ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಎಂದ ಬೊಮ್ಮಾಯಿ: ಮೋದಿ ಸರ್ಕಾರದ ನಡೆ ಕುರಿತು ಟ್ವೀಟಿಸಿದ ದಿನೇಶ್ ಗುಂಡೂರಾವ್
ಬೆಂಗಳೂರು, ಜೂನ್ 06: ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಸಾಧ್ಯತೆಯ ಬಗ್ಗೆ ಹೇಳಿಕೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, 'ಬೊಮ್ಮಾಯಿಯವರೇ,ಯಾವ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದೀರಿ? ತನ್ನ ರಾಜಕೀಯ ವಿರೋಧಿಗಳನ್ನ ಮಟ್ಟ ಹಾಕಲು ತನಿಖಾ ಏಜೇನ್ಸಿಗಳನ್ನು, ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ?' ಎಂದು ಪ್ರಶ್ನಿಸಿದ್ದಾರೆ.

'ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ. ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಜವಬ್ಧಾರಿಯುತ ಸರ್ಕಾರದ ಕರ್ತವ್ಯ. ನಮ್ಮ ಸರ್ಕಾರ ಮಾಡುತ್ತಿರುವುದು ಅದನ್ನೆ' ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
'ಬೊಮ್ಮಾಯಿಯವರೇ ಒಂದು ಜವಾಬ್ಧಾರಿಯುತ ಸರ್ಕಾರವಾಗಿ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಳ್ಳುವವರ, ಸಂವಿಧಾನ ಬಾಹಿರ ಕೃತ್ಯ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಮ್ಮ ಪ್ರಕಾರ ತುರ್ತುಪರಿಸ್ಥಿತಿಯಾದರೆ ನಿಮ್ಮ ವಿವೇಚನಾ ಶಕ್ತಿಯ ಬಗ್ಗೆ ಅನುಕಂಪವಿದೆ. ನೀವು ಕಾನೂನು ಉಲ್ಲಂಘಿಸುವವರ ಪರವೇ?' ಎಂದು ಪ್ರಶ್ನಿಸಿದ್ದಾರೆ.
ಬೊಮ್ಮಾಯಿ ಆರೋಪವೇನು?
ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಶೀಘ್ರದಲ್ಲಿಯೇ ರಾಜ್ಯದ ಜನತೆ ತುರ್ತು ಪರಿಸ್ಥಿತಿ ಎದುರಿಸಲಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ದಯನೀಯ ಸೋಲಿನ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಶಾಸಕರ ಜಿಲ್ಲಾ ಮಟ್ಟದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
'ಅವರು (ಕಾಂಗ್ರೆಸ್ ನಾಯಕರು) ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಗೋಹತ್ಯೆ ವಿರೋಧಿ ಕಾಯ್ದೆಯನ್ನು ಹಿಂಪಡೆಯುವುದು, ಪಠ್ಯಪುಸ್ತಕಗಳನ್ನು ಪರಿಷ್ಕರಿಸುವುದು ಮತ್ತು ಹಿಂದೂ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದಾರೆ' ಎಂದು ಹೇಳಿದ್ದಾರೆ.
ಅವರು ತಮ್ಮನ್ನು ವಿರೋಧಿಸುವ ಮತ್ತು ವಾಕ್ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವ ಪ್ರತಿಯೊಂದು ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ನಾನು ಹೇಳುತ್ತೇನೆ, ಜನರು ಶೀಘ್ರದಲ್ಲೇ ತುರ್ತು ಪರಿಸ್ಥಿತಿಯಂತಹ ಪರಿಸ್ಥಿತಿಯನ್ನು ನೋಡುತ್ತಾರೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬಡವರಿಗೆ ಸಹಾಯ ಮಾಡಲು ಮತ್ತು ರಾಜ್ಯವನ್ನು ಅಭಿವೃದ್ಧಿಯ ಹಾದಿಯಲ್ಲಿ ಕೊಂಡೊಯ್ಯಲು ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲು ಅಲ್ಲ ಎಂದೂ ಅವರು ಹೇಳಿದ್ದಾರೆ.
'ನಾವು (ಬಿಜೆಪಿ) ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮೌನವಾಗಿರಲು ಸಾಧ್ಯವಿಲ್ಲ' ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆಯ ದೊಡ್ಡ ಸೋಲಿಗೆ ಕಾರಣವೇನು ಎಂದು ಕೇಳಿದಾಗ ಪ್ರತಿಕ್ರಿಯಿಸಿದ ಬೊಮ್ಮಾಯಿ, ಬಿಜೆಪಿ ಅಲ್ಪ ಮತಗಳ ಅಂತರದಿಂದ ಹಲವು ಸ್ಥಾನಗಳನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.
'ನಾವು ಜನರೊಂದಿಗೆ ಸಂಪರ್ಕದಲ್ಲಿರುತ್ತೇವೆ. ಅಭ್ಯರ್ಥಿಗಳನ್ನು ತಡವಾಗಿ ಘೋಷಣೆ ಮಾಡಿರುವುದು ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ನಷ್ಟವಾಗಿದೆ. ಜೊತೆಗೆ ಹೊಸ ಮುಖಗಳಿಗೆ ಅವಕಾಶ ನೀಡಿದ ಕ್ಷೇತ್ರಗಳಲ್ಲಿ ಮತಗಳನ್ನು ಕ್ರೋಢೀಕರಿಸುವಲ್ಲಿ ವಿಫಲವಾಗಿದ್ದೇವೆ' ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ವಿದ್ಯುತ್ ಇಲಾಖೆಯಲ್ಲಿ ಅವ್ಯವಸ್ಥೆ ಸೃಷ್ಟಿಸುತ್ತಿದೆ ಎಂದು ಮಾಜಿ ಸಿಎಂ ಆರೋಪಿಸಿದ್ದಾರೆ.
'ರಾಜ್ಯದಲ್ಲಿ ವಿದ್ಯುತ್ ನಿಗಮಗಳು ಭಾರಿ ಆರ್ಥಿಕ ಹೊರೆಯಿಂದ ತತ್ತರಿಸುತ್ತಿವೆ. ಈಗ, ಖಾತರಿ ಯೋಜನೆಯು ಸಮಸ್ಯೆಗಳನ್ನು ಹೆಚ್ಚಿಸುತ್ತಿವೆ. ಸರ್ಕಾರ ಪ್ರತಿ ಯೂನಿಟ್ ವಿದ್ಯುತ್ ಬಿಲ್ ಅನ್ನು 70 ಪೈಸೆ ಹೆಚ್ಚಿಸಿದೆ. ಈಗ ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಬಳಕೆಯ ಸರಾಸರಿಯನ್ನು ತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತಿದೆ. ಹೀಗಾಗಿ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಮುಂದಿನ ದಿನಗಳು ಸರ್ಕಾರಕ್ಕೆ ಮಾತ್ರವಲ್ಲ, ಜನರಿಗೂ ಕಠಿಣವಾಗಿರುತ್ತದೆ' ಎಂದು ಅವರು ಎಚ್ಚರಿಸಿದ್ದಾರೆ.
ಬಿಜೆಪಿ ಸರಕಾರದ ಅವಧಿಯಲ್ಲಿ ಮಂಜೂರಾದ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೊಮ್ಮಾಯಿ ಅವರು, 'ಖಾತ್ರಿ ಯೋಜನೆಗಳನ್ನು ಸರಿದೂಗಿಸಲು ನೀರಾವರಿ ಯೋಜನೆಗಳು ಸೇರಿದಂತೆ ಸಾಮಾಜಿಕ ಮತ್ತು ಮೂಲಸೌಕರ್ಯ ಯೋಜನೆಗಳನ್ನು ನಿಲ್ಲಿಸದಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಪತ್ರ ಬರೆದಿದ್ದೇನೆ. ಅವುಗಳ ಅನುಷ್ಠಾನಕ್ಕೆ ಹಣದ ಮೂಲವನ್ನು ಸಿದ್ದರಾಮಯ್ಯ ಬಹಿರಂಗಪಡಿಸಿಲ್ಲ' ಎಂದು ಹೇಳಿದ್ದಾರೆ.












Click it and Unblock the Notifications