ಜಿಲ್ಲಾ ಉಸ್ತುವಾರಿ ಖಾತೆ ಹಂಚಿಕೆ: 20 ಲೋಕಸಭಾ ಸೀಟುಗಳ ಗೆಲುವಿಗೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್- ಇನ್ಸೈಡ್ ರಿಪೋರ್ಟ್
ಬೆಂಗಳೂರು, ಜೂನ್ 10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಉಸ್ತುವಾರಿ ಸಚಿವರ ಆಯ್ಕೆಯು ಪಂಚಾಯತಿ ಹಾಗೂ ಲೋಕಸಭೆ ಚುನಾವಣೆಗೆ ಮುನ್ನುಡಿ ಬರೆದಂತಿದೆ. ವಿಧಾನಸಭೆ ಚುನಾವಣೆಯ ಗೆಲುವನ್ನು ಬಳಸಿಕೊಂಡು 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಕನಿಷ್ಠ 20 ಸ್ಥಾನಗಳನ್ನು ತಂದುಕೊಡುವ ಗುರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ ಎನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಪ್ರತಿ ಸಚಿವರಿಗೆ ಟಾಸ್ಕ್ ಅನ್ನು ನೀಡಿದೆ ಎಂದೂ ಹೇಳಲಾಗುತ್ತಿದೆ. ಸಚಿವರ ಹುದ್ದೆಗಳ ಬಗ್ಗೆ ನಿರ್ಧರಿಸಲು ನಡೆದ ಸಭೆಯಲ್ಲಿ, ಹೈಕಮಾಂಡ್ ಲೋಕಸಭಾ ಚುನಾವಣೆಯ ಗುರಿಯನ್ನು ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಚಿವರಿಗೆ ನೀಡಿದೆ. ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆ ಮತ್ತು ಬಿಬಿಎಂಪಿ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಗೆಲುವಿನತ್ತ ದೃಷ್ಟಿ ನೆಟ್ಟಿದೆ.

ರಾಜ್ಯ ಸರ್ಕಾರ ಐದು ಖಾತರಿಗಳ ಅನುಷ್ಠಾನಕ್ಕೆ ದಿನಾಂಕಗಳನ್ನು ಪ್ರಕಟಿಸಿದೆ. ಪ್ರತಿಪಕ್ಷಗಳ ಟೀಕೆಗಳನ್ನು ಎದುರಿಸಲು ಜಿಲ್ಲೆಯ ಸಚಿವರು ತಮ್ಮಲ್ಲಿರುವ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಂಡು ಯಶಸ್ವಿಯಾಗಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ತ್ರೈಮಾಸಿಕ ಪರಿಶೀಲನಾ ಸಭೆಗಳನ್ನು ನಡೆಸಬೇಕು. ಸಚಿವರು ತಮ್ಮ ಜಿಲ್ಲೆಗಳಿಗೆ ಪ್ರವಾಸ ಮಾಡಬೇಕು. ಖಾತರಿಗಳ ಬಗೆಗಿನ ಪ್ರತಿಕ್ರಿಯೆಗಾಗಿ ಜನರೊಂದಿಗೆ ಸಂವಹನ ನಡೆಸಬೇಕು ಎಂದು ಅವರು ಸೂಚಿಸಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳೆರಡನ್ನೂ ಮರಳಿ ಗೆಲ್ಲುವ ಉತ್ಸಾಹದಲ್ಲಿರುವ ಸಿದ್ದರಾಮಯ್ಯ ಅವರು ತಮ್ಮ ಆಪ್ತರಾದ ಹೆಚ್.ಸಿ.ಮಹದೇವಪ್ಪ ಮತ್ತು ಕೆ.ವೆಂಕಟೇಶ್ ಅವರ ಮೇಲೆ ವಿಶ್ವಾಸವಿಟ್ಟಿದ್ದಾರೆ.
ರಾಜಕೀಯ ಸವಾಲುಗಳ ಹೊರತಾಗಿ ಮಹದೇವಪ್ಪ ಅವರು ದಸರಾ, ತಲಕಾಡಿನಲ್ಲಿ ಪಂಚಲಿಂಗ ದರ್ಶನ, ಟಿ ನರಸೀಪುರದಲ್ಲಿ ಕುಂಭಮೇಳಕ್ಕೆ ಸಿದ್ಧತೆ ನಡೆಸಬೇಕಿದೆ.
ಸಿದ್ದರಾಮಯ್ಯನವರು ಎರಡು ಸ್ಥಾನಗಳನ್ನು ಗೆದ್ದು ಹೈಕಮಾಂಡ್ ನಿರೀಕ್ಷೆಯನ್ನು ಈಡೇರಿಸಿದರೆ ಉನ್ನತ ಹುದ್ದೆಯಲ್ಲಿ ಅವರ ಸ್ಥಾನ ಗಟ್ಟಿಯಾಗಬಹುದು. ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ನೀಡಲಿದ್ದಾರೆ.
15 ಶಾಸಕರನ್ನು ಹೊಂದಿರುವ ಬಿಜೆಪಿಯ ಬೆಂಗಳೂರಿನ ಕೋಟೆಯನ್ನು ಭೇದಿಸುವ ಕೆಲಸವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದಾರೆ.
ಸ್ಥಳೀಯ ಶಾಸಕರ ಅಪೇಕ್ಷೆಯಂತೆ ಬೈರತಿ ಸುರೇಶ್ ಅವರಿಗೆ ಕೋಲಾರ ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಕೋಲಾರ ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದರು ಎಂದು ಹೇಳಲಾಗುತ್ತಿದೆ.












Click it and Unblock the Notifications