ಸಿದ್ದರಾಮಯ್ಯ ಬಜೆಟ್ : ಯಡಿಯೂರಪ್ಪ ಹೇಳುವುದೇನು?
ಬೆಂಗಳೂರು, ಮಾ. 14 : ಮುಖ್ಯಮಂತ್ರಿಯಾಗಿ ಮೂರನೇ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ನಿರಾಸೆ ಉಂಟುಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ 2015-16ನೇ ಸಾಲಿನ ಬಜೆಟ್ ಬಗ್ಗೆ ಪತ್ರಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಯಡಿಯೂರಪ್ಪ ಅವರು, ನಮ್ಮ ಸರ್ಕಾರ ರಾಜ್ಯದಲ್ಲಿ ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡಿ ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಮಾಡಿತ್ತು. ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡುವುದು ಹಾಗಿರಲಿ, ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸಹಾಯವನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ. [ಬಜೆಟ್ ಮುಖ್ಯಾಂಶಗಳು]

1,42, 534 ಕೋಟಿ ರೂ. ಬಜೆಟ್ನಲ್ಲಿ ಯೋಜನ ಗಾತ್ರ ಕನಿಷ್ಠ ಶೇ 20ರಷ್ಟು ಏರಿಕೆಯಾಗಬೇಕಿತ್ತು. ಆದರೆ, ಯೋಜನ ಗಾತ್ರ ಶೇ 10.67ರಷ್ಟು ಮಾತ್ರ ಏರಿಕೆ ಕಂಡಿದೆ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.[ಬೆಂಗಳೂರಿಗೆ ಬಜೆಟ್ ನಲ್ಲಿ ಸಿಕ್ಕಿದ್ದೇನು?]
ಹೈದರಾಬಾದ್ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹಿಂದಿನ ಅಧಿವೇಶನದಲ್ಲಿ ಹೇಳಿದ್ದರು. ಆದರೆ, ಬಜೆಟ್ನಲ್ಲಿ ಆ ಭಾಗಕ್ಕೆ ಹೆಚ್ಚಿನ ಅನುದಾನ ನೀಡದೆ ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ರಾಜ್ಯದಿಂದ ಕೈಗಾರಿಕೆಗಳು ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳುತ್ತಿವೆ. ಇಂತಹ ಸಮುಯದಲ್ಲಿ ಕೈಗಾರಿಕೆಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕಾಗಿತ್ತು. ಆದರೆ, ಬಜೆಟ್ನಲ್ಲಿ ಅಂತಹ ಯಾವುದೇ ತುರ್ತು ಕಾರ್ಯಕ್ರಮಗಳು ಘೋಷಣೆಯಾಗಿಲ್ಲ ಎಂದು ಅವರು ಟೀಕಿಸಿದ್ದಾರೆ.
ಜನಸಾಮಾನ್ಯರಿಗೆ ಬಹುಮುಖ್ಯವಾಗಿ ಅವಶ್ಯಕತೆ ಇರುವ ಪೆಟ್ರೋಲ್, ಡಿಸೇಲ್ ದರಗಳ ಮೇಲಿನ ಸೆಸ್ ಏರಿಕೆ ಮಾಡಿರುವುದು ಖಂಡನೀಯ ಎಂದು ಹೇಳಿರುವ ಯಡಿಯೂರಪ್ಪ, ರಾಜ್ಯದ ಬಹುತೇಕ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಯಾವುದೇ ಪ್ರಸ್ತಾಪವನ್ನು ಘೋಷಿಸಿಲ್ಲ ಎಂದು ತಿಳಿಸಿದ್ದಾರೆ.












Click it and Unblock the Notifications