ಎಲ್ಲ ಬಡ ಕುಟುಂಬಗಳಿಗೆ ಶಾದಿಭಾಗ್ಯ, ಚಿಂತನೆ
ಬೆಂಗಳೂರು, ನ.12 : ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡುವ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ ಬಂಪರ್ ಕೊಡುಗೆ ನೀಡಿದ್ದ ಸರ್ಕಾರ, ಸದ್ಯ ಶಾದಿಭಾಗ್ಯ ಯೋಜನೆಯನ್ನು ಎಲ್ಲ ವರ್ಗಗಳ ಬಿಪಿಎಲ್ ಕಾರ್ಡ್ದಾರರಿಗೆ ವಿಸ್ತರಿಸಲು ಚಿಂತನೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ಯೋಜನೆ ವಿಸ್ತರಿಸುವ ಆಲೋಚನೆ ಇದೆ ಎಂದು ಹೇಳಿದ್ದಾರೆ.
ಮಂಗಳವಾರ ಜನತಾದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಸ್ಲಿಂ, ಕ್ರಿಶ್ಚಿಯನ್, ಜೈನ ಸಮುದಾಯದವರಿಗೆ ಸದ್ಯ ಶಾದಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ಎಲ್ಲಾ ವರ್ಗಗಳ ಕಡುಬಡವರಿಗೂ ಯೋಜನೆ ವಿಸ್ತರಿಸಲು ಚಿಂತನೆ ನಡೆದಿದೆ ಎಂದು ಹೇಳಿದರು. ಅಲ್ಪ ಸಂಖ್ಯಾತ ಸಮುದಾಯಗಳಿಗೆ ಮಾತ್ರ ಶಾದಿಭಾಗ್ಯ ಯೋಜನೆ ಜಾರಿಗೆ ತಂದ ಕ್ರಮ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಎಲ್ಲಾ ವರ್ಗದ ಕುಟುಂಬಗಳಿಗೂ ಯೋಜನೆ ವಿಸ್ತರಿಸುವಂತೆ ಪ್ರತಿಭಟನೆಗಳು ನಡೆದಿದ್ದವು. ಸದ್ಯ ಒತ್ತಡಕ್ಕೆ ಮಣಿದಿರುವ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ. ಇದೇವೇಳೆ ಶಾದಿ ಭಾಗ್ಯ ಯೋಜನೆಯ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವಾದ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದ ಅವರು, ಯಡಿಯೂರಪ್ಪ ಪ್ರಚಾರಕ್ಕಾಗಿ ಹಾಗೂ ರಾಜಕೀಯ ಕಾರಣಕ್ಕಾಗಿ ಧರಣಿ ಕುಳಿತಿದ್ದಾರೆ. ಆದ್ದರಿಂದ ಅವರೊಂದಿಗೆ ಮಾತುಕತೆ ನಡೆಸಲು ಸಂಧಾನಕಾರರನ್ನು ಕಳಿಸಿಲ್ಲ ಎಂದು ಹೇಳಿದರು. (ಕರ್ನಾಟಕದ ಇತರ ಸುದ್ದಿಗಳು)
ಬಿಪಿಎಲ್ ಕಾರ್ಡ್ ದಾರರಿಗೂ ಶಾದಿ ಭಾಗ್ಯ
ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡುವ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ ಬಂಪರ್ ಕೊಡುಗೆ ನೀಡಿದ್ದ ಸರ್ಕಾರ, ಸದ್ಯ `ಶಾದಿಭಾಗ್ಯ` ಯೋಜನೆಯನ್ನು ಎಲ್ಲ ವರ್ಗಗಳ ಬಿಪಿಎಲ್ ಕಾರ್ಡ್ದಾರರಿಗೆ ವಿಸ್ತರಿಸಲು ಚಿಂತನೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ಮುಸ್ಲಿಂ, ಕ್ರಿಶ್ಚಿಯನ್, ಜೈನ ಸಮುದಾಯದವರಿಗೆ ಸದ್ಯ ಶಾದಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ಎಲ್ಲಾ ವರ್ಗಗಳ ಕಡುಬಡವರಿಗೂ ಯೋಜನೆ ವಿಸ್ತರಿಸಲು ಚಿಂತನೆ ನಡೆದಿದೆ ಎಂದು ಹೇಳಿದರು.
ಪ್ರತಿ ತಿಂಗಳ 5ರಂದು ವೇತನ
ಪ್ರತಿ ತಿಂಗಳು 5 ರಂದೇ ಗ್ರಾಮ ಪಂಚಾಯಿತಿ ನೌಕರರ ವೇತನ ನೀಡಲು ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ನೌಕರರ ಸಂಬಳ ಸರಿಯಾದ ಸಮಯಕ್ಕೆ ಆಗುತ್ತಿಲ್ಲ ಎಂಬ ದೂರು ಕೇಳಿ ಬಂದಿದ್ದರಿಂದ ಸರ್ಕಾರ ಈ ನಿರ್ಣಯ ತೆಗೆದುಕೊಂಡಿದೆ. ಸರ್ಕಾರ ಅನುದಾನ ಕೂಡ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ಉಡುಪಿಯಲ್ಲಿ ಅಂಗನವಾಡಿ 1.30ಕ್ಕೆ ಬಂದ್
ಅವೈಜ್ಞಾನಿಕವಾಗಿ ಹೆಚ್ಚಿಸಲಾಗಿರುವ ಅಂಗನವಾಡಿ ಕೇಂದ್ರಗಳ ಕೆಲಸ ಅವಧಿ ಕಡಿಮೆ ಮಾಡಬೇಕು ಎಂದು ಆಗ್ರಹಿಸಿ, ವಿವಿಧ ಸಂಘಟನೆಗಳ ವತಿಯಿಂದ 19ರಂದು ನಡೆಯುವ 'ವಿಧಾನ ಸೌಧ ಚಲೋ' ಕಾರ್ಯಕ್ರಮಕ್ಕೆ ಉಡುಪಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಬೆಂಬಲ ವ್ಯಕ್ತಪಡಿಸಿದೆ. ನ.20ರಿಂದ ಉಡುಪಿ ಜಿಲ್ಲೆಯಲ್ಲಿ ಅಂಗನಾಡಿಗಳನ್ನು ಮಧ್ಯಾಹ್ನ 1.30ಕ್ಕೆ ಬಂದ್ ಮಾಡಲು ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಸಂಘ ನಿರ್ಣಯ ಕೈಗೊಂಡಿದೆ.
ತೆರವು ಕಾರ್ಯಾಚರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಬಾಗಿಲು ವೃತ್ತದ ಬಳಿ ಮಂಗಳವಾರ ತಹಸೀಲ್ದಾರ್ ಕೆ.ಬಿ.ಸಿದ್ದಲಿಂಗಯ್ಯ ನೇತೃತ್ವದಲ್ಲಿ ತಾಲೂಕು ಕಚೇರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಒತ್ತುವರಿ ಮಾಡಿಕೊಂಡಿದ್ದ 9 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆದಿದ್ದಾರೆ. ಬಾಲಸುಬ್ರಹ್ಮಣ್ಯ ಎಂಬುವವರು ಸರ್ವೆ ನಂ.5ರಲ್ಲಿ 8 ಗುಂಟೆ ಸರ್ಕಾರದ ಜಮೀನು, ಮುನಿಶಾಮಪ್ಪ ಎಂಬುವರು ಸರ್ಕಾರಿ ಶಾಲೆಗೆ ಸೇರಿದ 2 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದರು. ಈ ಪ್ರದೇಶದಲ್ಲಿ ಒತ್ತುವರಿಯಾಗಿದ್ದ ಒಟ್ಟು 9 ಗುಂಟೆ ಜಮೀನನ್ನು ವಶಕ್ಕೆ ಪಡೆದಿದ್ದಾರೆ.
ನಮೋ ಜಾಥಾ ಆರಂಭ
ನ.17ರಂದು ನಡೆಯಲಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಭಾಗವಹಿಸುವ ಮೈಸೂರಿನ ಬಿಜೆಪಿ ಕಾರ್ಯಕರ್ತರು ಮೈಸೂರಿನಿಂದ ಇಂದು ಪಾದಯಾತ್ರೆ ಆರಂಭಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಮೂಲಕ ಆಗಮಿಸಿ ನ.17ರಂದು ಸಮಾವೇಶಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಎಸ್.ಎ.ರಾಮದಾಸ್ ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. 500ಕ್ಕೂ ಹೆಚ್ಚು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಶಾಲೆಗೆ ಬೀಗ ಹಾಕಿ ಪ್ರತಿಭಟನೆ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲಾ ಹೋಬಳಿ ಗಂಡ್ರಗಾನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಒಂದು ವಾರದಿಂದ ಶಾಲೆಗೆ ಬರುತ್ತಿಲ್ಲ. ಇದರಿಂದ ಮಕ್ಕಳ ಪಾಠ ಪ್ರವಚನಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಪೋಷಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.