ಕಾಂಗ್ರೆಸ್-ಜೆಡಿಎಸ್ ಮೈತ್ರಿ : ಡಿ.ಕೆ.ಶಿವಕುಮಾರ್ಗೆ ಯಾವ ಹುದ್ದೆ?
ಬೆಂಗಳೂರು, ಮೇ 20 : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಯಡಿಯೂರಪ್ಪ ಅವರು ಸದನದಲ್ಲಿ ಘೋಷಣೆ ಮಾಡಿದರು. ಬಳಿಕ ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ವಿಜಯದ ಸಂಕೇತ ತೋರಿಸಿದರು.
ಜೆಡಿಎಸ್-ಕಾಂಗ್ರೆಸ್ ಮೈತ್ರಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಡಿ.ಕೆ.ಶಿವಕುಮಾರ್. ಈಗ ಎದ್ದಿರುವ ಪ್ರಶ್ನೆ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗುವ ಹುದ್ದೆ ಯಾವುದು? ಎಂದು. 2018ರ ಚುನಾವಣಾ ಪ್ರಚಾರ ಸಮಿತಿಗೆ ಅವರು ಅಧ್ಯಕ್ಷರಾಗಿದ್ದರು.
ಅಮಿತ್ ಶಾ ಮುಂದೆ 2ನೇ ಬಾರಿ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್!
ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಡಿ.ಕೆ.ಶಿವಕುಮಾರ್ ಅವರು ಕುಮಾರಸ್ವಾಮಿ ಅವರ ಸಂಪುಟದಲ್ಲಿ ಸಚಿವರಾಗಲಿದ್ದಾರೆಯೇ?, ಉಪ ಮುಖ್ಯಮಂತ್ರಿಯಾಗಲಿದ್ದಾರೆಯೇ? ಎಂಬ ಚರ್ಚೆಗಳು ನಡೆಯುತ್ತಿವೆ.
ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ, ಆಮೇಲೆ ನೋಡೋಣ: ಡಿಕೆಶಿ
ಒಂದು ಕಾಲದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜಕೀಯ ಕಡುವೈರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವರಾಗಿ ಮಾಡಲು ಎಚ್.ಡಿ.ದೇವೇಗೌಡ ಒಪ್ಪಿಗೆ ನೀಡಲಿದ್ದಾರೆಯೇ?, ಸ್ವತಃ ಡಿ.ಕೆ.ಶಿವಕುಮಾರ್ ಅವರು ಸಚಿವರಾಗಲು ಒಪ್ಪಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ. ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಬಹುದು ಎಂಬುದು ಹೊಸ ಚರ್ಚೆ...
ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ
ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಹುದ್ದೆ ಕೊಟ್ಟರೆ ಅದನ್ನು ಒಪ್ಪಿಕೊಳ್ಳುವುದು ಕಷ್ಟ. 2013ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು.
ಗುಜರಾತ್, ಮಹಾರಾಷ್ಟ್ರದ ಶಾಸಕರನ್ನು ಕಾಪಾಡಿದ ಬಳಿಕ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಪ್ರಬಲರಾಗಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಂತರ ಡಿ.ಕೆ.ಶಿವಕುಮಾರ್ ಮತ್ತಷ್ಟು ಪ್ರಬಲರಾಗಿದ್ದಾರೆ. ಅವರಿಗೆ ಯಾವ ಹುದ್ದೆ ಎಂಬ ಚರ್ಚೆ ನಡೆದಿದೆ.
ಕೆಪಿಸಿಸಿ ಅಧ್ಯಕ್ಷ ಪಟ್ಟ
ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಬಹುದು. ಈಗಾಗಲೇ ಪರಮೇಶ್ವರ ಅವರು 6 ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಪರಮೇಶ್ವರ ಅವರು ಕುಮಾರಸ್ವಾಮಿ ಸಂಪುಟ ಸೇರಲಿದ್ದು, ಅವರ ಬದಲಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗುವ ಸಾಧ್ಯತೆ ಇದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಹೈಕಮಾಂಡ್ ನಾಯಕರಿಗೆ ಈಗಾಗಲೇ ಈ ಕುರಿತು ಒಂದು ವರದಿ ನೀಡಿದ್ದಾರೆ. ವರದಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಬಹುದು ಎಂದು ಶಿಫಾರಸು ಮಾಡಲಾಗಿದೆ.
ಅಧ್ಯಕ್ಷ ಹುದ್ದೆ ರೇಸ್ನಲ್ಲಿರುವ ನಾಯಕರು
ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಇತರ ನಾಯಕರ ಹೆಸರು ಕೇಳಿಬರುತ್ತಿದೆ. ಕೆ.ಎಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ ಅವರ ಹೆಸರುಗಳಿವೆ. ಆದರೆ, ಪರಮೇಶ್ವರ ಅವರು ಕುಮಾರಸ್ವಾಮಿ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ. ಆದ್ದರಿಂದ, ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವುದು ಕಷ್ಟ.
ಮತ್ತೊಂದು ಕಡೆ ಕೆ.ಎಚ್.ಮುನಿಯಪ್ಪ, ಪರಮೇಶ್ವರ ಅವರು ದಲಿತರು. ಇದರ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಎಸ್.ಆರ್.ಪಾಟೀಲ್ ಅವರ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ಎಸ್.ಆರ್.ಪಾಟೀಲ್ ಲಿಂಗಾಯತ ಸಮುದಾಯಕ್ಕೆ ಸೇರಿದವರು.
ಜಾತಿ ಲೆಕ್ಕಾಚಾರ
ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯದ ಪ್ರಬಲ ನಾಯಕರು. ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡುವ ಹಿಂದೆ ಜಾತಿ ಲೆಕ್ಕಾಚಾರವೂ ಆಡಗಿದೆ. ಮೈಸೂರು, ಮಂಡ್ಯ, ರಾಮನಗರ ಭಾಗದಲ್ಲಿ ಒಕ್ಕಲಿಗರು ಹೆಚ್ಚಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಈ ಭಾಗದಲ್ಲಿ ಪಕ್ಷ ಸಂಘಟನೆ ಮಾಡುವುದು, ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಲೆಕ್ಕಾಚಾರ ಪಕ್ಷದ ಮುಂದಿದೆ.