ಕಾಂಗ್ರೆಸ್ ಸೋಲಿಗೆ ಉಸ್ತುವಾರಿ ಸಚಿವರು ಕಾರಣವಂತೆ
ಬೆಂಗಳೂರು, ಮೇ 29 : ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಸಾಧನೆ ಮಾಡುವಲ್ಲಿ ವಿಫಲವಾಗಿರುವುದಕ್ಕೆ ಸಚಿವರು ಕಾರಣ ಎಂಬ ಅಭಿಪ್ರಾಯ ಆತ್ಮಾವಲೋಕನ ಸಭೆಯಲ್ಲಿ ವ್ಯಕ್ತವಾಗಿದೆ. ಇಂತಹ ಸಚಿವರ ವಿರುದ್ಧ ಸಿಎಂ ಮತ್ತು ವರಿಷ್ಠರಿಗೆ ದೂರು ನೀಡಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಆತ್ಮಾವಲೋಕನ ಸಭೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಗೆ ಗೈರು ಹಾಜರಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಆದ್ದರಿಂದ ಸೋಲು ಉಂಟಾಯಿತು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಚುನಾವಣೆ ಸೋಲನ್ನು ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರು ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಹೆಗಲಿಗೆ ಹೊರಿಸುವ ಪ್ರಯತ್ನ ಮಾಡಿದರು. ಇಂತಹ ಸಚಿವರ ಕಾರ್ಯವೈಖರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಾಯಕರಿಗೆ ದೂರು ನೀಡಬೇಕು ಎಂದು ಜಿಲ್ಲಾಧ್ಯಕ್ಷರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಒತ್ತಾಯಿಸಿದರು. [ಕರ್ನಾಟಕದಲ್ಲಿ ಗೆದ್ದವರು, ಸೋತವರು]
ಟಿಕೆಟ್ ಹಂಚಿಕೆ : ಕೆಲವು ಕ್ಷೇತ್ರಗಳಲ್ಲಿ ಜಿಲ್ಲಾ ಸಮಿತಿ ನೀಡಿದ ವರದಿ ಆಧರಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ. ಆದ್ದರಿಂದ ಸೋಲು ಅನುಭವಿಸಬೇಕಾಯಿತು. ವರದಿಯನ್ನು ಪರಿಗಣಿಸುವುದಿಲ್ಲ ಎನ್ನುವುದಾದರೆ ನಾವು ಏಕೆ ವರದಿ ನೀಡಬೇಕು? ಎಂದು ಜಿಲ್ಲಾಧ್ಯಕ್ಷರು ಸಭೆಯಲ್ಲಿ ಪ್ರಶ್ನಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿಲ್ಲ ಎಂದು ಕೆಲವರು ದೂರಿದರು.
ಸಚಿವರ ಬಗ್ಗೆ ವರದಿ : ಸಚಿವರ ಕಾರ್ಯ ವೈಖರಿ ಬಗ್ಗೆ ಜಲ್ಲಾಧ್ಯಕ್ಷರ ದೂರು ಆಲಿಸಿದ ಪರಮೇಶ್ವರ್, ಸಚಿವರ ಧೋರಣೆ ಬಗ್ಗೆ ಹೈಕಮಾಂಡ್ ನಾಯಕರಿಗೆ ವರದಿ ನೀಡೋಣ. ಪಕ್ಷದ ಹಿನ್ನಡೆ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್ ನಡಿಗೆ ಜನರ ಕಡೆಗೆ ಮಾದರಿಯಲ್ಲಿ ವಿಶೇಷ ಆಂದೋಲನವನ್ನು ಆಯೋಜಿಸಿ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸೋಣ ಎಂದು ತೀರ್ಮಾನಿಸಲಾಯಿತು.
ಮಂಡ್ಯ ನಾಯಕರಿಗೆ ಎಚ್ಚರಿಕೆ : ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ರಮ್ಯಾ ಸೋಲಿನ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪತ್ರಿಕಾಗೋಷ್ಠಿ ನಡೆಸಿದ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಕ್ಷದ ವೇದಿಕೆಯಲ್ಲಿ ಸಮಸ್ಯೆ ಬಗೆಹರಿಸಬೇಕು, ಮಾಧ್ಯಮಗಳ ಮುಂದೆ ಹೋಗಬಾರದು ಎಂದು ಸೂಚನೆ ನೀಡಲಾಯಿತು. [ರಮ್ಯಾ ಸೋಲಿಗೆ ಯಾರು ಕಾರಣ ಗೊತ್ತೆ?]
ಸಿಎಂ ಗೈರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಗೆ ಗೈರು ಹಾಜರಾಗಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಕಳೆದ ಮೂರು ದಿನಗಳಿಂದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗಾಗಿ ಬುಧವಾರ ನಡೆಯಲಿದ್ದ ಸಭೆಯನ್ನು ಗುರುವಾರಕ್ಕೆ ಮುಂದಾಡಲಾಗಿತ್ತು. ಆದರೆ, ಗುರುವಾರವೂ ಸಿಎಂ ಗೈರಾಗಿದ್ದರು.