KS Eshwarappa: ಗೆದ್ದು ನಿಮ್ಮ ಬಳಿ ಬರುವೆ.. ಪೋನ್ನಲ್ಲಿ ಈಶ್ವರಪ್ಪ ಹೇಳಿದ್ಯಾರಿಗೆ?
ಶಿವಮೊಗ್ಗ, ಮಾರ್ಚ್ 21: ಬಿಜೆಪಿಯಲ್ಲಿ ಲೋಕಸಭಾ ಚುನಾವಣಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಂಡಾಯದ ಕಿಚ್ಚು ಹೆಚ್ಚಾಗಿದೆ. ಹಾವೇರಿ ಲೋಕಸಭೆ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಕಾಂತೇಶ್ಗೆ ಟಿಕೆಟ್ ನೀಡದೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ.
ಹೌದು, ವಿಧಾನಸಭಾ ಚುನಾವಣೆಯಲ್ಲಿಯೂ ಸಹ ಈಶ್ವರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಪುತ್ರನಿಗೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಇದೀಗ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೈಕಮಾಂಡ್ ಹಾಗೂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸ್ವತಃ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ ನನ್ನ ಮಗನಿಗೆ ಟಿಕೆಟ್ ಕೊಡಿಸುತ್ತೇನೆ.. ಹೈಕಮಾಂಡ್ ವರಿಷ್ಠರ ಜತೆ ಮಾತನಾಡಿ ನಿನ್ನ ಮಗನಿಗೆ ಟಿಕೆಟ್ ಕೊಡಿಸುತ್ತೇನೆ ಎಂದು ಭರವಸೆ ಕೊಟ್ಟಿದ್ದರು, ಆದ್ರೆ ಇದೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಡಿಸಿ ಮಾತು ತಪ್ಪಿದ್ದಾರೆ ಎಂದು ಈಶ್ವರಪ್ಪ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಕೆ ಎಸ್ ಈಶ್ವರಪ್ಪ ಬಹಿರಂಗವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳುವ ಮೂಲಕ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ತೊಡೆ ತಟ್ಟುವ ಮೂಲಕ ಬಂಡಾಯದ ಕಹಳೆ ಮೊಳಗಿಸಿದ್ದಾರೆ.
ಇನ್ನೂ ಕೆ ಎಸ್ ಈಶ್ವರಪ್ಪ ನಾನು ನರೇಂದ್ರ ಮೋದಿ ಅವರಿಗೆ ಬೆಂಬಲಿಸುತ್ತೇನೆ. ಎಂದಿಗೂ ಮೋದಿ ಅವರ ವಿರುದ್ಧವಾಗಿ ನಡೆಯುವುದಿಲ್ಲ. ನನ್ನ ಹೋರಾಟ ಏನೇ ಇದ್ದರು ಅದು ಕುಟುಂಬ ರಾಜಕಾರಣದ ವಿರುದ್ಧವಾಗಿ ಎಂದು ಪರೋಕ್ಷವಾಗಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧವಾಗಿ ನಿರಂತರವಾಗಿ ಕಿಡಿಕಾರಿದ್ದಾರೆ. ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುವುದಿಲ್ಲ. ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿರುವುದನ್ನು ಬಿಡಿಸಲು ನಾನು ಸ್ಪರ್ಧೆ ಮಾಡುತ್ತೇನೆ. ನೊಂದ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪತಂತ್ರವಾಗಿ ನಿರ್ಧರಿಸುವೆ ಎಂದು ಈಶ್ವರಪ್ಪ ಅವರು ಹೇಳಿದ್ದರು.

ಇತ್ತ ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕರ್ನಾಟಕದ ಕಲಬುರ್ಗಿ ಹಾಗೂ ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರಣಕಹಳೆ ಮೊಳಗಿಸಿದ್ದು, ಮಾರ್ಚ್ 18 ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದ ಫ್ರೀಡಂಪಾರ್ಕ್ನ ಅಲ್ಲಮಪ್ರಭು ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಕರ್ನಾಟಕದ 28 ಕ್ಷೇತ್ರಗಳನ್ನ ಗೆಲ್ಲಿಸಿಕೊಡಿ ಎಂದು ರಾಜ್ಯದ ಜನತೆ ಮನವಿ ಮಾಡಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಗೈರಾಗಿರುವುದು ಹಲವು ಚರ್ಚೆಗೆ ಕಾರಣವಾಗಿತ್ತು.
ಇನ್ನೂ ಮೋದಿ ಅವರು ಶಿವಮೊಗ್ಗದ ಫ್ರೀಡಂಪಾರ್ಕ್ನ ಅಲ್ಲಮಪ್ರಭು ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದ ವೇದಿಕೆಗೆ ಬರುವುದಕ್ಕೂ ಮುನ್ನವೇ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರಿಗೆ ಆರ್ ಎಸ್ ಎಸ್ ಮುಖಂಡ ಗೋಪಾಲ್ ಅವರು ಕರೆ ಮಾಡಿದ್ದು, ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿದ್ದಾರೆ. ಮೊದಲು ಆ ಕಾರ್ಯಕ್ರಮಕ್ಕೆ ಹೋಗಿ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಗೆದ್ದು ನಿಮ್ಮ ಬಳಿ ಬರುವೆ ಎಂದು ದೂರವಾಣಿ ಕರೆಯಲ್ಲಿ ಆರ್ ಎಸ್ ಎಸ್ ಮುಖಂಡರಿಗೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ ಎನ್ನಲಾಗಿದೆ.
ಒಟ್ನಲಿ, ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಾಕಷ್ಟು ಕುತೂಹಲಕಾರಿ ಕ್ಷೇತ್ರವಾಗಿದ್ದು, ಬಿಜೆಪಿ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದ್ರೆ, ಇತ್ತ ಕಾಂಗ್ರೆಸ್ ನಿಂದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಮಗಳು ಹಾಗೂ ಡಾ. ರಾಜ್ ಕುಮಾರ್ ಅವರ ಹಿರಿಯ ಸೊಸೆ ಗೀತಾ ಶಿವಕುಮಾರ್ ಕಣದಲ್ಲಿದ್ದಾರೆ. ಆದ್ರೆ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ನನಗೆ ಮೋಸ ಮಾಡಿದ್ದಾರೆ ಎಂದು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆಗೆ ರೆಡಿಯಾಗಿದ್ದು, ಹೈಕಮಾಂಡ್ ಮಧ್ಯ ಪ್ರದೇಶಿಸಿ ಅಸಮಾಧಾನ ಶಮನ ಮಾಡುತ್ತಾ ಎಂಬುದನ್ನ ಕಾದು ನೋಡ್ಬೇಕಾಗಿದೆ.












Click it and Unblock the Notifications