ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ; ಕಾರ್ಯಗಳು
ಬೆಂಗಳೂರು, ಜೂನ್ 20; ಕರ್ನಾಟಕದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. 31 ಜಿಲ್ಲೆಗಳಿಗೂ ಸಹ ಐಎಎಸ್ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿರುತ್ತಾರೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಎಸ್. ಕಲ್ಪನ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ-ಕಾರ್ಯಾಧ್ಯಯನ) ಆದೇಶ ಹೊರಡಿಸಿದ್ದಾರೆ.

ಈ ಆದೇಶದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿದಾಗ ಪರಿಶೀಲಿಸಬೇಕಾದ ಅಂಶಗಳನ್ನು ಸಹ ವಿವರಿಸಲಾಗಿದೆ. ಜಿಲ್ಲಾವಾರು ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಲಾಗಿದೆ.
ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.
ಕಾರ್ಯಗಳು ಏನು?; ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಈ ಕೆಳಕಂಡ ಪ್ರಮುಖ ಅಂಶಗಳನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸಲು ಕೋರಿದೆ.
* ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿರುವ ಕುರಿತು.
* ಸರ್ಕಾರವು ನೂತನವಾಗಿ ಘೋಷಣೆ ಮಾಡುವ ಯೋಜನೆಗಳ ಅನುಷ್ಠಾನದ ಪರಿಶೀಲನೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಸುವ್ಯವಸ್ಥೆಗೊಳಿಸುವುದು ಹಾಗೂ ಬಾಡಿಗೆ ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯತೆಗನುಗುಣವಾಗಿ ನಿವೇಶನಗಳನ್ನು ಒದಗಿಸಲು ಕ್ರಮವಹಿಸುವುದು.
* ಆರೋಗ್ಯ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಲು ಆಗಾಗ ಜಿಲ್ಲಾಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವುದು, ವೈದ್ಯರ ಅಥವಾ ಇತರೆ ನೌಕರರ ಕೊರತೆ ಇದ್ದಲ್ಲಿ ಅದನ್ನು ಸರಿಪಡಿಸುವ ಕುರಿತು ಕ್ರಮಕೈಗೊಳ್ಳುವುದು.
* ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶಾಲೆ, ಕಾಲೇಜು ಹಾಗೂ ಐಟಿಐಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅಧ್ಯಯಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವುದು.
* ಶಾಲಾ ಕಟ್ಟಡ ದುರಸ್ತಿ, ಹೊಸ ಕಟ್ಟಡಗಳ ನಿರ್ಮಾಣ ಇತ್ಯಾದಿ ಕಾಮಗಾರಿಗಳನ್ನು ಪರಿಶೀಲಿಸುವುದು.
* ಸ್ವಂತ ಕಟ್ಟಡ ಇಲ್ಲದಿರುವ ಅಂಗನವಾಡಿಗಳಿಗೆ ನಿವೇಶನವನ್ನು ಒದಗಿಸಲು ಹಾಗೂ ನಿರ್ಮಾಣ ಹಂತದಲ್ಲಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪರಿಶೀಲಿಸುವುದು.
* ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಹಾಗೂ ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕಡ್ಡಾಯವಾಗಿ ಪರಿಶೀಲನೆ ನಡೆಸುವುದು.
* ಆಯಾ ವರ್ಷದಲ್ಲಿ ಕನಿಷ್ಠ 2 ಗ್ರಾಮ ಸಭೆಗಳಲ್ಲಿ ಭಾಗವಹಿಸುವುದು.
* ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಇಂಧನ, జల ಸಂಪನ್ಮೂಲ, ಲೋಕೋಪಯೋಗಿ, ಕೃಷಿ, ತೋಟಗಾರಿಕ ಇಲಾಖೆಗಳಲ್ಲಿನ ಪುಮುಖ ಕಾರ್ಯಕ್ರಮಗಳಾದ ಕುಡಿಯುವ ನೀರು, ರಸ್ತೆಗಳು, ವಿದ್ಯುಚ್ಛಕ್ತಿ, ಮೇವು ಲಭ್ಯತೆ, ಬೀಜ ಮತ್ತು ರಸಗೊಬ್ಬರ, ಮಧ್ಯಾಹ್ನದ ಬಿಸಿಯೂಟ, ನರೇಗಾ, ಸಾಮಾಜಿಕ ಭದ್ರತೆಯಡಿ ನೀಡುತ್ತಿರುವ ಪಿಂಚಣಿ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸುವುದು.
* ಜಿಲ್ಲೆಯಲ್ಲಿನ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸಲು ಕ್ರಮವಹಿಸುವುದು.
* ಮೋಜಣಿ ಮತ್ತು ಭೂದಾಖಲೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕಾಗಿ ಸೂಕ್ತ ಪರಿಹಾರಗಳ ಬಗ್ಗೆ ಕ್ರಮವಹಿಸುವುದು.
* ಜಿಲ್ಲೆಗಳಲ್ಲಿನ ವಿವಿಧ ಇಲಾಖೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಕೈಗೊಂಡು ಉಲ್ಲಂಘನೆಗಳಾಗಿದ್ದಲ್ಲಿ ಶಿಸ್ತುಕ್ರಮದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವುದು ಹಾಗೂ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು.
* ವಿಶೇಷ ಘಟಕ ಯೋಜನೆ (SCSP) ಮತ್ತು ಗಿರಿಜನ ಉಪಯೋಜನ (TSP) ಯೋಜನೆಗಳಡಿ ನಿಗಧಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಮತ್ತು ಕಾಮಗಾರಿಗಳನ್ನು ಪರಿಶೀಲಿಸುವುದು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಲ್ಲಿಸುವ ವರದಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ಪರಿಶೀಲಿಸುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.












Click it and Unblock the Notifications