ಕರ್ನಾಟಕದ ಜಿಲ್ಲಾ ಸುದ್ದಿಗಳ ಕ್ವಿಕ್ ಲುಕ್
ಮಂಡ್ಯ, ಅ.28 : ಮಂಡ್ಯ ಜಿಲ್ಲೆಯ ಹೊಳಲು ಗ್ರಾಮದಲ್ಲಿ ಕಾಲರ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಹೊಟೇಲ್ ಮತ್ತು ಬೇಕರಿ ಮುಂತಾದ ಕಡೆ ಗ್ರಾಹಕರಿಗೆ ಕಡ್ಡಾಯವಾಗಿ ಬಿಸಿನೀರು ಒದಗಿಸುವಂತೆ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಜಿಲ್ಲೆಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಶುಚಿತ್ವ ಕಾಪಾಡಬೇಕು. ನೀರು ಸರಬರಾಜು ಮಾಡುವ ಕಡೆಗಳಲ್ಲಿ ಪೈಪ್ಲೈನ್ ಒಡೆದು ಹೋಗಿದ್ದರೆ ತುರ್ತಾಗಿ ಅದನ್ನು ಸರಿಪಡಿಸುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಲರ ರೋಗದ ಬಗ್ಗೆ ಜನರಿನಗೆ ಅರಿವು ಮೂಡಿಲಸಲು ಜಾಥಾ ಏರ್ಪಡಿಸಬೇಕು, ಕರಪತ್ರಗಳನ್ನು ಮುದ್ರಿಸಿ ಹಂಚಬೇಕು ಎಂದು ನಿರ್ದೇಶನ ನೀಡಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಮನೆಮನೆಗೆ ಭೇಟಿ ನೀಡಿ ಕಾಯಿಸಿ ಆರಿಸಿ ನೀರು ಕುಡಿಯುವಂತೆ ಜನರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಆ ಮೂಲಕ ಸ್ವಚ್ಚತಾ ಕಾರ್ಯ, ಶುದ್ಧ ಕುಡಿಯುವ ನೀರು ಸರಬರಾಜು, ಆರೋಗ್ಯಕ್ಕೆ ಸಂಬಂಧಿಸಿದಂತೆ ಜನತೆಗೆ ಅರಿವು ಮೂಡಿಸುವ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ. (ಕರ್ನಾಟಕದ ಇತರ ಜಿಲ್ಲಾ ಸುದ್ದಿಗಳು)
ಕಾಲರ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ
ಮಂಡ್ಯ ಜಿಲ್ಲೆಯ ಹೊಳಲು ಗ್ರಾಮದಲ್ಲಿ ಕಾಲರ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಹೊಟೇಲ್ ಮತ್ತು ಬೇಕರಿ ಮುಂತಾದ ಕಡೆ ಗ್ರಾಹಕರಿಗೆ ಕಡ್ಡಾಯವಾಗಿ ಬಿಸಿನೀರು ಒದಗಿಸುವಂತೆ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಶುಚಿತ್ವ ಕಾಪಾಡಬೇಕು. ನೀರು ಸರಬರಾಜು ಮಾಡುವ ಕಡೆಗಳಲ್ಲಿ ಪೈಪ್ಲೈನ್ ಒಡೆದು ಹೋಗಿದ್ದರೆ ತುರ್ತಾಗಿ ಅದನ್ನು ಸರಿಪಡಿಸುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಸಿಬಿಐ ತಂಡ
ಅಕ್ರಮ ಅದಿರು ರಫ್ತು ಪ್ರಕರಣ ಸಂಬಂಧ ಸಿಬಿಐ ತನಿಖೆ ಆರಂಭಿಸಿದೆ. 50 ಸಾವಿರ ಮೆಟ್ರಿಕ್ ಟನ್'ಗಿಂತಲೂ ಹೆಚ್ಚು ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ 20 ಕಂಪನಿಗಳ ವಿರುದ್ಧದ ಈ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಆದ್ದರಿಂದ ಬಳ್ಳಾರಿಯಲ್ಲಿ ಸಿಬಿಐ ಅಧಿಕಾರಿಗಳ ತಂಡ ವಾಸ್ತವ್ಯ ಹೂಡಿ ತನಿಖೆ ಪ್ರಾರಂಭಿಸಿದೆ. ಬಳ್ಳಾರಿಯ ಹೊಸಪೇಟೆ ಹಾಗೂ ಸಂಡೂರಿನ ವಿವಿಧೆಡೆಗೆ ಭೇಟಿ ಅಧಿಕಾರಿಗಳು ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ. ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸುತ್ತಿರುವ ಹಿನ್ನೆಲೆಯಲ್ಲಿ, ಅಕ್ರಮದಲ್ಲಿ ಭಾಗಿಯಾದ ಗಣಿ ಮಾಲೀಕರಿಗೆ ನಡುಕ ಶುರುವಾಗಿದೆ.
4 ಚಿರತೆಗಳು ಪ್ರತ್ಯಕ್ಷ
ಕೋಲಾರ ತಾಲೂಕಿನ ಧನಮಟ್ನಹಳ್ಳಿ ಗ್ರಾಮದ ಬಳಿಯ ಬೆಟ್ಟದಲ್ಲಿ 4 ಚಿರತೆಗಳು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿವೆ. ಒಂದು ದೊಡ್ಡ ಚಿರತೆ ಮತ್ತು ಮೂರು ಮರಿಗಳು ಬೆಟ್ಟದಲ್ಲಿ ವಾಸ್ತವ್ಯ ಹೂಡಿವೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಕೊತ್ತನೂರು, ಕೆಂಗಟ್ಟಿ, ಅಂತರಗಂಗೆ ಮತ್ತು ಧನಮಟ್ನಹಳ್ಳಿ ಗ್ರಾಮಗಳ ಅರಣ್ಯ ಪ್ರದೇಶದ ಬೆಟ್ಟಗಳಲ್ಲಿ ಚಿರತೆಗಳು ಸಂಚರಿಸುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು ಪೊಲೀಸರ ಭರ್ಜರಿ ಬೇಟೆ
ಮೈಸೂರು ನಗರದ ಪೊಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಿ, 53 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕಾರು, ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ದೇವರಾಜ ಪೊಲೀಸ್ ಠಾಣೆ , ನರಸಿಂಹರಾಜ ಠಾಣೆ, ವಿಜಯನಗರ, ಕುವೆಂಪುನಗರ, ಸರಸ್ವತಿಪುರಂ ಠಾಣೆಗಳ ವ್ಯಾಪ್ತಿಯಲ್ಲಿ 11 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ದೇವರಾಜ ಠಾಣೆ ವ್ಯಾಪ್ತಿಯಲ್ಲಿ ವೃದ್ಧರನ್ನು ವಂಚಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಪ್ರಮುಖ ಆರೋಪಿ ದೀಪಕ್ (26) ಎಂಬಾತನನ್ನು ಬಂಧಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಸಲೀಂ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಚಿರತೆ ಆಕಸ್ಮಿಕ ಸಾವು
ಹಾಸನ ತಾಲೂಕಿನ ಮಾದಾಪುರದ ತೋಟವೊಂದರಲ್ಲಿ ಬೀಡುಬಿಟ್ಟಿದ್ದ ಚಿರತೆ ಸಾವನ್ನಪ್ಪಿದೆ. ಗ್ರಾಮದ ನಿವಾಸಿ ಚಿಕ್ಕೇಗೌಡ ಎಂಬುವರ ತೋಟದಲ್ಲಿ ಭಾನುವಾರ ಬೆಳಗ್ಗೆ ಚಿರತೆ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ಅರಣ್ಯಾಧಿಕಾರಿಗಳು, ಪೊಲೀಸರು ಚಿರತೆ ಸೆರೆಗೆ ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ, ಭಾನುವಾರ ಸಂಜೆ ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಸೋಮವಾರ ಬೆಳಗ್ಗೆ ತೋಟಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಪರಿಶೀಲಿಸಿದಾಗ ಚಿರತೆ ಸಾವನ್ನಪ್ಪಿರುವುದು ತಿಳಿದಿಬಂದಿದೆ.