ಬಿಜೆಪಿ ಸರ್ಕಾರಕ್ಕೆ 2 ವರ್ಷ; ಸವಾಲು ಹಾಕಿದ ಡಿ. ಕೆ. ಶಿವಕುಮಾರ್
ಬೆಂಗಳೂರು, ಜುಲೈ 26; "ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ, ಜನರ ತೀರ್ಪಿನ ಪ್ರಕಾರ ಹೊಸ ಆಡಳಿತ ಬರಲಿ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸರ್ಕಾರಕ್ಕೆ ಸವಾಲು ಹಾಕಿದರು.
ಕೋವಿಡ್ ಕುರಿತು ರಾಜ್ಯ ಮಟ್ಟದ ಕಾಂಗ್ರೆಸ್ ಮೇಲ್ವಿಚಾರಣಾ ಸಮಿತಿ ವರದಿಯೊಂದನ್ನು ತಯಾರು ಮಾಡಿದೆ. ಈ ವರದಿ ಸ್ವೀಕಾರ ಮಾಡಿದ ಡಿ. ಕೆ. ಶಿವಕುಮಾರ್ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾಯಕತ್ವ ಬದಲಾವಣೆ ಚರ್ಚೆಗಳು ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಮುಖ್ಯಮಂತ್ರಿ ಯಡಿಯೂರಪ್ಪ ಸ್ಥಾನ ಏನಾಗುತ್ತದೋ ಆ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ" ಎಂದರು.

"ನೆರೆ, ಕೋವಿಡ್ ಪರಿಸ್ಥಿತಿಯಲ್ಲಿ ಜನರು ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಜನರನ್ನು ರಕ್ಷಣೆ ಮಾಡಲು ಸರ್ಕಾರ ವಿಫಲವಾಗಿದೆ. ಹೀಗಾಗಿ ಸರ್ಕಾರ ವಿಸರ್ಜಿಸಿ ಜನರ ಮುಂದೆ ಹೋಗೋಣ" ಎಂದು ಸರ್ಕಾರವನ್ನು ಆಗ್ರಹಿಸಿದರು.
ಬಿಜೆಪಿ ಸರ್ಕಾರಕ್ಕೆ 2 ವರ್ಷ; ಕರ್ನಾಟಕದಲ್ಲಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಜುಲೈ 26ಕ್ಕೆ ಎರಡು ವರ್ಷ ಪೂರ್ಣವಾಗಲಿದೆ. ಸೋಮವಾರ ವಿಧಾನಸೌಧದಲ್ಲಿ ಸರ್ಕಾರದ 2 ವರ್ಷಗಳ ಸಾಧನೆಯನ್ನು ತಿಳಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ.
ಇತ್ತ ಸರ್ಕಾರ 2 ವರ್ಷ ಪೂರೈಸಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ, ಹೈಕಮಾಂಡ್ ನಾಯಕರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ ಎಂದು ಯಡಿಯೂರಪ್ಪ ಕಳೆದ ವಾರವೇ ಸ್ಪಷ್ಟಪಡಿಸಿದ್ದಾರೆ. ಆದರೆ ಹೈಕಮಾಂಡ್ ನಾಯಕರು ಇನ್ನೂ ಯಾವುದೇ ಸ್ಪಷ್ಟವಾದ ತೀರ್ಮಾನಕ್ಕೆ ಬಂದಿಲ್ಲ.
ಬೆಂಗಳೂರಿನಲ್ಲಿ ಭಾನುವಾರ ಸಂಜೆ ಮಾತನಾಡಿದ ಯಡಿಯೂರಪ್ಪ, "ಹೈಕಮಾಂಡ್ನಿಂದ ಈ ತನಕ ತಮಗೆ ಯಾವುದೇ ಸಂದೇಶ ಬಂದಿಲ್ಲ. ಇವತ್ತು ರಾತ್ರಿ ಅಥವ ಸೋಮವಾರ ಬೆಳಗ್ಗೆ ಸಂದೇಶ ಬರಬಹುದು. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ" ಎಂದು ಸ್ಪಷ್ಟಪಡಿಸಿದರು.
ಭಾನುವಾರ ಗೋವಾ ಪ್ರವಾಸದಲ್ಲಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಕರ್ನಾಟಕದ ರಾಜಕೀಯದ ಬಗ್ಗೆ ಮಾತನಾಡಿದರು. "ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಯಾವುದೇ ರಾಜಕೀಯ ಬಿಕ್ಕಟ್ಟು ಇಲ್ಲ" ಎಂದು ಹೇಳಿದರು.












Click it and Unblock the Notifications