ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಡಿಕೆಶಿಗೆ ಉತ್ತರಿಸಲು ಕಾಲಾವಕಾಶ ನೀಡಿದ ಹೈಕೋರ್ಟ್
ಬೆಂಗಳೂರು, ಸೆ. 27: ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಆಕ್ಷೇಪಣೆಗೆ ಉತ್ತರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಹೈಕೋರ್ಟ್ ಕಾಲಾವಕಾಶ ನೀಡಿದೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ, ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ಶಿವಕುಮಾರ್ ಪರ ವಕೀಲರು, ಅರ್ಜಿ ಕುರಿತು ಸಿಬಿಐ ಆಕ್ಷೇಪಣೆ ಸಲ್ಲಿಸಿದೆ. ಅದಕ್ಕೆ ಉತ್ತರಿಸಲು ಒಂದಿಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಆ ಮನವಿ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿ ಕುರಿತು ಸಿಬಿಐ ಸಲ್ಲಿಸಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು ದಸರಾ ಹಬ್ಬದ ರಜೆಯ ನಂತರಕ್ಕೆ ಮುಂದೂಡಿದೆ.
2012ರ ಏ.1ರಿಂದ 2018ರ ಏ.30ರವರೆಗಿನ ಆದಾಯ ಪರಿಶೀಲನಾ ಅವಧಿಗೂ ಮುನ್ನ ಡಿ.ಕೆ.ಶಿವಕುಮಾರ್ ಅವರ ಸ್ಥಿರ ಮತ್ತು ಚರಾಸ್ತಿಯ ಒಟ್ಟು ಮೊತ್ತ 33.69 ಕೋಟಿ ರೂ. ಆಗಿತ್ತು. ಪರಿಶೀಲನಾ ಅವಧಿಯಲ್ಲಿ ಈ ಮೊತ್ತ 168.70 ಕೋಟಿ ರೂ.ಗೆ ಏರಿಕೆಯಾಗಿದೆ. ಆದಾಯ ಹೆಚ್ಚಳಕ್ಕೆ ಡಿ.ಕೆ.ಶಿವಕುಮಾರ್ ಸೂಕ್ತ ದಾಖಲೆಗಳನ್ನು ಒದಗಿಸಿಲ್ಲ ಎನ್ನುವುದು ಸಿಬಿಐ ಆರೋಪವಾಗಿದೆ.
ಡಿಕೆಶಿ ಪರ ವಕೀಲರು ವಾದ ಮಂಡಿಸಿ, ಎಫ್ಐಆರ್ ನಲ್ಲಿ ಆರೋಪದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಜೊತೆಗೆ ಆದಾಯ ತೆರಿಗೆ ಇಲಾಖೆ ಇಡೀ ಕುಟುಂಬದ ಆದಾಯ ಗಣನೆಗೆ ತೆಗೆದುಕೊಂಡಿದೆ. ನಿಯಮದಂತೆ ಡಿ.ಕೆ.ಶಿವಕುಮಾರ್ ಅವರ ಆದಾಯವನ್ನು ಮಾತ್ರ ಪರಿಗಣಿಸಬೇಕಿತ್ತು. ಆದರೆ ಹಾಗೆ ಮಾಡದೆ ನಿಯಮ ಉಲ್ಲಂಘಿಸಿರುವುದರಿಂದ ಪ್ರಕರಣ ರದ್ದುಗೊಳಿಸಬೇಕು," ಎಂದು ನ್ಯಾಯಪೀಠವನ್ನು ಕೋರಿದರು.
ಬೆಂಗಳೂರು ಮತ್ತು ನವದೆಹಲಿಯ ವಿವಿಧೆಡೆ ನಡೆಸಲಾಗಿದ್ದ ಆದಾಯ ತೆರಿಗೆ (ಐ.ಟಿ) ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಇತರ ನಾಲ್ವರು ಆರೋಪಿಗಳ ವಿರುದ್ಧ ಆದಾಯ ತೆರಿಗೆ ಇಲಾಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದೇ ಪ್ರಕರಣದ ಬಗ್ಗೆ ಸಿಬಿಐ ಕೂಡ ತನಿಖೆ ನಡೆಸುತ್ತಿದೆ.
ಪ್ರಕರಣದ ಹಿನ್ನೆಲೆ: 2017ರ ಆಗಸ್ಟ್ 2ರಂದು ಐ.ಟಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ಗೆ ಸೇರಿದ ಬೆಂಗಳೂರು ಮತ್ತು ನವದೆಹಲಿಯ ಮನೆಗಳ ಮೇಲೆ ದಾಳಿ ಮಾಡಿ 8,59,69,100 ರೂ. ಮೊತ್ತವನ್ನು ಜಪ್ತಿ ಮಾಡಿದ್ದರು.
ಡಿ.ಕೆ.ಶಿವಕುಮಾರ್,
ಸಚಿನ್
ನಾರಾಯಣ,
ಸುನಿಲ್
ಕುಮಾರ್
ಶರ್ಮ,
ಆಂಜನೇಯ
ಹನುಮಂತಯ್ಯ
ಮತ್ತು
ರಾಜೇಂದ್ರ
ವಿರುದ್ಧ
ಆದಾಯ
ತೆರಿಗೆ
ಕಾಯ್ದೆ-1961ರ
ಕಲಂ
277
ಮತ್ತು
278
ಹಾಗೂ
ಭಾರತೀಯ
ದಂಡ
ಸಂಹಿತೆಯ
ಕಲಂ
120
ಬಿ,
193
ಹಾಗೂ
199ರ
ಪ್ರಕಾರ
ಪ್ರಕರಣ
ದಾಖಲಿಸಲಾಗಿದೆ.
ಸಿಬಿಐ
ಕೂಡ
ಪ್ರತ್ಯೇಕ
ತನಿಖೆ
ನಡೆಸುತ್ತಿದೆ.
'ನಮ್ಮನ್ನು ಪ್ರಕರಣದಿಂದ ಕೈಬಿಡಬೇಕು' ಎಂದು ಕೋರಿ ಆರೋಪಿಗಳಾದ ಡಿ.ಕೆ.ಶಿವಕುಮಾರ್, ಎನ್.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಸಲ್ಲಿಸಿರುವ ಅರ್ಜಿಗಳನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಕೋರ್ಟ್ ವಿಚಾರಣೆ ನಡೆಸಿತ್ತು.
ದೆಹಲಿಯ ಫ್ಲಾಟ್ನಲ್ಲಿ 8 ಕೋಟಿ ರೂ. ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್, ಅವರ ಅಪ್ತರ ವಿರುದ್ಧ ದೆಹಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿ ಬಂಧಿಸಿದ್ದರು. ಕಾಂಗ್ರೆಸ್ ನಾಯಕರನ್ನು ರಕ್ಷಣೆ ಮಾಡಿದ್ದಕ್ಕೆ ನನ್ನ ಮೇಲೆ ಇಡಿ ದಾಳಿ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಅರೋಪಿಸಿದ್ದರು.
ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಡಿ.ಕೆ. ಶಿವಕುಮಾರ್ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ. ಇದೀಗ ಪ್ರಕರಣದ ತನಿಖೆ ಪೂರ್ಣಗೊಳಿಸಿ ದೆಹಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ಆರಂಭವಾಗಿದೆ. ಕರ್ನಾಟಕದಲ್ಲಿ 2023 ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಪ್ರಕರಣ ಡಿ.ಕೆ. ಶಿವಕುಮಾರ್ ಅವರ ಪಾಲಿಗೆ ಕಂಟಕವಾದರೂ ಅಚ್ಚರಿ ಪಡಬೇಕಿಲ್ಲ.