DK Shivakumar: ದಿಢೀರ್ ದೆಹಲಿಗೆ ತೆರಳಿದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಮಾರ್ಚ್ 18: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.
ದೆಹಲಿ ಭೇಟಿ ಕುರಿತು ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿತ್ತು. ಆದರೆ ಸೋಮವಾರ ರಾತ್ರಿ ತಮಿಳುನಾಡಿನ ಪ್ರತಿನಿಧಿಗಳು ಬರುವುದಿಲ್ಲ, ಅವರು ಪ್ರತ್ಯೇಕವಾಗಿ ಮನವಿ ಸಲ್ಲಿಸುತ್ತಾರೆ ಎನ್ನುವ ಸಂದೇಶವಿದೆ. ಅಲ್ಲಿಗೆ ಹೋದಾಗ ಇದರ ಸತ್ಯಾಸತ್ಯತೆ ತಿಳಿಯುತ್ತದೆ. ಆದರೆ ನಾನು ಆಹ್ವಾನವನ್ನು ತಿರಸ್ಕರಿಸಬಾರದು ಎಂದು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು. ಜೊತೆಗೆ ಇತರೇ ಇಲಾಖೆಗಳ ಸಚಿವರು, ಅರಣ್ಯ ಇಲಾಖೆಯ ಸಚಿವರನ್ನು ಸಮಯ ಸಿಕ್ಕರೆ ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕಾಮಗಾರಿ ವೇಳೆ ವಿದ್ಯುತ್ ಕಂಬ ಬಿದ್ದು ಮಹಿಳೆಯರು ಮೃತಪಟ್ಟಿರುವ ವಿಚಾರದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾಮಗಾರಿ ಸ್ಥಳಗಳಲ್ಲಿ ಈ ರೀತಿಯ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.
ಶಿಸ್ತು ನಿಮ್ಮ ಮೂಲ ಮಂತ್ರವಾಗಬೇಕು
ಶಿಸ್ತು ಇಲ್ಲದಿದ್ದರೆ ಯಾರೂ ನಾಯಕರಾಗುವುದಿಲ್ಲ. ಶಿಸ್ತೇ ನಿಮ್ಮ ಯಶಸ್ಸಿನ ಮೂಲಮಂತ್ರ. ಪೋಸ್ಟರ್ ಬ್ಯಾನರ್ ಹಾಕಿದಾಕ್ಷಣ ನೀವು ನಾಯಕರಾಗುವುದಿಲ್ಲ. ನಿಮ್ಮ ಸಮರ ಸಿದ್ದಾಂತದ ಮೇಲೆ ಇರಬೇಕು. ಬೂತ್ ಮಟ್ಟದಲ್ಲಿ ಬಿಜೆಪಿ ಹಾಗೂ ಜನತಾ ದಳದವರ ವಿರುದ್ಧ ಇರಬೇಕೇ ಹೊರತು ಪೋಸ್ಟರ್ ಹಾಕಿಕೊಂಡು ಮಾಡುವುದಲ್ಲ. ನಿಮ್ಮ ಪೋಸ್ಟರ್ ನಿಮ್ಮ ಬೂತ್ ಮಟ್ಟದಲ್ಲಿ ಇರಬೇಕು. ಪೋಸ್ಟರ್ ಹಾಕುವಾಗ ಶಿಷ್ಟಾಚಾರ ಪಾಲನೆ ಮಾಡಬೇಕು. ನಿಮಗೆ ಹಸ್ತದ ಚಿಹ್ನೆಗೆ ಮತ ಹಾಕುತ್ತಾರೆ ಎಂಬುದನ್ನು ಮರೆಯಬೇಡಿ. ಅಡುಗೆ ಬೆಂದಾಗ ರುಚಿ ಇರುತ್ತದೆ, ಅದೇ ರೀತಿ ಜೀವನದಲ್ಲಿ ನೊಂದಾಗ ನಮಗೆ ಬುದ್ಧಿ ಕಲಿಸುತ್ತದೆ. ನೀವು ನಿಮ್ಮಲ್ಲಿರುವ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ನಿಮ್ಮ ದೃಷ್ಟಿ ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಜತೆಗಿರಬೇಕು. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಿಮ್ಮ ವಿರುದ್ಧ ಟೀಕೆಗಳು ಬಂದರೂ ಧೃತಿಗೆಡದೆ, ಶಾಶ್ವತವಾಗಿ ಉಳಿಯುವಂತಹ ಕೆಲಸಗಳನ್ನು ಮಾಡಬೇಕು. ಸಂತೋಷದಲ್ಲಿ ಆಶ್ವಾಸನೆ, ಕೋಪದಲ್ಲಿ ಉತ್ತರ, ದುಃಖದಲ್ಲಿ ನಿರ್ಧಾರ ಮಾಡಬೇಡಿ. ನಾವೆಲ್ಲರೂ ಪಕ್ಷದ ಧ್ವಜವಾಗಿ ದೇಶದ ತ್ರಿವರ್ಣ ಧ್ವಜವನ್ನು ಹಾಕಿಕೊಳ್ಳುತ್ತಿದ್ದೇವೆ. ಬಿಜೆಪಿ ಹಾಗೂ ಜನತಾ ದಳದವರು ಈ ಶಾಲನ್ನು ಹಾಕಿಕೊಳ್ಳಲು ಸಾಧ್ಯವೇ? ಕೇವಲ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಈ ಅವಕಾಶ ಸಿಗುತ್ತದೆ ಎಂದು ಹೇಳಿದರು.












Click it and Unblock the Notifications