ಜೆಡಿಎಸ್ ಟಿಕೆಟ್ ಘೋಷಣೆಯಾದ ಬಳಿಕ ಬಿಜೆಪಿ ಸೇರಿದ ನಾಯಕ!
ಬೆಂಗಳೂರು, ಮಾರ್ಚ್ 21 : ಜೆಡಿಎಸ್ ಪಕ್ಷದಿಂದ 2018ರ ವಿಧಾನಸಭೆ ಚುನಾವಣೆ ಟಿಕೆಟ್ ಘೋಷಣೆಯಾದ ತಕ್ಷಣ ಎ.ಎಸ್.ಪಾಟೀಲ ನಡಹಳ್ಳಿ ಬಿಜೆಪಿ ಸೇರಿದ್ದಾರೆ. ಇದರಿಂದಾಗಿ ಜೆಡಿಎಸ್ ಪಕ್ಷಕ್ಕೆ ಚುನಾವಣೆ ಸಮಯದಲ್ಲಿ ಹಿನ್ನಡೆ ಉಂಟಾಗಿದೆ.
ಬುಧವಾರ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಎ.ಎಸ್.ಪಾಟೀಲ ನಡಹಳ್ಳಿ ಬಿಜೆಪಿ ಸೇರಿದರು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡಹಳ್ಳಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇದರಿಂದಾಗಿ ವಿಜಯಪುರದ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ.
ಗೊಂದಲಕ್ಕೆ ತೆರೆ, ಅಧಿಕೃತವಾಗಿ ಬಿಜೆಪಿ ಸೇರಿದ ಎ.ಎಸ್ ಪಾಟೀಲ್ ನಡಹಳ್ಳಿ
ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು 13/10/2017ರಂದು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು.
ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕಾಂಗ್ರೆಸ್ನಿಂದ ಉಚ್ಛಾಟನೆ
ಕಾಂಗ್ರೆಸ್ನಿಂದ ಉಚ್ಚಾಟನೆಗೊಂಡ ಎ.ಎಸ್.ಪಾಟೀಲ ನಡಹಳ್ಳಿ ಅವರು ಜೆಡಿಎಸ್ ಜೊತೆ ಗುರುತಿಸಿಕೊಂಡಿದ್ದರು. ವಿಜಯಪುರ, ರಾಯಚೂರು ಭಾಗದಲ್ಲಿ ಪಕ್ಷ ಸಂಘಟನೆಯ ಕೆಲಸದಲ್ಲಿ ಸಕ್ರಿಯರಾಗಿದ್ದರು. 2018ರ ವಿಧಾನಸಭೆ ಚುನಾವಣೆಗೆ ಅವರಿಗೆ ಟಿಕೆಟ್ ಸಹ ಘೋಷಣೆ ಮಾಡಲಾಗಿತ್ತು. ಆದರೆ, ಇಂದು ಬಿಜೆಪಿ ಸೇರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ...
ಟಿಕೆಟ್ ಘೋಷಣೆಯಾದ ಬಳಿಕ ಬಿಜೆಪಿಗೆ
ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಜೆಡಿಎಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದರು. 2018ರ ಚುನಾವಣೆಗೆ ಮುದ್ದೇಬಿಹಾಳ ಕ್ಷೇತ್ರಕ್ಕೆ ಅವರು ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿತ್ತು.
'ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಗೊಂಡಿದೆ. ಮುದ್ದೇಬಿಹಾಳದಲ್ಲಿ ನನ್ನನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ನನ್ನ ಹೆಸರನ್ನು ಒಪ್ಪಿಗೆ ಪಡೆಯದೇ ಘೋಷಣೆ ಮಾಡಲಾಗಿದೆ' ಎಂದು ಎ.ಎಸ್.ಪಾಟೀಲ ನಡಹಳ್ಳಿ ಸೋಮವಾರ ಹೇಳಿದ್ದರು.
ಬಿಜೆಪಿ ಸೇರಿದ ಎ.ಎಸ್.ಪಾಟೀಲ ನಡಹಳ್ಳಿ
ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬುಧವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಇದರಿಂದ ವಿಜಯಪುರದ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ.
'ನಾನೀನ ಸ್ವತಂತ್ರ ಶಾಸಕ. ಯಾವ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದಿಲ್ಲ. ಕಾಂಗ್ರೆಸ್ ಪಕ್ಷ ನನ್ನನ್ನು ಉಚ್ಛಾಟನೆ ಮಾಡಿದೆ. ಒಂದು ವರ್ಷದಿಂದ ಜೆಡಿಎಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದೇನೆ' ಎಂದು ಎ.ಎಸ್.ಪಾಟೀಲ ನಡಹಳ್ಳಿ ಸೋಮವಾರ ಹೇಳಿದ್ದರು. ಬುಧವಾರ ಬಿಜೆಪಿ ಸೇರಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ
2008, 2013ರಲ್ಲಿ ದೇವರಹಿಪ್ಪರಗಿ ಕ್ಷೇತ್ರದಿಂದ ಎ.ಎಸ್.ಪಾಟೀಲ ನಡಹಳ್ಳಿ ಗೆಲುವು ಸಾಧಿಸಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ13/10/2017ರಂದು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಕುರಿತು ಚರ್ಚಿಸಲು ಸರ್ಕಾರ ವಿಶೇಷ ವಿಧಾನಮಂಡಲ ಅಧಿವೇಶನ ಕರೆದಿತ್ತು. ಆಗ ನಡಹಳ್ಳಿ ಅವರು 'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ವಿಶೇಷ ಅಧಿವೇಶನ ನಡೆಸಿ ನಿರ್ಣಯ ಕೈಗೊಳ್ಳಬೇಕು' ಎಂದು ಆಗ್ರಹಿಸಿದ್ದರು.
ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿದ್ದರು
ಎ.ಎಸ್.ಪಾಟೀಲ್ ನಡಹಳ್ಳಿ ಅವರು ಕಾಂಗ್ರೆಸ್ ಶಾಸಕರಾದರೂ ಹಲವು ಬಾರಿ ಪಕ್ಷದ ನಾಯಕರಿಗೆ ಮುಜುಗರ ತರುವ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಪಕ್ಷ ಅಖಂಡ ಕರ್ನಾಟಕದ ಬಗ್ಗೆ ಮಾತನಾಡಿದರೆ, ನಡಹಳ್ಳಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು. ಕರ್ನಾಟಕ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದ ಹೇಳಿಕೆ ಕೊಟ್ಟು. ಮುಜುಗರ ಉಂಟು ಮಾಡಿದ್ದರು.
ಆದ್ದರಿಂದ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದರು. ಈಗ ಅವರು ಬಿಜೆಪಿ ಸೇರಿದ್ದಾರೆ.
36 ಸಾವಿರ ಮತ ಪಡೆದಿದ್ದರು
ಎ.ಎಸ್.ಪಾಟೀಲ್ ನಡಹಳ್ಳಿ ಅವರು ದೇವರಹಿಪ್ಪರಗಿ ಕ್ಷೇತ್ರದಲ್ಲಿ ಎರಡು ಬಾರಿ ಗೆಲುವು ಸಾಧಿಸಿದ್ದಾರೆ. 2008, 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿ ಜಯಗಳಿಸಿದ್ದರು.
2008ರ ಚುನಾವಣೆಯಲ್ಲಿ 54,879 ಮತಗಳನ್ನು ಪಡೆದು ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸೋಲಿಸಿದ್ದರು.
2013ರ ಚುನಾವಣೆಯಲ್ಲಿ 36,231 ಮತಗಳನ್ನು ಪಡೆದು ಬಿಜೆಪಿಯ ಸೋಮಣ್ಣ ಗೌಡ ಬಿ.ಪಾಟೀಲ್ ವಿರುದ್ಧ ಗೆಲುವು ಸಾಧಿಸಿದ್ದರು.