ರಾಜ್ಯಸಭಾ ಚುನಾವಣೆ: ದೇವೇಗೌಡರ ಹಾದಿ ಸುಗಮವಾಗಿದ್ದು ಹೀಗೆ!
ಬೆಂಗಳೂರು, ಜೂ. 08: ರಾಜ್ಯ ವಿಧಾನಸಭೆಯಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ (ಜೂ.09) ಕೊನೆಯ ದಿನ. ಆದರೆ ಈವರೆಗೂ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ನಾಮಪತ್ರ ಸಲ್ಲಿಸಬೇಕೊ ಬೇಡವೊ ಎಂಬ ಹೋಯ್ದಾಟದಲ್ಲಿದ್ದರು. ಮೂಲಗಳ ಮಾಹಿತಿಯ ಪ್ರಕಾರ ಮಾಜಿ ಪ್ರಧಾನಿ ದೇವೇಗೌಡರು ನಾಮಪತ್ರ ಸಲ್ಲಿಕೆಗೆ ಇದೀಗ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಅವರು ನಾಮಪತ್ರ ಸಲ್ಲಿಸಲು ರಾಷ್ಟ್ರೀಯ ಪಕ್ಷಗಳ ಮರ್ಜಿ ಕಾಯುವಂತಾಗಿತ್ತು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ನಿರ್ಧಾರಗಳಿಂದ ದೇವೇಗೌಡರು ರಾಜ್ಯಸಭೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.
Recommended Video
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿಗಳು ಇನ್ನೂ ನಾಮಪತ್ರ ಸಲ್ಲಿಕೆ ಮಾಡಬೇಕಿದೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ 5 ಅಭ್ಯರ್ಥಿಗಳ ಹೆಸರುಗಳನ್ನು ಅಂತಿನಗೊಳಿಸಿ ಕೇಂದ್ರ ಬಿಜೆಪಿ ಚುನಾವಣಾ ಸಮಿತಿಗೆ ಕಳಿಸಲಾಗಿತ್ತು. ಅಚ್ಚರಿಯ ಆಯ್ಕೆ ಮಾಡಿರುವ ಬಿಜೆಪಿ ಹೈಕಾಮಂಡ್, ಮಾಜಿ ಪ್ರಧಾನಿ ದೇವೇಗೌಡರಿಗೂ ರಾಜ್ಯಸಭೆಯ ಅವಕಾಶ ಸಿಗುವಂತೆ ಮಾಡಿದೆ. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಯಿಂದ ದೇವೇಗೌಡರ ಹಾದಿ ಮತ್ತಷ್ಟು ಸುಗಮವಾದಂತೆ ಕಾಣುತ್ತಿದೆ. ನಾಳೆ ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಾಗಿ ಖರ್ಗೆ
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಫಾರಂ ಹಸ್ತಾಂತರ ಮಾಡಿದರು. ನಂತರ ಕಾಂಗ್ರೆಸ್ ನಾಯಕರ ಜೊತೆಗೂಡಿ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ಗಮನಿಸಿದರೆ ಮಾಜಿ ಪ್ರಧಾನಿ ದೇವೇಗೌಡ ಅವರು ರಾಜ್ಯಸಭೆ ಪ್ರವೇಶಿಸುವುದು ಸುಗಮವಾದಂತಾಗಿದೆ.

ಬಿಜೆಪಿಗೆ ಬೆಂಬಲ ಕೊಡಲ್ಲ
ಇದೇ ಸಂದರ್ಭದಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಖರ್ಗೆ ಅವರು ರಾಜ್ಯಸಭಾ ಚುನಾವಣೆಗೆ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ. ಅವರಿಗೆ ಬಿ ಫಾರ್ಮ್ ಕೊಟ್ಟಿದ್ದೇವೆ. ನಮ್ಮದು ಸೆಕ್ಯುಲರ್ ಪಾರ್ಟಿ, ನಾವು ಬಿಜೆಪಿಗೆ ಬೆಂಬಲ ಕೊಡಲ್ಲ. ಯಾರ ಸಂಪರ್ಕದಲ್ಲೂ ನಮ್ಮ ಶಾಸಕರು ಇರಬಾರದು. ನೀವು ಅವರ ಜೊತೆಗೆ ಮಾತಾಡಿದ್ರೆ ಸಾಕು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ನಿಮ್ಮನ್ನ ಅವರು ಟ್ರಾಪ್ ಮಾಡುತ್ತಾರೆ ಎಂದಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಮ್ಮ ಹೈಕಮಾಂಡ್ ಹೇಳಿದ ಹಾಗೆ ಮಾಡುತ್ತೇವೆ ಎಂದು ಶಾಸಕರಿಗೆ ಹೇಳಿದ್ದಾರೆ.

ಎರಡನೇ ಅಭ್ಯರ್ಥಿ ಹಾಕಲ್ಲ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷ ರಾಜ್ಯಸಭಾ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೆವು. ಎಲ್ಲ ಶಾಸಕರು, ಪರಿಷತ್ ಸದಸ್ಯರು ಸಭೆಗೆ ಬಂದಿದ್ದರು.
ಮಲ್ಲಿಕಾರ್ಜುನ ಖರ್ಗೆ ಅವರನ್ನ ನಾವು ಅಭ್ಯರ್ಥಿಯಾಗಿಸಿದ್ದೇವೆ. ಜೊತೆಗೆ ಚುನಾವಣೆಯಲ್ಲಿ ಕಾಂಗ್ರೆಸ್ ಎರಡನೇ ಅಭ್ಯರ್ಥಿ ಹಾಕಲ್ಲ ಎಂದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಂಚಿಕೆ ಮಾಡಿದ ಮೇಲೂ ಕಾಂಗ್ರೆಸ್ ಬಳಿ 20 ಶಾಸಕರ ಮತಗಳು ಹೆಚ್ಚುವರಿಯಾಗಿ ಉಳಿಯಲಿದೆ. ಡಿಕೆಶಿ ಅವರು ಜಾತ್ಯತೀತ ಪಕ್ಷಕ್ಕೆ ಬೆಂಬಲ ಕೊಡುವುದಾಗಿ ಹೇಳಿರುವುದು ದೇವೇಗೌಡರ ಹಾದಿ ಸುಗಮವಾದಂತಾಗಿದೆ.

ಬಿಜೆಪಿಯ ಅಚ್ಚರಿಯ ನಡೆ
ರಾಜ್ಯಸಭಾ ಚುನಾವಣೆಗೆ ಅಚ್ಚರಿ ಎಂಬಂತೆ ಇಬ್ಬರು ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಪ್ರಕಟಿಸಿದೆ. ಅಚ್ಚರಿ ಅಭ್ಯರ್ಥಿಗಳನ್ನು ಪ್ರಕಟ ಮಾಡುವ ಮೂಲಕ ತನ್ನ ಪಕ್ಷದಲ್ಲಿನ ಘಟಾನುಘಟಿ ನಾಯಕರಿಗೆ ಖಡಕ್ ಎಚ್ಚರಿಕೆಯನ್ನು ಬಿಜೆಪಿ ಹೈಕಮಾಂಡ್ ಕೊಟ್ಟಿದೆ. ಮತ್ತೊಂದೆಡೆ ಮಾಜಿ ಪ್ರಧಾನಿ ದೇವೇಗೌಡರಿಗೂ ರಾಜ್ಯಸಭೆ ಪ್ರವೇಶಕ್ಕೆ ಬಿಜೆಪಿ ಹೈಕಮಾಂಡ್ ಅನುವು ಮಾಡಿಕೊಟ್ಟಂತಾಗಿದೆ. ಯಾಕೆಂದರೆ ಬಿಜೆಪಿ ಕೂಡ ಮೂರನೇ ಅಭ್ಯರ್ಥಿಯನ್ನು ಹಾಕಿಲ್ಲ. ಇದೀದ ದೇವೇಗೌಡರು ನಾಮಪತ್ರ ಸಲ್ಲಿಸಿದರೆ ರಾಜ್ಯಸಭೆಗೆ ಚುನಾವಣೆ ನಡೆಯುವುದಿಲ್ಲ. ಬದಲಿಗೆ 4 ಸ್ಥಾನಗಳಿಗೆ ನಾಲ್ವರು ನಾಮಪತ್ರ ಸಲ್ಲಿಕೆ ಮಾಡುವುದರಿಂದ ಅವಿರೋಧ ಆಯ್ಕೆ ನಡೆಯಲಿದೆ.
ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡುವವರೆಗೆ ನಾಮಪತ್ರ ಸಲ್ಲಿಸಲು ಕಾಯುವಂತಾಗಿತ್ತು. ಇದೀಗ ಬಿಜೆಪಿ ಇಬ್ಬರು, ಕಾಂಗ್ರೆಸ್ ಒಬ್ಬ ಅಭ್ಯರ್ಥಿಯನ್ನು ಅಂತಿಮವಾಗಿ ಕಣಕ್ಕಿಳಿಸಿವೆ. ಹೀಗಾಗಿ ನಾಲ್ಕನೆ ಅಭ್ಯರ್ಥಿಯಾಗಿ ಜೆಡಿಎಸ್ನಿಂದ ದೇವೇಗೌಡರು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿಯ ನಡೆ ರಾಜ್ಯದ ಎಲ್ಲರಾಜಕೀಯನ ಪಕ್ಷಗಳಿಗೂ ಅಚ್ಚರಿ ತಂದಿದೆ.












Click it and Unblock the Notifications