ಶಾಸಕ ಹೆಚ್.ವೈ ಮೇಟಿ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ; ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಂದೂಡಿಕೆ
ಬೆಂಗಳೂರು, ನವೆಂಬರ್04: ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹಾಗೂ ಮಾಜಿ ಸಚಿವರಾದ ಹೆಚ್.ವೈ ಮೇಟಿ ಇಂದು (ಮಂಗಳವಾರ) ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್ ವೈ ಮೇಟಿ ಅವರ ನಿಧನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇಂದು ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್ ವೈ ಮೇಟಿ ಅವರ ನಿಧನದ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬುಧವಾರ ನಿಗದಿಯಾಗಿದ್ದ 'ನೀರಿನ ಹೆಜ್ಜೆ' ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ಹೆಚ್.ವೈ. ಮೇಟಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರ ನಿಧನದ ಸುದ್ದಿ ಬಹಳ ದುಃಖ ತಂದಿದೆ. ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಮುಖ್ಯಮಂತ್ರಿಗಳು ನನಗೆ ಕರೆ ಮಾಡಿ ಬಾಗಲಕೋಟೆಗೆ ಹೋಗುವ ಬಗ್ಗೆ ಚರ್ಚೆ ಮಾಡಿದರು. ಹೀಗಾಗಿ ಮತ್ತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಮುಂದಿನ ದಿನಾಂಕ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.
ಮೇಟಿ ಅವರು ನನಗೆ ಬಹಳ ಆತ್ಮೀಯರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಯಲ್ಲೇ ನಮ್ಮ ಪಕ್ಷಕ್ಕೆ ಸೇರಿ ಶಾಸಕರಾಗಿ ಹಾಗೂ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಈಗ ಬಿಟಿಡಿಎ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
ಸಿದ್ದರಾಮಯ್ಯ ಸಂತಾಪ
ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.
ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದರು.












Click it and Unblock the Notifications