ಅನಿರೀಕ್ಷಿತ ಬೆಳವಣಿಗೆ: ಉಸ್ತುವಾರಿ ಸ್ಥಾನದಿಂದ ದಿಗ್ವಿಜಯ್ ಸಿಂಗ್ ಎತ್ತಂಗಡಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಸೋನಿಯಾ ಆಪ್ತವಲಯದಲ್ಲಿ ಗುರುತಿಸಿಕೊಳ್ಳುವ ದಿಗ್ವಿಜಯ್ ಸಿಂಗ್ ಅವರನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ತೆಗೆದು ಹಾಕಲಾಗಿದೆ.
ನವದೆಹಲಿ, ಏ 29: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಸೋನಿಯಾ ಆಪ್ತವಲಯದಲ್ಲಿ ಗುರುತಿಸಿಕೊಳ್ಳುವ ದಿಗ್ವಿಜಯ್ ಸಿಂಗ್ ಅವರನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ತೆಗೆದು ಹಾಕಲಾಗಿದೆ.
ದಿಗ್ವಿಜಯ್ ಸಿಂಗ್ ಸ್ಥಾನಕ್ಕೆ ಕೆ ಸಿ ವೇಣುಗೋಪಾಲ್ ಅವರನ್ನು ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ನೋಡಿಕೊಳ್ಳುವಂತೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ. ದಿಗ್ವಿಜಯ್ ಸಿಂಗ್ ಅವರನ್ನು ಗೋವಾ ಉಸ್ತುವಾರಿ ಸ್ಥಾನದಿಂದಲೂ ತೆಗೆದು ಹಾಕಲಾಗಿದೆ.

ಇತ್ತೀಚೆಗೆ ನಡೆದ ಗೋವಾ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನಗಳಿಸಿದ್ದರೂ ಅಧಿಕಾರಕ್ಕೆ ಬರುವಲ್ಲಿ ವಿಫಲವಾಗಿತ್ತು. ದಿಗ್ವಿಜಯ್ ಸಿಂಗ್ ವೈಫಲ್ಯವೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ವಲಯದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು.
ಗೋವಾದಲ್ಲಿ ಎ ಚೆಲ್ಲಕುಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಇದರ ಜೊತೆಗೆ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಮಧುಸೂದನ್ ಮಿಸ್ತ್ರಿ ಅವರನ್ನೂ ವಜಾಗೊಳಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.
ದಿಗ್ವಿಜಯ್ ಸಿಂಗ್ ಗೋವಾದ ಉಸ್ತುವಾರಿಯಾಗಿರುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಆಭಾರಿಯಾಗಿದ್ದೇನೆಂದು ಗೋವಾ ಸಿಎಂ ಮನೋಹರ್ ಪಾರಿಕ್ಕರ್ ಲೇವಡಿ ಮಾಡಿದ್ದರು.
ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಗೆ ಪೂರ್ವತಯಾರಿಯಾಗಿ ಸೋನಿಯಾ ಗಾಂಧಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿಯಿದೆ.












Click it and Unblock the Notifications