ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ 2023 ಘೋಷಿಸಿದ ಡಿಕೆಶಿ
ಬೆಂಗಳೂರು, ಜೂನ್ 27: ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ 2023 ಘೋಷಣೆ ಮಾಡಲಾಗಿದೆ. ಇಬ್ಬರು ಸಾಧಕರು ಮತ್ತು ಒಂದು ಸಂಸ್ಥೆಯನ್ನು ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸರ್ಕಾರದ ವತಿಯಿಂದ ಜೂನ್ 27ರಂದು ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ.
ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ 2023 ಘೋಷಣೆ ಮಾಡಿದರು. ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದರು.

ಈ ಬಾರಿಯ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಬಿ. ಎಲ್. ಶಂಕರ್ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಚರ್ಚೆ ಮಾಡಿ ಮೂವರು ಸಾಧಕರ ಆಯ್ಕೆ ಮಾಡಿದೆ. ಈ ಪ್ರಶಸ್ತಿ ಜೊತೆಗೆ 5 ಲಕ್ಷ ನೀಡಲಾಗುತ್ತದೆ ಎಂದು ಡಿ. ಕೆ. ಶಿವಕುಮಾರ್ ಹೇಳಿದರು.
ಸಾಧಕರ ವಿವರಗಳು; ಡಿ. ಕೆ. ಶಿವಕುಮಾರ್, "ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಡಾ. ಮಂಜುನಾಥ್ ಅವರಿಂದ ಕಸಗುಡಿಸುವ ಕೆಲಸಗಾರರವರೆಗೂ ಎಲ್ಲರೂ ಸೇವೆ ಸಲ್ಲಿಸಿದ್ದು, ಹೀಗಾಗಿ ಈ ಸಂಸ್ಥೆಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. 1600 ಬೆಡ್ ಸೌಲಭ್ಯ ಹೊಂದಿರುವ ಆಸ್ಪತ್ರೆಯು ಬಹಳ ಕಡಿಮೆ ದರದಲ್ಲಿ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸೇವೆ ನೀಡುತ್ತಾ ಬಂದಿದೆ" ಎಂದರು.
"ಕಿರಿಯ ವಯಸ್ಸಿನಲ್ಲೇ ಜೇರೋಧ ಎಂಬ ನವೋದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಬೆಳೆದಿರುವ ನಿತಿನ್ ಕಾಮತ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಈ ಸಂಸ್ಥೆಯಿಂದ ಬರುವ ಶೇ 25ರಷ್ಟು ದುಡಿಮೆ ಹಣವನ್ನು ಸಾಮಾಜಿಕ ಸೇವೆಗೆ ಮುಡಿಪಿಟ್ಟಿದ್ದಾರೆ" ಎಂದು ವಿವರಿಸಿದರು.
"ಬೆಂಗಳೂರಿನ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಕೂಡ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅದಿತಿ ಅಶೋಕ್ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 4ನೇ ಸ್ಥಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದರು. ವಿಶ್ವ ಗಾಲ್ಫ್ ಕ್ರೀಡೆಯಲ್ಲಿ ಎತ್ತರದ ಸಾಧನೆ ಮಾಡಿರುವ ಆಟಗಾರ್ತಿ ಅದಿತಿ ಅಶೋಕ್ ಆಗಿದ್ದಾರೆ" ಎಂದರು.
ಈ ಬಾರಿ ಆರೋಗ್ಯ, ಉದ್ದಿಮೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಈ ಮೂವರು ವ್ಯಕ್ತಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಸಾಧಕರಿಗೆ ಮಂಗಳವಾರ ವಿಧಾನಸೌಧದಲ್ಲಿ ನಡೆಯಲಿರುವ 514ನೇ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
"ಕಳೆದ ಸರ್ಕಾರ ಹಾಸನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿತ್ತು. ಅದನ್ನು ಅಡ್ಡಿಪಡಿಸಲು ನಾವು ಇಚ್ಛಿಸುವುದಿಲ್ಲ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿ ನಂತರ ಹಾಸನ ಕಾರ್ಯಕ್ರಮಕ್ಕೆ ತೆರಳುತ್ತೇನೆ" ಎಂದು ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಕೆಂಪೇಗೌಡ ಜಯಂತಿ ಆಚರಣೆ; ಕರ್ನಾಟಕ ಸರ್ಕಾರ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಕೆಂಪೇಗೌಡ ಜಯಂತಿಯನ್ನು ಜೂನ್ 27ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜನೆ ಮಾಡಬೇಕು ಎಂದು ಸೂಚನೆ ನೀಡಿದೆ.
ಈ ಜಯಂತಿ ಆಚರಣೆ ಕಾರ್ಯಕ್ರಮದಂದು ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಸರಿಯಾದ ಸಮಯಕ್ಕೆ ಭಾಗವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಕಾರ್ಯಾಲಯದಲ್ಲಿ ಹಾಗೂ ತಮ್ಮ ಅಧೀನ ಕಾರ್ಯಾಲಯಗಳಲ್ಲಿಯೂ ಜಯಂತಿಯನ್ನು ಆಚರಿಸುವಂತೆ ನಿರ್ದೇಶನ ನೀಡಲಾಗಿದೆ.
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಸರ್ಕಾರದ ವತಿಯಿಂದಲೇ ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಒಪ್ಪಿಗೆ ನೀಡಿದ್ದರು. ಅಲ್ಲದೇ ಕೆಂಪೇಗೌಡ ಪ್ರಾಧಿಕಾರದ ರಚನೆಗೂ ಒಪ್ಪಿಗೂ ನೀಡಿ, ಪ್ರಾಧಿಕಾರಕ್ಕೆ 10 ಕೋಟಿ ರೂ. ಅನುದಾನವನ್ನು ಸಹ ನೀಡಿದ್ದರು.












Click it and Unblock the Notifications