ಅನರ್ಹಗೊಂಡ ಶಾಸಕರಿಂದ ಸುಪ್ರೀಂಕೋರ್ಟ್ಗೆ ಮೊರೆ
ಬೆಂಗಳೂರು, ಜುಲೈ 25 : ಕರ್ನಾಟಕ ರಾಜಕೀಯದಲ್ಲಿ ಗುರುವಾರ ಮಹತ್ವದ ಬೆಳವಣಿಗೆಯಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದರು.
ಗುರುವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕಮಟಳ್ಳಿ (ಅಥಣಿ) ಮತ್ತು ಆರ್. ಶಂಕರ್ (ರಾಣೆಬೆನ್ನೂರು) ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದರು.
ಈ ಮೂವರು ಶಾಸಕರು 15ನೇ ವಿಧಾನಸಭೆ ಅವಧಿ ಮುಗಿಯುವ ತನಕ ಚುನಾವಣಾ ಕಣಕ್ಕಿಳಿಯುವಂತಿಲ್ಲ. ಮೂವರು ಶಾಸಕರು ಸ್ಪೀಕರ್ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ತೀರ್ಮಾನವನ್ನು ಕೈಗೊಂಡಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ನೀಡಿದ ಆದೇಶವನ್ನು ಪ್ರಶ್ನಿಸಿ ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕಮಟಳ್ಳಿ (ಅಥಣಿ) ಮತ್ತು ಆರ್. ಶಂಕರ್ (ರಾಣೆಬೆನ್ನೂರು) ಶುಕ್ರವಾರವೇ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ.
ಈಗಾಗಲೇ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಶಾಸಕರು ಮತ್ತೆ ಅರ್ಜಿ ಸಲ್ಲಿಸಿದರೆ ಅದರ ವಿಚಾರಣೆಯೂ ಆ ಅರ್ಜಿಗಳ ಜೊತೆಗೆ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, "13 ಅತೃಪ್ತ ಶಾಸಕರ ರಾಜೀನಾಮೆ ವಿಚಾರವನ್ನು ಶೀಘ್ರವಾಗಿ ಇತ್ಯರ್ಥ ಮಾಡಲಾಗುವುದು" ಎಂದು ಹೇಳಿದರು.












Click it and Unblock the Notifications