ಕನ್ನಡಿಗರೇ ವರ್ಷವಿಡೀ ‘ಕರ್ನಾಟಕ ಸಂಭ್ರಮ’ ನಡೆಯಲಿದೆ: ಕಾರಣ ತಿಳಿಯಿರಿ
ಬೆಂಗಳೂರು: ದೇಶದಲ್ಲಿ ಕರ್ನಾಟಕ ಆರ್ಥಿಕವಾಗಿ, ಸಾಮಾಜಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಹೀಗೆ ದೇಶದ ಅಭಿವೃದ್ಧಿಯಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿರುವ ಕರ್ನಾಟಕ ಹೊಸ ಸಂಭ್ರಮದಲ್ಲಿದೆ. ಅದೇನೆಂದರೆ ನಮ್ಮ ರಾಜ್ಯಕ್ಕೆ 'ಕರ್ನಾಟಕ' ಎಂದು ನಾಮಕರಣ ಆಗಿ 50 ವರ್ಷ ತುಂಬುತ್ತಿದ್ದು, ಈ ಸಂಭ್ರಮ ಆಚರಿಸಲು ರಾಜ್ಯ ಸರ್ಕಾರ ಕೂಡ ಭರ್ಜರಿ ಸಿದ್ಧತೆ ನಡೆಸಿದೆ.
ಅಂದಹಾಗೆ 'ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ' ಎಂಬ ಶೀರ್ಷಿಕೆ ಅಡಿಯಲ್ಲಿ 01 ನವೆಂಬರ್ 2023ರಿಂದ 01 ನವೆಂಬರ್ 2024ರ ತನಕ 'ಕರ್ನಾಟಕ ಸಂಭ್ರಮ' ಆಚರಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆ, ಕರ್ನಾಟಕ ಸಂಭ್ರಮ ಕಾರ್ಯಕ್ರಮ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿ ವಿವಿಧ ಇಲಾಖೆ ಸಹಯೋಗದಲ್ಲಿ ನಡೆಯಲಿದೆ. ಹೀಗಾಗಿ ಸಮಾರಂಭ ಆಯೋಜನೆ ಕುರಿತು ಚರ್ಚೆ ನಡೆಸಲು, ಇಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ನೆಲದ ಸಂಸ್ಕೃತಿಗೆ ಒತ್ತು
ಕಾರ್ಯಕ್ರಮದಲ್ಲಿ ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳುವುದು, ಕನ್ನಡ ನೆಲದ ಸಂಸ್ಕೃತಿ ಹೆಚ್ವು ಬಿಂಬಿಸಬೇಕು, ಕನ್ನಡ ನಾಡು ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನ ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ದಾಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಸಿಎಂ ಸೂಚಿಸಿದರು. ಅಲ್ಲದೆ ನಾಡಿನ ಸಾಹಿತಿಗಳ ಜತೆ ಈ ಬಗ್ಗೆ ಚರ್ಚಿಸಿ ಅವರ ಸಲಹೆ ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಸ್ಮಾರಕ ಅಭಿವೃದ್ಧಿ , ಜೀರ್ಣೋದ್ಧಾರ
ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ ಹಾಗೂ ಧಾರವಾಡದ ದಿ: ಅದರಗುಂಚಿ ಶಂಕರಗೌಡ , ಬಳ್ಳಾರಿ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ದಿ: ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಅಭಿವೃದ್ಧಿ , ಜೀರ್ಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿದಂತೆ ಹಲವು ರೀತಿ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಯಿತು.

ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ
ಇನ್ನು ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ, ಲೇಸರ್ ಶೋ/ಧ್ವನಿ, ಬೆಳಕು ಕಾರ್ಯಕ್ರಮ, ಕರ್ನಾಟಕಕ್ಕೆ ಕೊಡುಗೆ ನೀಡಿದ 50 ಮಹಿಳೆಯರಿಗೆ ಪ್ರಶಸ್ತಿ ನೀಡುವುದು ಹಾಗೂ ನವೆಂಬರ್ 2024 ಕ್ಕೆ ಸಮಾರೋಪ ಸಮಾರಂಭ ಕಾರ್ಯಕ್ರಮ ಆಯೋಜಿಸುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಹಾಗೇ ಕರ್ನಾಟಕ ಸಂಭ್ರಮ- 50 ಕಾರ್ಯಕ್ರಮದ ಲಾಂಛನವನ್ನು ಅಕ್ಟೋಬರ್ 17 ರಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಯಿತು.
ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಆರೋಪ
ಕರ್ನಾಟಕ ಎಂದು ನಾಮಕರಣಗೊಂಡು 50ನೇ ವರ್ಷವನ್ನು ಹಿಂದಿನ ಸರ್ಕಾರ ವೈಭವದಿಂದ ಆಚರಿಸಬೇಕಿತ್ತು. ಅಂದ್ರೆ 1-11-2022ರಿಂದ 1-11-2023ರ ತನಕ ಆಚರಣೆ ನಡೆಯಬೇಕಿತ್ತು. ಹಿಂದಿನ ಸರ್ಕಾರ ಏಕೆ ಆಚರಿಸಲಿಲ್ಲ ? ಈ ನಿರ್ಲಕ್ಷ್ಯ ಸರಿನಾ ? ಎಂದು ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು. ಈಗ 50 ವರ್ಷ ತುಂಬಿ 51ನೇ ವರ್ಷಕ್ಕೆ ಕಾಲಿಡಲಿದ್ದು 50ನೇ ವರ್ಷ ನವೆಂಬರ್ 2022 ರಂದೇ ಆಚರಿಸಬೇಕಿತ್ತು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.
ಹಿಂದಿನ ಸರ್ಕಾರ ಈ ವಿಚಾರದಲ್ಲಿ ಎಡವಿದೆ 50 ವರ್ಷ ತುಂಬಿದ ಬಳಿಕ ಮಾಡಲು ಹೊರಟರೆ ಅದಕ್ಕೆ ಮಹತ್ವವಿರುತ್ತದೆಯೇ? ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಕೊನೆಗೆ 1-11-2023 ರಿಂದ 1-11-2024ರ ತನಕ ಅರ್ಥಪೂರ್ಣವಾಗಿ ಆಚರಿಸಿ ಎನ್ನುವ ತೀರ್ಮಾನ ತೆಗೆದುಕೊಂಡ್ರು. ಈ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಇದೇ ವೇಳೆ ಸಿಎಂ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಈ ಬಾರಿ ಯಾವುದೇ ಅಡೆತಡೆ ಬಾರದಂತೆ ಒಂದು ವರ್ಷ ಪೂರ್ತಿ ಆಚರಿಸಲು ಸೂಚನೆ ನೀಡಿದ್ದಾರೆ.












Click it and Unblock the Notifications