ಕುಮಾರಸ್ವಾಮಿ ಕುಟುಂಬದವರು ಕಲ್ಲು ಹೊಡೆದಿರುವ ಪಟ್ಟಿ ನೀಡಲೇ: ಡಿ ಕೆ ಶಿವಕುಮಾರ್
ಬೆಂಗಳೂರು, ಫೆಬ್ರವರಿ 03: ಕನಕಪುರದಲ್ಲಿ ಕಲ್ಲು ಹೊಡೆಯುವವರನ್ನು ಶಾಸಕರು ಸಂಸದರನ್ನಾಗಿ ಮಾಡಿದರೆ ದೇಶ ಒಡೆಯುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಕನಕಪುರದ ಜನರನ್ನು ಕೇಳಿ. ಅವರು ಅವರ ಮನೆಯವರೂ ಕಲ್ಲು ಹೊಡೆಯುತ್ತಿದ್ದರಲ್ಲ. ಅದರ ಪಟ್ಟಿ ನೀಡಲಾ? ಎಲ್ಲ ಪಟ್ಟಿ ನೀಡಲು ಕಳೆದ ಅಧಿವೇಶನದಲ್ಲಿ ಕದುಕುಳಿತಿದ್ದೆ ಎಂದು ಹೇಳಿದ್ದಾರೆ.
ಕಾರ್ಯಕರ್ತರಿಗೆ ನಿಗಮ ಮಂಡಳಿ ನೇಮಕ ವಿಚಾರವಾಗಿ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು, ಬಜೆಟ್ ತಯಾರಿ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿಗಳು ನಿರತವಾಗಿದ್ದೆವು. ಈ ವಿಚಾರವಾಗಿ ಯಾರಿಗೆ ಯಾವ ನಿರ್ದೇಶನ ನೀಡಬೇಕೋ ನೀಡಿದ್ದೇವೆ ಎಂದು ತಿಳಿಸಿದರು.

14 ಮತ್ತು 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆಯಲ್ಲಿ ಕುಸಿತಕ್ಕೆ ಆಗಿನ ಕಾಂಗ್ರೆಸ್ ಸರ್ಕಾರ ಸರಿಯಾಗಿ ವಿಚಾರ ಮಂಡನೆ ಮಾಡಿಲ್ಲ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಮಾತನಾಡಿ, ನಮ್ಮಿಂದ ತಪ್ಪಾಗಿದ್ದರೆ ಅವರು ಏನು ಮಾಡುತ್ತಿದ್ದರು? ನಮ್ಮ ತಪ್ಪನ್ನು ಸರಿಪಡಿಸಬಹುದಾಗಿತ್ತಲ್ಲವೇ? ಅವರದ್ದು ಡಬಲ್ ಇಂಜಿನ ಸರ್ಕಾರ ಇತ್ತಲ್ಲವೇ. ರಾಜ್ಯಕ್ಕೆ ಬರಬೇಕಾದ ಅನುದಾನ ತರುವುದು ಡಬಲ್ ಇಂಜಿನ್ ಸರ್ಕಾರದ ಜವಾಬ್ದಾರಿ ಆಗಿರಲಿಲ್ಲವೇ? ಆ ಸರ್ಕಾರ ಜನರ ಹಿತಕ್ಕೆ ವಿರುದ್ಧವಾಗಿ ಕೆಲಸ ಮಾಡಿತ್ತು. ನಾವು ಸೂಕ್ತ ದಾಖಲೆಗಳನ್ನು ಸಲ್ಲಿಸಿದ್ದು, ಈಗಲಾದರೂ ಕೇಂದ್ರ ಬಿಜೆಪಿ ಸರ್ಕಾರ ಸರಿಪಡಿಸಲಿ ಎಂದು ಸವಾಲೆಸೆದರು.
ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ ಹೇಳಿಕೆ ಕುರಿತು ಮಾತನಾಡಿ, ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ದೇವೇಗೌಡರ ಸಿದ್ಧಾಂತವನ್ನು ನಾನು ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲಾ ಮಾಡಬೇಕು. ನನಗೆ ವಯಸ್ಸಾದ ಮೇಲೆ ನಮ್ಮ ಮನೆಗಳಲ್ಲಿ ಯಾವೆಲ್ಲಾ ಸಮಸ್ಯೆಗಳು ಬರುತ್ತವೆಯೋ ಗೊತ್ತಿಲ್ಲ. ಇದನೆಲ್ಲಾ ನೋಡಿದರೆ ನನಗೂ ಭಯವಾಗುತ್ತದೆ. ಪರಿಸ್ಥಿತಿ ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗಬೇಕಾಗುವಂತೆ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದು ಹೇಳಿದರು.

ಮೇಕೆದಾಟು ಯೋಜನೆ ವಿಚಾರವಾಗಿ ಮಾತನಾಡಿ, ಮೇಕೆದಾಟು ವಿಚಾರವಾಗಿ ಕರ್ನಾಟಕಕ್ಕೆ ಹೊಸ ಆಯಾಮ ಶುರುವಾಗಿದೆ. ನಿನ್ನೆ ಸಭೆಯಲ್ಲಿ ಮತಗಳನ್ನು ಹಾಕಲಾಗಿದೆ. ತಾಂತ್ರಿಕ ಸಮಿತಿಗೆ ತೀರ್ಮಾನವಾಗಿದೆ. ನಮ್ಮ ನೀರು ನಮ್ಮ ಹಕ್ಕು. ಅದನ್ನು ಬಳಸಿಕೊಂಡು ಅವರ ಪಾಲಿನ ನೀರನ್ನು ಖಂಡಿತವಾಗಿಯೂ ನೀಡುತ್ತೇವೆ. ಈ ವಿಚಾರವಾಗಿ ನಾವು ಅವರಿಗೆ ಮನದಟ್ಟು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡ ಪರಿಸರ ಇಲಾಖೆ ಅನುಮತಿ ನೀಡಿ ಸಹಕಾರ ನೀಡಬೇಕಾಗುತ್ತದೆ. ಎಲ್ಲಾ ಸಂಸದರು ಒಟ್ಟಾಗಿ ಧ್ವನಿ ಎತ್ತಲಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಡಿ.ಕೆ. ಸುರೇಶ್ ಅವರ ಹೇಳಿಕೆ ವಿಚಾರವಾಗಿ ಬಿಜೆಪಿ ನಾಯಕರು ಕ್ಷಮೆಯಾಚನೆಗೆ ಆಗ್ರಹಿಸುತ್ತಿರುವ ಕುರಿತು ಮಾತನಾಡಿ, ನಾನು ಭಾರತೀಯ. ಹುಟ್ಟತ್ತಾ ಭಾರತೀಯನಾಗಿದ್ದೇನೆ. ಸಾಯುವಾಗಲೂ ಭಾರತೀಯನಾಗಿ ಸಾಯುತ್ತೇನೆ. ಭಾರತ ಅಖಂಡ ದೇಶ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಪೂರ್ವದಿಂದ ಪಶ್ಚಿಮದವರೆಗೆ ಭಾರತವೊಂದೆ. ಬಿಜೆಪಿ ಈ ವಿಚಾರ ರಾಜಕೀಯಗೊಳಿಸುತ್ತಿದೆ. ಸಂಸದ ಸುರೇಶ್ ವರು ಬಿಜೆಪಿ ಸರ್ಕಾರದಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿದ್ದಾರೆ.
ಹೀಗೆ ಅನ್ಯಾಯ ಮುಂದುವರಿದರೆ ಮುಂದೆ ಇಂತಹ ಆಲೋಚನೆಗಳು ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಸುರೇಶ್ ಕೂಡ ಭಾರತೀಯ. ಕಾಂಗ್ರೆಸಿಗನಾಗಿದ್ದು ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗಟ್ಟಾಗಿಟ್ಟಿದೆ. ಕಾಂಗ್ರೆಸ್ ಪಕ್ಷ ಅಥವಾ ಕಾಂಗ್ರೆಸ್ ಸರ್ಕಾರಗಳು ದೇಶವನ್ನು ಸಮಾನತೆಯಿಂದ ನೋಡಿದೆ. ಬಿಜೆಪಿಯವರು ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಲಾಗದೇ ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. ರಾಜ್ಯದ 27 ಸಂಸದರು ಒಂದು ದಿನವೂ ಪ್ರಧಾನಮಂತ್ರಿ, ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಿತದ ಬಗ್ಗೆ ಚರ್ಚೆ ಮಾಡಿಲ್ಲ. ಬೊಮ್ಮಾಯಿ ಅವರಾಗಲಿ, ಯಡಿಯೂರಪ್ಪ ಅವರಾಗಲಿ ರಾಜ್ಯದ ಬಗ್ಗೆ ತಮ್ಮ ನಾಯಕರ ಜತೆ ಮಾತನಾಡಿಲ್ಲ. ಅವರು ತಮ್ಮ ಸಮಸ್ಯೆಗಳಲ್ಲೇ ಮುಳುಗಿದ್ದಾರೆ. ಇವರ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯವಾಗಿದೆ ಎಂಬುದನ್ನು ದಾಖಲೆಗಳು ಹೇಳುತ್ತಿವೆ ಎಂದು ಸ್ಪಷ್ಟನೆ ನೀಡಿದರು.












Click it and Unblock the Notifications