Dharwad Industry: 'ಕೈಗಾರಿಕಾ ನೋಡ್' ಸ್ಥಾಪನೆಗೆ ಸರ್ಕಾರ ನಿರ್ಧಾರ, ಏನಿದು?
ಬೆಂಗಳೂರು, ಫೆಬ್ರವರಿ 16: ಇಂದು ಮಂಡನೆಯಾಗಿರುವ ಕರ್ನಾಟಕ ರಾಜ್ಯ ಬಜೆಟ್ 2024ನಲ್ಲಿ ಉತ್ತರ ಕರ್ನಾಟಕದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ಆರ್ಥಿಕ ಬೆಳವಣಿಗೆಗಳಿಗೆ ಉತ್ತೇಜನ ನೀಡಲು ತೀರ್ಮಾನಿಸಿದ್ದರ ಮಾಹಿತಿ ಲಭ್ಯವಾಗಿದೆ.
ಬಜೆಟ್ ಮಂಡನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ ಬೆಂಗಳೂರು-ಮುಂಬೈ ಎಕನಾಮಿಕ್ ಕಾರಿಡಾರ್ ಯೋಜನೆಯಡಿ ಧಾರವಾಡ ಸಮೀಪ ಸುಮಾರು 6,000 ಎಕರೆ ಜಮೀನಿನಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಒತ್ತು ನೀಡುವ ಸಂಬಂಧ 'ಕೈಗಾರಿಕಾ ನೋಡ್' ಅನ್ನು ಅಭಿವೃದ್ಧಿಪಡಿಸಲಾಗುವುದು.

ಈ ಯೋಜನೆ ಮೂಲಕ ಉತ್ತರ ಕರ್ನಾಟಕದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಇದರಿಂದ ಇಲ್ಲಿನ ಆರ್ಥಿಕ ಬೆಳವಣಿಗೆಗಳಿಗೆ ಉತ್ತೇಜನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ತಿಳಿಸಿದರು.
ಕೈಗಾರಿಕಾ ವಸಾಹತು ಮೇಲ್ದರ್ಜೆಗೆ
ವಿವಿಧ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಕೈಗಾರಿಕಾ ವಸಾಹತುಗಳನ್ನು ಕೇಂದ್ರ ಸರ್ಕಾರದ ಸಹಯೋಗದಲ್ಲಿ 39 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ನಿಗಮದ (KSSIDC) ಮೂಲಕ ಮೇಲ್ದರ್ಜೆಗೆ ಏರಿಸಲು ಸರ್ಕಾರ ಕ್ರಮವಹಿಸಲಿದೆ ಎಂದು ಹೇಳಿದರು.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸ್ಟಾಕ್ ಎಕ್ಸ್ಚೇಂಜ್ಗಳಲ್ಲಿ ಐಪಿಓ ಬಿಡುಗಡೆ ಮಾಡಲು ತಗಲುವ ವೆಚ್ಚದಲ್ಲಿ ಗರಿಷ್ಠ ಮಿತಿ 25 ಲಕ್ಷ ರೂಪಾಯಿ ಗಳಿಗೆ ಒಳಪಟ್ಟು ಶೇಕಡಾ 50 ರಷ್ಟು ಸಹಾಯಧನ ನೀಡಲಾಗುವುದು.
ಎಸ್ಸಿ ಅಭ್ಯರ್ಥಿಗಳಿಗೆ ಫ್ಯಾಶನ್ ಟೆಕ್ನಾಲಜಿ ಕೋರ್ಸ್
ಇನ್ನೂ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿಶೇಷ ಘಟಕ ಯೋಜನೆಯಡಿ ಕರ್ನಾಟಕ ಚರ್ಮ ಮತ್ತು ಫ್ಯಾಷನ್ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಎಲ್ಟಿ) ಡಿಪ್ಲೊಮಾ ಇನ್ ಲೆದರ್ ಅಂಡ್ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಮಾಡಲು ಪ್ರೋತ್ಸಾಹಧನವನ್ನು ಸರ್ಕಾರ ಒದಗಿಸಲಿದೆ.
ಸರ್ಕಾರಿ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು ಮತ್ತು ಎಂ.ಎಸ್.ಎಂ.ಇ.ಗಳನ್ನು TReDS ವೇದಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಎಂ.ಎಸ್.ಎಂ.ಇ. ಗಳಿಗೆ ಬರಬೇಕಾದ ಪಾವತಿಗಳು ಕಾಲಮಿತಿಯೊಳಗೆ ಸ್ವೀಕೃತಿಯಾಗಿ ಅವುಗಳ ನಗದು ಹರಿವು ಸಧೃಡಗೊಳಿಸಬೇಕು ಎಂಬ ಉದ್ದೇಶದಿಂದ TReDS ಸೇವಾ ಪೂರೈಕೆದಾರರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗುವುದು ಎಂದು ಅವರು ವಿವರಿಸಿದರು.












Click it and Unblock the Notifications