ವಾಣಿಜ್ಯ, ಕೈಗಾರಿಕಾ ಇಲಾಖೆಯ ಸಭೆ: ಜುಬಿಲಿಯೆಂಟ್ ಕಾರ್ಖಾನೆ ತೆರೆಯಲು ಅನುಮತಿ
ಬೆಂಗಳೂರು, ಮೇ 21: ಚೀನಾದಲ್ಲಿರುವ ಕೈಗಾರಿಕೋದ್ಯಮಿಗಳು ಇತರ ದೇಶಗಳಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಈ ಟಾಸ್ಕ್ ಫೋರ್ಸ್ ನ ಕಾರ್ಯ ಚಟುವಟಿಕೆಗಳನ್ನು ಪ್ರತಿ ವಾರ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.
Recommended Video
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯದಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹಕಗಳ ಯೋಜನೆಯನ್ನು ರೂಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.
ಜೊತೆಗೆ ಕೋವಿಡ್-19 ನಿಂದಾಗಿ ಮುಚ್ಚಲಾಗಿದ್ದ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಜುಬಿಲಿಯೆಂಟ್ ಕಾರ್ಖಾನೆಯನ್ನು ತೆರೆಯಲು ಅನುಮತಿ ನೀಡಿದರು.

ಜಮೀನು ಖರೀದಿಸುವ ಪ್ರಕ್ರಿಯೆ ಸರಳ
ಕೋವಿಡ್-19 ನಿಂದಾಗಿ ಘೋಷಿಸಿದ್ದ ಲಾಕ್ ಡೌನ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕಾರ್ಖಾನೆಗಳಲ್ಲಿ ಪ್ರಸ್ತುತ ಶೇ. 70 ರಷ್ಟು ಕೈಗಾರಿಕೆಗಳು ಪುನರಾರಂಭಗೊಂಡಿವೆ. ಈ ನಿಟ್ಟಿನಲ್ಲಿ ಕೈಗಾರಿಕಾ ವಲಯದ ಪರಿಣತರೊಂದಿಗೆ, ಅಂತರರಾಷ್ಟ್ರೀಯ ಕೈಗಾರಿಕೋದ್ಯಮಿಗಳ ಸಂಘಟನೆಗಳೊಂದಿಗೆ ಸರ್ಕಾರ ಸಮಾಲೋಚನೆ ನಡೆಸುತ್ತಿದೆ.
ಇದಲ್ಲದೆ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಕೈಗಾರಿಕೋದ್ಯಮಿಗಳಿಗೆ ಜಮೀನು ಖರೀದಿಸುವ ಪ್ರಕ್ರಿಯೆ ಸರಳಗೊಂಡಿದ್ದು, ಇದರಿಂದ ಹೂಡಿಕೆದಾರರನ್ನು ಆಕರ್ಷಿಸುವುದು ಸುಲಭವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಜಿಲ್ಲಾ ಮಟ್ಟದಲ್ಲಿಯೂ ಕೈಗಾರಿಕೆ ಸ್ಥಾಪಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಕೋವಿಡ್-19 ಸಂದರ್ಭದಲ್ಲಿ ಪ್ರಧಾನಿ ಮೋದಿ ತಿಳಿಸಿದಂತೆ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿಯೂ ಮಹತ್ತರ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜ್ಯದ 22 ಘಟಕಗಳಲ್ಲಿ ಪಿಪಿಇ ಕಿಟ್ ಉತ್ಪಾದನೆ
ಹೊರದೇಶದಿಂದ ಆಮದಾಗುತ್ತಿದ್ದ ಪಿಪಿಇ ಕಿಟ್ ಗಳನ್ನು ದೇಶದಲ್ಲಿಯೇ ತಯಾರಿಸಲು ಉತ್ತೇಜನ ನೀಡಲಾಗಿದ್ದು, ರಾಜ್ಯದಲ್ಲಿ 22 ಘಟಕಗಳು ಈಗ ಪಿಪಿಇ ಕಿಟ್ ಗಳನ್ನು ಉತ್ಪಾದಿಸುತ್ತಿವೆ. 4 ಸಂಸ್ಥೆಗಳು ವೆಂಟಿಲೇಟರ್ ಗಳ ತಯಾರಿಕೆ ಮಾಡುತ್ತಿವೆ. ಸ್ಯಾನಿಟೈಸರ್ ಕೊರತೆ ನೀಗಿಸಲು 40 ಕ್ಕೂ ಹೆಚ್ಚು ಡಿಸ್ಟಿಲರಿಗಳಿಗೆ ಪರವಾನಗಿ ನೀಡಿ, ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲಾಗಿದೆ.

ಕಟ್ಟಡ ಕಾರ್ಮಿಕರಿಗೆ ಆರ್ಥಿಕ ನೆರವು
ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪ್ರಸ್ತುತ ಕೇವಲ 89 ಸಾವಿರ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಈ ವಲಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಭಿಯಾನದ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಸಿ.ಎಂ ಬಿ.ಎಸ್.ಯಡಿಯೂರಪ್ಪ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಈವರೆಗೆ 12.40 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ 5 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜುಬಿಲಿಯೆಂಟ್ ಕಾರ್ಖಾನೆ ತೆರೆಯಲು ಅನುಮತಿ
ರಾಜ್ಯದಲ್ಲಿ ಎಲ್ಲಾ ಔದ್ಯೋಗಿಕ ಚಟುವಟಿಕೆಗಳು ಪ್ರಾರಂಭವಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಜುಬಿಲಿಯೆಂಟ್ ಕಾರ್ಖಾನೆಯನ್ನು ತೆರೆಯಲು ಅನುಮತಿ ನೀಡಲಾಗಿದೆ.












Click it and Unblock the Notifications