ಧಾರವಾಡ ಮಂದಿಗೆ ಗುಡ್ನ್ಯೂಸ್: ₹55 ಕೋಟಿ ವೆಚ್ಚದ 900 ಮೀ ಉದ್ದದ ರೈಲ್ವೆ ಅಂಡರ್ ಬ್ರಿಡ್ಜ್ ಸಿದ್ಧ
ಧಾರವಾಡ: ವಿದ್ಯಾಕಾಶಿ ಧಾರವಾಡ ನಗರದ ಕರ್ನಾಟಕ ವಿಶ್ವವಿದ್ಯಾಲಯ ಕಾಲೇಜು ಬಳಿ ವಿದ್ಯಾರ್ಥಿಗಳು ಸೇರಿದಂತೆ ಸ್ಥಳೀಯ ನಾಗರಿಕರು ವರ್ಷಗಳಿಂದ ಸಂಚಾರ ಅಡಚರಣೆ ಎದುರಿಸುತ್ತಿದ್ದರು. ಆ ಸಮಸ್ಯೆಗೆ ಮುಕ್ತಿ ದೊರೆತಿದ್ದು, ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕರ್ನಾಟಕ ವಿಶ್ವವಿದ್ಯಾಲಯದ ಬಳಿ ರೈಲ್ವೆ ಅಂಡರ್ ಬ್ರಿಡ್ಜ್ (RUB) ನಿರ್ಮಾಣ ಕಾರ್ಯ ಮುಗಿದಿದ್ದು ಲೋಕಾರ್ಪಣೆಗೆ ಸಜ್ಜಾಗಿದೆ.
ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ (ನಾಗರಿಕ ಸರಬರಾಜು) ಸಚಿವ ಪ್ರಹ್ಲಾದ್ ಜೋಶಿಯವರು ಸಾರ್ವಜನಿಕರಿಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಗುಡ್ ನ್ಯೂಸ್ ನೀಡಿದ್ದಾರೆ. ಜನರ ಸಂಚಾರದ ಸಮಸ್ಯೆ ಕುರಿತು ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಹಾಗೂ ನನ್ನ ಮೇಲ್ವಿಚಾರಣೆಯಲ್ಲಿ ರೈಲ್ವೆ ಅಂಡರ್ ಬ್ರಿಡ್ಜ್ ಯೋಜನೆ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.

ಹೆಮ್ಮೆಯ ಶೈಕ್ಷಣಿಕ ಕೇಂದ್ರವಾದ ಕರ್ನಾಟಕ ವಿಶ್ವವಿದ್ಯಾಲಯದ (KUD) ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರ ಬಹುದಿನಗಳ ಸಂಕಷ್ಟಕ್ಕೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಶೀಘ್ರವೇ ಈ ಬ್ರಿಡ್ಜ್ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.
900 ಮೀಟರ್ ಉದ್ದದ ಬ್ರಿಡ್ಜ್ ಪೂರ್ಣ
ಕರ್ನಾಟಕ ವಿಶ್ವವಿದ್ಯಾಲಯದ ಬಳಿ ಸಂಚಾರಕ್ಕೆ ರೈಲ್ವೆ ಅಂಡರ್ ಬ್ರಿಡ್ಜ್ (RUB) ಅಗತ್ಯವಾಗಿತ್ತು. ಇಲ್ಲಿನ ರೈಲ್ವೆ ಗೇಟ್ ಸಂಖ್ಯೆ 29ರ ಹತ್ತಿರ 55 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಒಟ್ಟು 900 ಮೀಟರ್ ಉದ್ದದ ನೂತನ ರೈಲ್ವೆ ಅಂಡರ್ ಬ್ರಿಡ್ಜ್ ಸ್ಥಾಪನೆ ಯಶಸ್ವಿಯಾಗಿದೆ. ಕಾಮಗಾರಿ ಮುಗಿದಿದ್ದು, ಶೀಘ್ರವೇ ಲೋಕಾರ್ಪಣೆ ಮೂಲಕ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಕೇಂದ್ರ ಸಚಿವರು ವಿವರಿಸಿದ್ದಾರೆ.
ಈ ಭಾಗದಲ್ಲಿ ಸತತವಾಗಿ ಸಂಚರಿಸುವರು ಸಂಚಾರದ ಸಮಸ್ಯೆಯನ್ನು ಎದುರಿಸುತ್ತಿರುವುದನ್ನು ಮನಗಂಡು ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಸದರಿ ಈ ಯೋಜನೆಯನ್ನು ಮಂಜೂರು ಮಾಡಿಸಿ ಇದೀಗ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಇದು ದಾರಿ ಮಾಡಿಕೊಡಲಿದೆ. ಧಾರವಾಡದ ಮೂಲ ಸೌಕರ್ಯ ಅಭಿವೃದ್ಧಿಗೆ ಹಾಗೂ ಸಾರ್ವಜನಿಕರ ಸುಲಭ ಜೀವನಕ್ಕೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಜೊತೆಗೆ ಯೋಜನೆಗೆ ಅವಕಾಶ ಮಾಡಿಕೊಟ್ಟ ಪ್ರಧಾನಮಂತ್ರಿಗಳಿಗೆ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಜೋಶಿ ಧನ್ಯವಾದ ತಿಳಿಸಿದರು. ಇತ್ತ ಪ್ರಹ್ಲಾದ್ ಜೋಶಿಯವರ ಪೊಸ್ಟ್ಗೆ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಧಾರವಾಡದ ರಿಂಗ್ ರಸ್ತೆ ಕಾಮಗಾರಿ ಕುರಿತು ಅಪ್ಡೇಟ್ ಕೊಡಿ ಎಂದು ಕೇಳಿದ್ದಾರೆ.
https://kannada.oneindia.com/news/karnataka/ramalinga-reddy-withdraws-resignation-after-congress-high-commands-intervention-know-details-456745.html?ref_source=OI-KN&ref_medium=Home-Page&ref_campaign=News-Cardsಹುಬ್ಬಳ್ಳಿ-ಧಾರವಾಡಕ್ಕೆ ರಿಂಗ್ ರಸ್ತೆ ಅಗತ್ಯ
ಹುಬ್ಬಳ್ಳಿ-ಧಾರವಾಡಕ್ಕೆ ರಿಂಗ್ ರಸ್ತೆ ಅಗತ್ಯವಿದೆ ಎಂಬ ಪ್ರಸ್ತಾವನೆ ಇಡಲಾಗಿತ್ತು. ಒಟ್ಟು 900 ಕೋಟಿ ರೂಪಾಯಿ ವೆಚ್ಚದಲ್ಲಿ ರಿಂಗ್ ರಸ್ತೆ ನಿರ್ಮಿಸಿದರೆ ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಕಡೆಗೆ ತೆರಳಲು ಅನುಕೂಲವಾಗುತ್ತವೆ. ಅವಳಿ ನಗರದಲ್ಲಿ ಸಂಚಾರ ಮಾಡುವ ವಾಹನಗಳಿಂದ ಉಂಟಾಗುವ ಶೇ. 80ರಷ್ಟು ದಟ್ಟಣೆ ಕಡಿಮೆ ಆಗುತ್ತದೆ. ಹೀಗಾಗಿ ಈ ರಿಂಗ್ ರಸ್ತೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಈಗಾಗಲೇ ಕೆಂದ್ರ ಸರ್ಕಾರ ಯೋಜನೆಯ ಡಿಪಿಆರ್ ಗೆ ಅನುಮೋದನೆ ನೀಡಿದ್ದು, ಶೀಘ್ರವೇ ಅನುಷ್ಠಾನಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.













Click it and Unblock the Notifications