ಚಿತ್ರಗಳು : ಜೆಡಿಎಸ್ ರೆಬಲ್ ಶಾಸಕರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ
ಬೆಂಗಳೂರು, ಜನವರಿ 09 : ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಶಾಸಕರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಇಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದರು.
ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಮಂಗಳವಾರ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಉಪಹಾರ ಸವಿದರು. ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಜೊತೆಗಿದ್ದರು.
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಕಾರಣಕ್ಕೆ ಜೆಡಿಎಸ್ 8 ಶಾಸಕರನ್ನು ಅಮಾನತು ಮಾಡಿತ್ತು. ಈ ಶಾಸಕರ ಪೈಕಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ ಅವರು ಪಕ್ಷಕ್ಕೆ ವಾಪಸ್ ಆಗಿದ್ದಾರೆ. ಏಳು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ರಾಹುಲ್ ಸಮ್ಮುಖದಲ್ಲಿ ಶಾಸಕರು ಕಾಂಗ್ರೆಸ್ ಸೇರಲಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ.
ಅಮಾನತುಗೊಂಡ ಶಾಸಕರು ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ).

ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ರಾಜ್ಯಸಭೆ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ. ಅವರು ಪಕ್ಷ ಸೇರಲಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ' ಎಂದರು.

ರಾಹುಲ್ ಗಾಂಧಿ ತೀರ್ಮಾನಿಸುತ್ತಾರೆ
'ಬಂಡಾಯ ಶಾಸಕರು ಪಕ್ಷ ಸೇರುವ ದಿನಾಂಕದ ಬಗ್ಗೆ ರಾಹುಲ್ ಗಾಂಧಿ ತೀರ್ಮಾನ ಕೈಗೊಳ್ಳುತ್ತಾರೆ. ಅವರಿಗೆ ಟಿಕೆಟ್ ನೀಡುವ ವಿಚಾರದ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಈ ಕ್ಷೇತ್ರದಿಂದಲೇ ಸ್ಪರ್ಧೆ
ಅಖಂಡ ಶ್ರೀನಿವಾಸಮೂರ್ತಿ ಅವರು ಮಾತನಾಡಿ, 'ಪುಲಿಕೇಶಿ ನಗರ ಕ್ಷೇತ್ರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಆ ಬಗ್ಗೆ ಯಾವುದೇ ಗೊಂದಲ ಬೇಡ' ಎಂದು ಹೇಳಿದರು.

ಜಮೀರ್ ಅಹಮದ್ ಖಾನ್ ಜೊತೆಗಿದ್ದರು
ಜೆಡಿಎಸ್ ಬಂಡಾಯ ಶಾಸಕರ ನೇತೃತ್ವ ವಹಿಸಿರುವುದು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್. ಅವರು ಸಹ ಇಂದು ಡಿ.ಕೆ.ಶಿವಕುಮಾರ್ ಜೊತೆ ಇದ್ದರು. ಬಂಡಾಯ ಶಾಸಕರು ಕಾಂಗ್ರೆಸ್ ಸೇರುವ ದಿನಾಂಕ ಇನ್ನೂ ನಿಗದಿಯಾಗಿಲ್ಲ.












Click it and Unblock the Notifications