ಲೋಕಾಯುಕ್ತ ದಾಳಿ ಮತ್ತು ಇತರ ಜಿಲ್ಲಾ ಸುದ್ದಿಗಳು
ಬೆಂಗಳೂರು, ಅ.30 : ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಬುಧವಾರ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ದಾವಣಗೆರೆ, ಹುಬ್ಬಳ್ಳಿ, ಗುಲ್ಬರ್ಗಾ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಬುಧವಾರ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಅಕ್ರಮವಾಗಿ ಆಸ್ತಿಗಳಿಸಿದ್ದಾರೆ ಎಂಬ ದೂರಿನ ಅನ್ವಯ ಬುಧವಾರ, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ಪಂಚಾಯಿತಿ ಸಹಾಯಕ ಇಂಜಿನಿಯರ್ ಶ್ರೀನಿವಾಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡು ನಿವೇಶನ, ನಾಲ್ಕು ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಗುಲ್ಬರ್ಗಾ ಜಿಲ್ಲೆಯ ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ವೀರಭದ್ರಪ್ಪ ನಿವಾಸದ ಮೇಲೂ ಬುಧವಾರ ದಾಳಿ ನಡೆದಿದೆ. ವೀರಭದ್ರಪ್ಪ ಅವರಿಗೆ ಸೇರಿದ ಮೂರು ಮನೆ ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದಿರುವ ಲೋಕಾಯುಕ್ತ ಪೊಲೀಸರು, ಆಸ್ತಿಯ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಹುಬ್ಬಳ್ಳಿ ವಾಯುವ್ಯ ಸಾರಿಗೆ ನಿಗಮದ ಮಖ್ಯ ಕಾರ್ಮಿಕ ಅಧಿಕಾರಿ ಶಂಕರಪ್ಪ ಹಳ್ಳಿ ಮನೆಯ ಮೇಲೂ ದಾಳಿ ನಡೆದಿದ್ದು, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪಿರಿಯಾಪಟ್ಟಣದಲ್ಲಿ ಶಾಲಾ ಶಿಕ್ಷಕ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಮನೆ ಮೇಲೆಯೂ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. (ಕರ್ನಾಟಕದ ಇತರ ಜಿಲ್ಲಾ ಸುದ್ದಿಗಳು)

ನಾಲ್ಕ ಕಡೆ ಲೋಕಾಯುಕ್ತ ದಾಳಿ
ಬುಧವಾರ ಲೋಕಾಯುಕ್ತ ಪೊಲೀಸರು ದಾವಣಗೆರೆ, ಹುಬ್ಬಳ್ಳಿ, ಗುಲ್ಬರ್ಗಾ ಮತ್ತು ಮೈಸೂರಿನಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸರ್ಕಾರಿ ನೌಕರರು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪಗಳ ಆಧಾರದ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಪರಮೇಶ್ವರ್ ಗೆ ಡಿಸಿಎಂ ಹುದ್ದೆ ನೀಡಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂಬ ಕೂಗು ಮತ್ತೊಮ್ಮೆ ಕೇಳಿ ಬಂದಿದೆ. ಹೈ ಕಮಾಂಡ್ ನಾಯಕರು ಪರಮೇಶ್ವರ್ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ನಿಡುಮಾಮಿಡಿ ಮಾನವ ಧರ್ಮಪೀಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಒತ್ತಾಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಮೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಭೇಟಿ ನೀಡಿ ಶುಭ ಹಾರೈಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಾ.ಜಿ.ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದು ಸಮಯೋಚಿತವಾದ ನಿರ್ಧಾರ. ಹೈ ಕಮಾಂಡ್ ಈ ಕುರಿತು ಶೀಘ್ರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಬಂಡವಾಳ ಹೂಡಿಕೆಗೆ ಉತ್ತೇಜನ : ಸಿಎಂ
ರಾಜ್ಯದಲ್ಲಿ ಸುಮಾರು 12 ಸಾವಿರ ಎಕರೆಯಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಉತ್ಪಾದನಾ ಬಂಡವಾಳ ಹೂಡಿಕೆ ವಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರಾಷ್ಟ್ರೀಯ ಉತ್ಪಾದನಾ ಬಂಡವಾಳ ಹೂಡಿಕೆ ವಲಯಕ್ಕಾಗಿ 12 ಸಾವಿರ ಎಕರೆ ಸ್ಥಳವಕಾಶ ಗುರುತಿಸಲಾಗಿದೆ. ಕೋಲಾರ, ಗುಲ್ಬರ್ಗಾ, ಧಾರವಾಡ ಜಿಲ್ಲೆ ಗಳಲ್ಲಿ ರಾಷ್ಟ್ರೀಯ ಉತ್ಪಾದನಾ ಬಂಡವಾಳ ಹೂಡಿಕೆ ವಲಯವನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಮುರುಗೇಶ್ ನಿರಾಣಿ ನೇಮಕ
ಗುಜರಾತ್ ನರ್ಮದಾ ಸರೋವರದಲ್ಲಿ ಸಿಎಂ ನರೇಂದ್ರ ಮೋದಿ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 'ಏಕತಾ ಪ್ರತಿಮೆ'ಗೆ ಅಗತ್ಯವಿರುವ ಲೋಹ ಸಂಗ್ರಹಣ ಸಮಿತಿಯನ್ನು ರಾಜ್ಯ ಬಿಜೆಪಿ ರಚಿಸಿದೆ. ಸಮಿತಿಯ ರಾಜ್ಯ ಸಂಚಾಲಕರನ್ನಾಗಿ ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ನೇಮಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲವ್ ಜಿಹಾದ್ ತನಿಖೆಗೆ ಈಶ್ವರಪ್ಪ ಒತ್ತಾಯ
ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿದ್ದು, ಸರ್ಕಾರ ಹಾಗೂ ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ಬುಧವಾರ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರ ನಿಯೋಗದೊಂದಿಗೆ ಜಿಲ್ಲಾ ರಕ್ಷಣಾಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚಳವಾಗುತ್ತಿದ್ದು, ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಮಗಳ ಮೇಲೆಯೇ ತಂದೆಯಿಂದ ಅತ್ಯಾಚಾರ
ಮೈಸೂರು ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಾಮನಹಳ್ಳಿಯಲ್ಲಿ ತಂದೆಯೇ ಮಗಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ವಿಷಯ ತಿಳಿದ ಗ್ರಾಮಸ್ಥರು ಕಾಮುಕನಿಗೆ ಧರ್ಮದೇಟು ನೀಡಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯು ಕೂಲಿ ಕೆಲಸ ಮಾಡುತ್ತಿದ್ದು, ನೆರೆ ರಾಜ್ಯದ ಊಟಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿಗೆ ಮಗಳನ್ನೂ ಕರೆದುಕೊಂಡು ಹೋಗಿದ್ದ ಆತ, ಅಲ್ಲಿಯೂ ಅತ್ಯಾಚಾರ ನಡೆಸಿದ್ದಾನೆ ಎಂದು ಆತನ ಪುತ್ರಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಬಾಲಕಿ ನೀಡಿದ ದೂರಿನ ಮೇರೆಗೆ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.












Click it and Unblock the Notifications