ಡಿಕೆಶಿ ಬಂಧನ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ನಾಳೆ ರಾಮನಗರ ಬಂದ್
ಬೆಂಗಳೂರು, ಸೆಪ್ಟೆಂಬರ್ 03: ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸುತ್ತಿದ್ದಂತೆ ರಾಜ್ಯದ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.
ರಾಮನಗರ, ಕನಕಪುರ, ಚಿತ್ರದುರ್ತ, ಚಿಕ್ಕಮಗಳೂರು, ಬೆಂಗಳೂರು, ನವದೆಹಲಿ ಸೇರಿದಂತೆ ಹಲವು ಕಡೆ ಪ್ರತಿಭಟನೆಗಳು ನಡೆದಿವೆ. ಕೆಲವು ಕಡೆ ಕಲ್ಲು ತೂರಾಟ ಸಹ ನಡೆದಿದೆ.
ಡಿ.ಕೆ.ಶಿವಕುಮಾರ್ ಬಂಧನವನ್ನು ಕೆಪಿಸಿಸಿ ವಿರೋಧಿಸಿದ್ದು, ನಾಳೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ. ನಾಳೆ ರಾಮನಗರ ಬಂದ್ ಗೆ ಸಹ ರಾಮನಗರ ಜಿಲ್ಲಾ ಮುಖಂಡರು ಕರೆ ನೀಡಿದ್ದಾರೆ.

ರಾಮನಗರದಲ್ಲಿ ಬೆಂಗಳೂರು ಹೆದ್ದಾರಿ ತಡೆದು ಕೆಲಕಾಲ ಪ್ರತಿಭಟನೆ ನಡೆದಿದೆ. ಕನಕಪುರದಲ್ಲಿ ಡಿಕೆಶಿ ಬೆಂಬಲಿಗರು ಬಿಜೆಪಿ ಕಚೇರಿಗೆ ನುಗ್ಗುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಗುಂಪನ್ನು ಚದರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರ ವಿರುದ್ಧವೂ ಘೋಷಣೆಗಳನ್ನು ಕೂಗಲಾಗಿದೆ.
ಜೆಡಿಎಸ್ ಸಹ ಡಿ.ಕೆ.ಶಿವಕುಮಾರ್ ಅವರ ಬಂಧನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಜೆಡಿಎಸ್ ಕಾರ್ಯಕರ್ತರೂ ಸಹ ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ.












Click it and Unblock the Notifications