ಅಕ್ರಮ ಆಸ್ತಿ ಗಳಿಕೆ ಆರೋಪ: ಸಚಿವ ವಿ.ಸೋಮಣ್ಣಗೆ ಕೋರ್ಟ್ ಹಾಜರಿಗೆ ವಿನಾಯ್ತಿ
ಬೆಂಗಳೂರು, ಏ.17: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಖುದ್ದು ಹಾಜರಿಯಿಂದ ವಿಶೇಷ ನ್ಯಾಯಾಲಯದಿಂದ ವಿನಾಯ್ತಿ ಸಿಕ್ಕಿದೆ.
ಸಂಪುಟ ದರ್ಜೆ ಸಚಿವನಾಗಿರುವುದರಿಂದ ಪಕ್ಷದ ಕಾರ್ಯಕಾರಿಣಿಯಲ್ಲಿ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುವುದು ತುರ್ತು ಅಗತ್ಯವಿದ್ದು, ಖುದ್ದು ನ್ಯಾಯಾಲಯದ ಮುಂದೆ ಹಾಜರಾಗಲು ಆಗಿಲ್ಲ. ಇದಕ್ಕಾಗಿ ವಿನಾಯಿತಿ ನೀಡುವಂತೆ ಕೋರಿ ವಸತಿ ಸಚಿವ ವಿ ಸೋಮಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರ ಮಾನ್ಯ ಮಾಡಿದೆ.
ನಿಗದಿಯಂತೆ ಏಪ್ರಿಲ್ 16 ರಂದು ಖುದ್ದು ಹಾಜರಾಗುವಂತೆ ನ್ಯಾಯಾಲಯವು ಸೋಮಣ್ಣ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಮೂಡಲಪಾಳ್ಯದ ರಾಮಕೃಷ್ಣ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿರುದ್ಧದ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ ಜಯಂತ್ ಕುಮಾರ್ ಅವರು ನಡೆಸಿದರು.
ವಿಚಾರಣೆ ಆರಂಭವಾಗುತ್ತಿದ್ದಂತೆ ಸಚಿವ ಸೋಮಣ್ಣ ಅವರ ಪರ ವಕೀಲರು,ಹಾಜರಾತಿಯಿಂದ ವಿನಾಯಿತಿ ಕೋರಿ ಪ್ರಮಾಣ ಪತ್ರ ಸಲ್ಲಿಸಿದರು. ಅದನ್ನು ಮಾನ್ಯ ಮಾಡಿದ ನ್ಯಾಯಾಲಯವು ಸೋಮಣ್ಣಗೆ ಇಂದು ಹಾಜರಾತಿಯಿಂದ ವಿನಾಯಿತಿ ನೀಡಿ ವಿಚಾರಣೆಯನ್ನು ಜೂನ್ 20ಕ್ಕೆ ಮುಂದೂಡಿದೆ.
ಬಂಧನ ಭೀತಿ ಮುಂದುವರಿಕೆ: ಈ ಮಧ್ಯೆ ಅವರ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.ಕಾರಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ವಜಾಗೊಳಸಿದೆದ. ಜೊತೆಗೆ ಹೈಕೋರ್ಟ್ ಕೂಡ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.
ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅವರ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಅಲ್ಲದೆ, ಸಿಆರ್ ಪಿಸಿ ಸೆಕ್ಷನ್ 438ರಡಿ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಲಾಗದು. ಈ ಹಂತದಲ್ಲಿ ಜಾಮೀನು ನೀಡಲು ಯಾವುದೇ ಸಕಾರಣಗಳಿಲ್ಲ ಎಂದು ಹೇಳಿದೆ. ಮಧ್ಯಂತರ ತಡೆ ಇಲ್ಲ:ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ನಡೆಸಿದ್ದಾರೆಂಬ ಆರೋಪಕ್ಕೆ ಸಂಬಂಧ ಕ್ರಿಮಿನಲ್ ಪ್ರಕರಣದ ಆರೋಪ ಎದುರಿಸುತ್ತಿರುವ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸೋಮಣ್ಣ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಶುಕ್ರವಾರ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.
ವಿಚಾರಣಾ ಕೋರ್ಟ್ ಹಾಜರಾತಿ ವಿನಾಯ್ತಿ ನೀಡುವಂತೆ ಕೋರಿದ್ದ ಅರ್ಜಿದಾರರ ಮನವಿಗೆ ತಳ್ಳಿಹಾಕಿದ ನ್ಯಾಯಾಲಯ 'ಅರ್ಜಿದಾರರ ಮನವಿಯನ್ನು ಸಕಾರಣಗಳ ಆಧಾರದಲ್ಲಿ
ಪರಿಗಣಿಸಿ ಎಂದು ಜನಪ್ರತಿನಿಧಿಗಳ ಕೋರ್ಟ್ಗೆ ಸೂಚಿಸಿದೆ. ವಿಚಾರಣೆಯನ್ನು ಬೇಸಿಗೆ ರಜೆ ನಂತರಕ್ಕೆ ಮುಂದೂಡಲಾಗಿದೆ.
ಏ.16ಕ್ಕೆ ಸಮನ್ಸ್ ಜಾರಿ: ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಮತ್ತು ಭಷ್ಟಾಚಾರ ಆರೋಪ ಸಂಬಂಧ ಜನಪ್ರತಿನಿಗಳ ಕೋರ್ಟ್ಗೆ ಖುದ್ದು ಹಾಜರಾಗಲು ವಸತಿ ಸಚಿವ ವಿ. ಸೋಮಣ್ಣ ಅವರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳವಿಚಾರಣೆಯ ವಿಶೇಷ ನ್ಯಾಯಾಲಯ ಏ.16ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೋಮಣ್ಣ ಅವರಿಗೆ ಆದೇಶಿಸಿದ್ದಾರೆ.
ಅಲ್ಲದೆ, ಪ್ರಕರಣದ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್ಪಿ ಸಲ್ಲಿಸಿರುವ ವರದಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ಸೋಮಣ್ಣ ಮತ್ತು ಅವರ ಕುಟುಂಬದ ಸದಸ್ಯರ ಆದಾಯ ಮೂಲಗಳು ದಿನೇ ದಿನೇ ಹೇಗೆ ವೃದ್ಧಿಯಾಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆದಿಲ್ಲ. ಎಲ್ಲವನ್ನೂ ಮುಚ್ಚಿಡಲಾಗಿದೆ ಎಂಬ ಆರೋಪವನ್ನು ನ್ಯಾಯಾಲಯ ಪುರಸ್ಕರಿಸಿದೆ.
ಮೂಡಲಪಾಳ್ಯದ ರಾಮಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನಲ್ಲಿಸೋಮಣ್ಣ ಮತ್ತು ಕುಟುಂಬದವರು ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ. ಮಾರ್ಗದರ್ಶಿ ಮೌಲ್ಯಕ್ಕಿಂತಲೂ ಕಡಿಮೆ ದರದಲ್ಲಿ ಜಮೀನು ಖರೀದಿಸಿದ್ದಾರೆ. ಎಸಿಬಿ ತನಿಖೆಯಲ್ಲಿ ಕೇವಲ ಅವರ ವೈಯಕ್ತಿಕ ಮತ್ತು ಖಾಸಗಿ ಸಾಲಗಳ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಸೋಮಣ್ಣ ಸಾರ್ವಜನಿಕ ಸೇವಕರಾಗಿ ಅಕ್ರಮ ಸಂಪಾದನೆ ಮಾಡುವ ಮೂಲಕ ಕ್ರಿಮಿನಲ್ ದುರ್ನಡತೆ ತೋರಿದ್ದಾರೆ. ಆದ್ದರಿಂದ, ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಕಲಂ 13(1)(ಬಿ)(ಡಿ) ಮತ್ತು (ಇ) ಕಲಂ 13(2)ರ ಅಡಿ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.












Click it and Unblock the Notifications