ಚುನಾವಣೆಗೆ ದೇವೇಗೌಡರ ಸ್ಪರ್ಧೆ : ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು, ಮಾರ್ಚ್ 21 : 'ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಎಚ್.ಡಿ.ದೇವೇಗೌಡರು ಇನ್ನೂ ತೀರ್ಮಾನ ಕೈಗೊಂಡಿಲ್ಲ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಗುರುವಾರ ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ದೇವೇಗೌಡರು ಸ್ಪರ್ಧೆ ಮಾಡುವುದಾದರೆ ಬೆಂಗಳೂರು ಉತ್ತರ ಮತ್ತು ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು' ಎಂದರು.
ಹಾಸನ ಕ್ಷೇತ್ರದ ಸಂಸದ ಎಚ್.ಡಿ.ದೇವೇಗೌಡರು ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಆದ್ದರಿಂದ, ಅವರು ಹೊಸ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ದೇವೇಗೌಡರು ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮತ್ತೊಂದು ಕಡೆ 'ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡಲಿದ್ದಾರೆ. ಮಾ.25ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ' ಎಂದು ಸಚಿವ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಬಿಜೆಪಿಯವರು ಸಹ ದೇವೇಗೌಡರು ಸ್ಪರ್ಧಿಸುವ ಕ್ಷೇತ್ರ ಯಾವುದು ಎಂದು ಕಾದು ನೋಡುತ್ತಿದ್ದಾರೆ.

ಹಾಸನ ಬಿಟ್ಟುಕೊಟ್ಟ ವಿಚಾರ
'ದೇವೇಗೌಡರೇ ಮನಸ್ಪೂರ್ತಿಯಾಗಿ ಕಳೆದ ಮೂರು ವರ್ಷಗಳ ಹಿಂದೆಯೇ ಹಾಸನದಲ್ಲಿ ಪ್ರಜ್ವಲ್ ಅವರನ್ನು ನಿಲ್ಲಿಸುವ ತೀರ್ಮಾನವನ್ನು ಮಾಡಿದ್ದರು. ಅದಿರಂದ ಹಿಂದೆ ಸರಿಯಲು ಅವರ ಮನಸ್ಸು ಒಪ್ಪಿಲ್ಲ' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಅವರಿಗೂ ಮಮತೆ ಇದೆ
'ದೇವೇಗೌಡರಿಗೂ ಮಮತೆ ಇದೆ, ಕೊನೆ ಚುನಾವಣೆ ಹಾಸನದಿಂದಲೇ ಸ್ಪರ್ಧೆ ಮಾಡಬೇಕು ಎಂದು. ಆದರೆ, ಇವತ್ತು ಹಲವು ನಾಯಕರು ಈ ಬಾರಿಯ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ, ದೇವೇಗೌಡರು ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಇನ್ನೂ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ' ಎಂದು ಕುಮಾರಸ್ವಾಮಿ ತಿಳಿಸಿದರು.

ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ
'ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಇನ್ನೂ ದೇವೇಗೌಡರು ಅಂತಿಮ ತೀರ್ಮಾನವನ್ನು ಮಾಡಿಲ್ಲ. ಚುನಾವಣೆಗೆ ನಿಲ್ಲುವುದಾದರೆ ನಮ್ಮ ಬಳಿ ತುಮಕೂರು ಮತ್ತು ಬೆಂಗಳೂರು ಉತ್ತರ ಎರಡು ಕ್ಷೇತ್ರಗಳಿವೆ. ಸ್ಪರ್ಧಿಸುವುದಾದರೆ ಇವೆರಡರಲ್ಲಿ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ' ಎಂದರು.

ತುಮಕೂರಿನಿಂದ ಸ್ಪರ್ಧೆ
'ದೇವೇಗೌಡರು ತುಮಕೂರಿನಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಮಾ.25ರಂದು ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ' ಎಂದು ಸಚಿವ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.












Click it and Unblock the Notifications