಮುಖ್ಯಮಂತ್ರಿಗಳ ಬಳಿ ನಿಯೋಗ ತಗೆದುಕೊಂಡು ಹೋಗಲು ನಿರ್ಧರಿಸಿದ್ದಾರೆ.












Click it and Unblock the Notifications