ಉಪ ಮುಖ್ಯಮಂತ್ರಿ ಪಟ್ಟದ ಬಗ್ಗೆ ಎಚ್ಡಿಕೆ ಹೇಳಿದ್ದೇನು?
Recommended Video

ಬೆಂಗಳೂರು, ನವೆಂಬರ್ 28 : 'ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತ ಹಾಗೂ ಅಲ್ಪ ಸಂಖ್ಯಾತ ಸಮದಾಯಕ್ಕೆ ಸೇರಿದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಪರಿಶಿಷ್ಟ ಜಾತಿ/ಪಂಗಡ ಘಟಕ ಸೋಮವಾರ ಬೆಂಗಳೂರಿನ ಟೌನ್ ಹಾಲ್ನಲ್ಲಿ ಎಚ್.ಡಿ.ಕುಮಾರಸ್ವಾಮಿ ಜೊತೆ ಸಂವಾದ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ದಲಿತ ಸಂಘಟನೆಯ ಮುಖಂಡರ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸಿದರು.
ಕರ್ನಾಟಕದ ಸುಮಾರು 80 ದಲಿತ ಸಂಘಟನೆಗಳ ಪ್ರತಿನಿಧಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 'ನಾನು 15 ವರ್ಷಗಳನ್ನು ಕೇಳುತ್ತಿಲ್ಲ. 5 ವರ್ಷ ಅವಕಾಶ ನೀಡಿ ಸಾಕು ಬದಲಾವಣೆಯನ್ನು ತರುತ್ತೇನೆ' ಎಂದು ಕುಮಾರಸ್ವಾಮಿ ಮನವಿ ಮಾಡಿದರು.
'ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ನೀವು ಬಹಳ ಪಕ್ಷಗಳು ರಾಜ್ಯದಲ್ಲಿ ಆಡಳಿತ ನಡೆಸಿದ್ದನ್ನು ನೋಡಿದ್ದೀರಿ. ಒಂದು ಬಾರಿ ಜೆಡಿಎಸ್ ಪಕ್ಷಕ್ಕೆ ಅವಕಾಶ ನೀಡಿ, 2018ರ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಿ' ಎಂದು ಕುಮಾರಸ್ವಾಮಿ ಕರೆ ನೀಡಿದರು.

ಉಪ ಮುಖ್ಯಮಂತ್ರಿ ಹುದ್ದೆ
'2018ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ ಹಾಗೂ ಅಲ್ಪ ಸಂಖ್ಯಾತ ಸಮದಾಯಕ್ಕೆ ಸೇರಿದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ' ಎಂದು ಸಂವಾದ ಕಾರ್ಯಕ್ರಮದಲ್ಲಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

'ಹೋಟೆಲ್ ಉಪಹಾರ ಸೇವಿಸಿದರು'
'ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗ್ರಾಮ ವಾಸ್ತವ್ಯ ಆರಂಭಿಸಿದೆ. ದಲಿತರ ಮನೆಯಲ್ಲಿ ವಾಸ್ತವ್ಯ ಹೂಡಿ ಅಲ್ಲಿ ತಯಾರು ಮಾಡಿದ ಊಟವನ್ನು ಸೇವಿಸಿದೆ. ಆದರೆ, ಬಿಜೆಪಿ ನಾಯಕರು ದಲಿತರ ಮನೆಗೆ ಭೇಟಿ ಕೊಟ್ಟು, ಹೊರಗಿನಿಂದ ಉಪಹಾರ ತರಿಸಿಕೊಂಡು ತಿಂದರು' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

'ಹಣಕ್ಕಾಗಿ ರಾಜಕೀಯ ಮಾಡಿಲ್ಲ'
ಹಣ ಬಲ ಇರುವವರಿಗೆ ಪಕ್ಷ ಟಿಕೆಟ್ ನೀಡುತ್ತದೆ ಎಂಬ ಪ್ರಶ್ನೆಗೆ ಉತ್ತರ ನೀಡಿದ ಕುಮಾರಸ್ವಾಮಿ, 'ಅಂತಹ ಅಭಿಪ್ರಾಯ ನಮ್ಮ ಪಕ್ಷದ ಮೇಲಿದೆ. ನಾವು ಎಂದೂ ಹಣಕ್ಕಾಗಿ ರಾಜಕೀಯ ಮಾಡಿಲ್ಲ. ಜನರ ನಡುವೆ ಇದ್ದು ಕೆಲಸ ಮಾಡುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತೇವೆ' ಎಂದು ಸ್ಪಷ್ಟಪಡಿಸಿದರು.

'ಭವಿಷ್ಯವನ್ನು ನಾನು ನಂಬುವುದಿಲ್ಲ'
'ಮುಂದೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ. ಕುಮಾರಸ್ವಾಮಿ ಅವರು ರಾಷ್ಟ್ರೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಕೆಲವರು ಭವಿಷ್ಯ ಹೇಳುತ್ತಿದ್ದಾರೆ. ಆದರೆ, ನಾನು ಭವಿಷ್ಯವನ್ನು ನಂಬುವುದಿಲ್ಲ' ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications