ಡಿನೋಟಿಫಿಕೇಷನ್ ಹಗರಣ: ಸಮನ್ಸ್ ರದ್ದು ಕೋರಿ ಬಿಎಸ್ವೈ ಸುಪ್ರೀಂಕೋರ್ಟ್ ಮೊರೆ
ಬೆಂಗಳೂರು, ಏ.7: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮತ್ತೆ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮಗೆ ಜಾರಿಯಾಗಿರುವ ಸಮನ್ಸ್ ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ವಿಶೇಷ ಮೇಲ್ಮನವಿ ಸಲ್ಲಿಸಿರುವ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಎಲ್ಲ ಪ್ರಕ್ರಿಯೆಗೆ ತಡೆ ನೀಡುವಂತೆ ಹಾಗೂ ಆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿದ್ದಾರೆ.
ವಿಶೇಷ ನ್ಯಾಯಾಲಯ ಏ.19ರಂದು ಖುದ್ದು ಹಾಜರಾಗುವಂತೆ ಹೊರಡಿಸಿರುವ ಸಮನ್ಸ್ ಕೂಡ ರದ್ದು ಮಾಡಬೇಕು ಎಂದು ಬಿಎಸ್ ವೈ ಮನವಿ ಮಾಡಿದ್ದಾರೆ. ಅರ್ಜಿ ಮುಂದಿನ ವಾರ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
''ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಈಗಾಗಲೇ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧದ ಆರೋಪಗಳನ್ನು ಮುಕ್ತಗೊಳಿಸಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಆದೇಶಿಸಿದೆ. ಆದರೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆ ಅಂಶ ಪರಿಗಣಿಸಿಲ್ಲ''ಎಂಬುದು ಬಿಎಸ್ ಯಡಿಯೂರಪ್ಪ ವಾದವಾಗಿದೆ.
ಜೊತೆಗೆ
ಲೋಕಾಯುಕ್ತ
ಪೊಲೀಸರೂ
ಸಹ
ಬಿ
ರಿಪೋರ್ಟ್
ಸಲ್ಲಿಸಿದ್ದಾರೆ.
ಅದರೂ
ನ್ಯಾಯಾಲಯ
ತಿರಸ್ಕರಿಸಿರುವುದು
ಸರಿಯಲ್ಲ
ಎಂದೂ
ಹೇಳಿದ್ದಾರೆ.
ಹಳೆಯ ಪ್ರಕರಣಕ್ಕೆ ಮರುಜೀವ: 9 ವರ್ಷಗಳ ಹಿಂದಿನ ಡಿನೋಟಿಫಿಕೇಷನ್ ಪ್ರಕರಣಕ್ಕೆ ಮರುಜೀವ ಬಂದಿದೆ. ಐ.ಟಿ ಕಾರಿಡಾರ್ನಿರ್ಮಾಣಕ್ಕಾಗಿ ಬೆಂಗಳೂರಿನ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಏಪ್ರಿಲ್ 19ರಂದು ಖುದ್ದು ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಡಿನೋಟಿಫಿಕೇಷನ್ ಹಗರಣ: ಬಿಎಸ್ವೈಗೆ ಮತ್ತೆ ಸಂಕಷ್ಟ, ಏ.19ಕ್ಕೆ ಹಾಜರಾಗಲು ಸಮನ್ಸ್ ಜಾರಿ
ನ್ಯಾಯಾಧೀಶ ಬಿ. ಜಯಂತ್ ಕುಮಾರ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 13(1)(ಡಿ) ಮತ್ತು 13(2)ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಸಮನ್ಸ್ ಜಾರಿ ಮಾಡುವಂತೆ ಶನಿವಾರ ಆದೇಶ ಹೊರಡಿಸಿದ್ದಾರೆ. 2013ರಲ್ಲಿ ವಾಸುದೇವ ರೆಡ್ಡಿ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿರುವ ವಿಶೇಷ ನ್ಯಾಯಾಲಯ, ದೂರುದಾರರ ಪ್ರಮಾಣೀಕೃತ ಹೇಳಿಕೆ ದಾಖಲಿಸಿ ವಿಚಾರಣಾ ಪ್ರಕ್ರಿಯೆ ಕೈಗೆತ್ತಿಕೊಂಡಿದೆ.
ಪ್ರಕರಣದ ಹಿನ್ನೆಲೆ: ಐ.ಟಿ. ಕಾರಿಡಾರ್ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯ ಪೈಕಿ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪ ಮಾಜಿ ಸಿಎಂ ಬಿಎಸ್ ವೈ ಮೇಲಿದೆ. ಈ ಪ್ರಕರಣದಲ್ಲಿ ಮೂಲ ದೂರುದಾರರಾದ ವಾಸುದೇವ ರೆಡ್ಡಿ, ಮಾಜಿ ಸಚಿವ ಆರ್ .ವಿ. ದೇಶಪಾಂಡೆ, ಯಡಿಯೂರಪ್ಪ ಸೇರಿದಂತೆ ಹತ್ತು ಮಂದಿಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು.
2015ರಲ್ಲಿ ಹೈಕೋರ್ಟ್ ದೇಶಪಾಂಡೆ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿತ್ತು. ಉಳಿದ ಎಂಟು ಜನರ ವಿರುದ್ಧದ ದೂರನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ಎರಡನೇ ಆರೋಪಿಯಾಗಿರುವ ಯುಡಿಯೂರಪ್ಪ ವಿರುದ್ಧದ ಪ್ರಕರಣ ಹಾಗೆಯೇ ಇದೆ. ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ಆದೇಶಿಸಿತ್ತು. ತನಿಖೆ ನಡೆಸಿದ್ದ ಪೊಲೀಸರು ಎರಡು ಭಾರಿ ಯಡಿಯೂರಪ್ಪ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ ಎಂದು 'ಬಿ' ವರದಿ ಸಲ್ಲಿಸಿದ್ದರು. ಎರಡೂ ವರದಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು. 2021ರ ನ. 27ರಂದು ಎರಡನೇ 'ಬಿ' ವರದಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯ ವಿಚಾರಣೆ ಆರಂಭಿಸುವುದಾಗಿ ಆದೇಶಿಸಿತು.